ದೇವನಹಳ್ಳಿ(ಆ.05): ಭಾರತದ 73ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಗಸ್ಟ್ 15ನೇ ತಾರೀಖಿನಂದು ದೇವನಹಳ್ಳಿ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ತಯಾರಿ ನಡೆಸಿಕೊಳ್ಳಿ. ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರ, ಸ್ಯಾನಿಟೈಸರ್, ಮಾಸ್ಕುಗಳ ಬಳಕೆ ಕಡ್ಡಾಯ ಮಾಡಿ ಎಂದ ಸಂಬಂಧಿಸಿದ ಇಲಾಖೆಗಳಿಗೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸೂಚಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ "74ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಪ್ರಯುಕ್ತ ಪೂರ್ವಭಾವಿ ಸಭೆ ನಡೆಯಿತು. ಈ ಸಭೆಯಲ್ಲಿ ಮಾತಾಡಿದ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ, ಕೊರೋನಾ ವೈರಾಣು ಸೋಂಕು ನಿಯಂತ್ರಣಕ್ಕೆ ಕಳೆದ ನಾಲ್ಕು ತಿಂಗಳುಗಳಿಂದ ಶ್ರಮಿಸುತ್ತಿರುವ ವೈದ್ಯರು, ನರ್ಸ್ಗಳು, ಆರೋಗ್ಯ ಇಲಾಖೆ ಸಹಾಯಕ ಸಿಬ್ಬಂದಿ, ಪೌರ ಕಾರ್ಮಿಕರು, ಆಶಾ ಕಾರ್ಯಕರ್ತೆಯರು, ಪೊಲೀಸ್ ಸಿಬ್ಬಂದಿ ಸೇರಿದಂತೆ ಮೊದಲಾದ ಕೊರೋನಾ ವಾರಿಯರ್ಸ್ಗಳನ್ನು ಗುರುತಿಸಿ ಗೌರವಿಸಲಾಗುವುದು ಎಂದರು.
ದೇಶದಲ್ಲಿ ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡಿರುವ ಹಿನ್ನೆಲೆ ಪ್ರಸಕ್ತ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆ ಕುರಿತು ಕೇಂದ್ರ ಸರ್ಕಾರದ ಗೃಹ ಸಚಿವಾಲಯವು ಕೆಲವು ಮಾರ್ಗಸೂಚಿಗಳನ್ನು ನೀಡಿದೆ. ಅದರನ್ವಯ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರ ಧ್ವಜಾರೋಹಣ, ಭಾಷಣ, ಪರೇಡ್ ಮತ್ತಿತರ ವಿಧಾಯಕ ಕಾರ್ಯಕ್ರಮಗಳು ನಡೆಯಲಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಾಗಿರುವುದರಿಂದ ಈ ಬಾರಿಯ ಕಾರ್ಯಕ್ರಮದಲ್ಲಿ ಶಾಲಾ-ಕಾಲೇಜು ಮಕ್ಕಳು ಭಾಗವಹಿಸುವುದಿಲ್ಲ. ಆಯ್ದ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಆರೋಗ್ಯ ಇಲಾಖೆ, ವೈದ್ಯರು, ನರ್ಸ್ಗಳು, ಪೌರಕಾರ್ಮಿಕರು, ಆಶಾ ಕಾರ್ಯಕರ್ತೆಯರು, ಮತ್ತಿತರ ಸೇವೆಗಳಲ್ಲಿ ತೊಡಗಿಸಿಕೊಂಡಿರುವ ಆಯ್ದ ಕೊರೋನಾ ವಾರಿಯರ್ಸ್ಗಳನ್ನು ಸಾಂಕೇತಿಕವಾಗಿ ಸನ್ಮಾನಿಸಿ ಗೌರವಿಸಲಾಗುವುದು ಎಂದು ಹೇಳಿದರು ಜಿಲ್ಲಾಧಿಕಾರಿ.
ಎಲ್ಲಾ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಲ್ಲಿ ಬೆಳಿಗ್ಗೆ 7:30ಕ್ಕೆ ಧ್ವಜಾರೋಹಣ ನೆರವೇರಿಸಿ, 8:30ಕ್ಕೆ ದೇವನಹಳ್ಳಿ ಕ್ರೀಡಾಂಗಣದಲ್ಲಿ ಸಮಾವೇಶಗೊಳ್ಳಬೇಕು. 9.00 ಗಂಟೆಗೆ ಧ್ವಜಾರೋಹಣ ಕಾರ್ಯಕ್ರಮ ಜರುಗಲಿದೆ. ಪೊಲೀಸ್, ಗೃಹ ರಕ್ಷಕದಳ, ಅರಣ್ಯ ಹಾಗೂ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯಿಂದ ಮಾತ್ರ ಪಥಸಂಚಲನ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಶಾಲಾ-ಕಾಲೇಜುಗಳು ರಜೆ ಇರುವುದರಿಂದ ಈ ಬಾರಿ ವಿದ್ಯಾರ್ಥಿಗಳ ತಂಡದ ಪಥಸಂಚಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಮೊಟಕುಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸರ್ ವ್ಯವಸ್ಥೆ ಮಾಡುವಂತೆ ಆರೋಗ್ಯ ಇಲಾಖೆಗೆ ತಿಳಿಸಿದರಲ್ಲದೆ, ಯಾವುದೇ ಲೋಪದೋಷಗಳಿಲ್ಲದೆ, ಶಿಷ್ಠಾಚಾರದಂತೆ ಜಿಲ್ಲೆಯ ಗಣ್ಯ ವ್ಯಕ್ತಿಗಳನ್ನು ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕೆಂದು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಮಟ್ಟದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ನಡೆಯುವ ದೇವನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜು ಕ್ರೀಡಾಂಗಣದ ಸುತ್ತಮುತ್ತಲಿನ ಪ್ರದೇಶದಲ್ಲಿ ಸಂಚಾರ ದಟ್ಟಣೆಯಾಗದಂತೆ ಹಾಗೂ ಸೂಕ್ತ ಬಿಗಿಬಂದೋಬಸ್ತ್ ಕೈಗೊಳ್ಳುವಂತೆ ಸಂಚಾರಿ ಪೊಲೀಸರಿಗೆ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.
ಕ್ರೀಡಾಂಗಣದಲ್ಲಿ ಸ್ವಚ್ಛತೆ ಕಾಪಾಡುವಂತೆ, ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ, ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ಪುರಸಭೆ ಹಾಗೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ನಿಸರ್ಗ ನಾರಾಯಣಸ್ವಾಮಿ., ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಎಂ.ನಾಗರಾಜ, ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್.ಕೆ.ನಾಯಕ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ