ಬೆಂಗಳೂರು(ಜು.05): ರಾಜ್ಯದಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರಿದಿದೆ. ಈ ಕೋವಿಡ್-19 ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಹೀಗಾಗಿ ಇದರ ನಿಯಂತ್ರಣಕ್ಕೆ ಪುನಃ ಸರ್ಕಾರ ಸಂಡೇ ಲಾಕ್ಡೌನ್ ಮಾಡಲು ನಿರ್ಧಾರ ಮಾಡಿದೆ. ಇಂದಿನಿಂದ ಅಂದರೆ ಜುಲೈ 5ರಿಂದಲೇ ಪ್ರತೀ ಭಾನುವಾರ ರಾಜ್ಯಾದ್ಯಂತ ಲಾಕ್ಡೌನ್ ಮಾಡಲಾಗುತ್ತಿದೆ. ಅದರಂತೆಯೇ ಇಂದು ಭಾನುವಾರ ಸಂಪೂರ್ಣ ಲಾಕ್ಡೌನ್ ಮಾಡಲಾಗಿದೆ. ಅಗತ್ಯ ಸೇವೆ ಹೊರತುಪಡಿಸಿ ಎಲ್ಲವೂ ಸಂಪೂರ್ಣ ಬಂದ್ ಮಾಡಲಾಗಿದೆ. ಹೀಗಾಗಿಯೇ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಸಚಿವ- ಶಾಸಕರ ಇಂದಿನ ಎಲ್ಲಾ ಕಾರ್ಯಕ್ರಮಗಳು ರದ್ದಾಗಿವೆ.
ಹೌದು, ಸಿಎಂ ಬಿ.ಎಸ್ ಯಡಿಯೂರಪ್ಪ ತನ್ನ ಅಧಿಕೃತ ಕಾವೇರಿ ನಿವಾಸದಲ್ಲೇ ಎಲ್ಲಿಗೂ ಹೋಗದೇ ಉಳಿದಿದ್ದಾರೆ. ಇಂದು ಯಾರ ಭೇಟಿಗೂ ಅವಕಾಶ ನೀಡದೇ ಕುಟುಂಬದೊಂದಿಗೆ ಕಾಲ ಕಳೆಯಲಿದ್ದಾರೆ. ಆದ್ದರಿಂದಲೇ ಸಿಎಂ ನಿವಾಸದತ್ತ ಯಾರು ಕೂಡ ಸುಳಿದಿಲ್ಲ ಎನ್ನಲಾಗಿದೆ. ಭದ್ರತಾ ಸಿಬ್ಬಂದಿ ಹೊರತುಪಡಿಸಿ ಇನ್ಯಾರನ್ನು ಭೇಟಿ ಮಾಡದೇ ಮನೆಯಲ್ಲೇ ಇದ್ದಾರೆ ಸಿಎಂ ಯಡಿಯೂರಪ್ಪ.
ಈ ಹಿಂದೆಯೇ ರಾಜ್ಯಾದ್ಯಂತ ಮಾರಕ ಕೊರೋನಾ ವೈರಸ್ ಆರ್ಭಟ ಹೆಚ್ಚಾಗುತ್ತಿದ್ದಂತೆ ಸಿಎಂ ಬಿ.ಎಸ್ ಯಡಿಯೂರಪ್ಪ ರಾಜ್ಯ ಪ್ರವಾಸ ಕೈಬಿಟ್ಟಿದ್ದರು. ಸಿಎಂ ಯಡಿಯೂರಪ್ಪ ರಾಜ್ಯದ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ ಹಲವು ಕಾಮಗಾರಿಗಳಿಗೆ ಚಾಲನೆ ನೀಡಬೇಕಿತ್ತು. ಆದರೆ, ಕೊರೋನಾ ವೈರಸ್ ಭೀತಿಯಿಂದಾಗಿ ಬೆಂಗಳೂರಿನಿಂದಲೇ ಆನ್ಲೈನ್ ಮೂಲಕ ಕಾಮಗಾರಿಗಳಿಗೆ ಚಾಲನೆ ನೀಡಲು ನಿರ್ಧರಿಸಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ