ಬೆಂಗಳೂರು: ಸಾರ್ವಜನಿಕವಾಗಿ ಗಣೇಶ ಹಬ್ಬ ಆಚರಣೆಗೆ (Ganesha Festival Celebration) ಅವಕಾಶ ಕೊಡಬೇಕಾ ಬೇಡ್ವಾ ಎಂಬುದರ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದ್ದು, ನಾಳೆ ಈ ಬಗ್ಗೆ ಸ್ಪಷ್ಟ ಚಿತ್ರಣ ಹೊರಬೀಳಲಿದೆ. ಹೌದು ನಾಳೆ ಗೃಹ ಕಚೇರಿ ಕೃಷ್ಣಾದಲ್ಲಿ ಮಧ್ಯಾಹ್ನ 1ಕ್ಕೆ ತಜ್ಞರು, ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆ ಸಿಎಂ (CM Basavaraja Bommai) ಮಹತ್ವದ ಸಮಾಲೋಚನೆ ನಡೆಸಲಿದ್ದಾರೆ. ಸಾರ್ವಜನಿಕವಾಗಿ ಗಣೇಶೋತ್ಸವಕ್ಕೆ ಅವಕಾಶ ಬೇಕಾ..? ಬೇಡ್ವಾ ಎಂಬುದರ ಬಗ್ಗೆ ಸಲಹೆ ಪಡೆದು, ಮಹತ್ವದ ನಿರ್ಣಯ ಪ್ರಕಟ ಮಾಡಲಿದ್ದಾರೆ.
ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ವಿನಾಯಿತಿ ಸಿಗುವ ನಿರೀಕ್ಷೆ
ಇನ್ನೂ ಕಳೆದ ಬಾರಿಯ ಆಚರಣೆಗಿಂತ ಈ ಬಾರಿ ಹೆಚ್ಚು ವಿನಾಯಿತಿ ನೀಡುವ ನಿರೀಕ್ಷೆ ಇದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗೆ ಮನವಿ ಮಾಡಲಾಗಿದ್ದು, ಕೋವಿಡ್ ಕ್ರಮಗಳೊಂದಿಗೆ ಹೆಚ್ಚು ವಿನಾಯಿತಿ ನೀಡುವ ವಿಶ್ವಾಸ ಇದೆ ಎಂದು ಗೃಹ ಕಚೇರಿ ಕೃಷ್ಣಾದಲ್ಲಿ ತಿಳಿಸಿದ್ದಾರೆ.
ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಿ
ಇಂದು ಗಡಿ ಜಿಲ್ಲೆಗಳಾದ ಚಾಮರಾಜನಗರ, ಹಾಸನ, ಉಡುಪಿ, ದಕ್ಷಿಣ ಕನ್ನಡ, ಕೊಡಗು ಡಿಸಿಗಳು, ಎಸ್ಪಿಗಳ ಜೊತೆ ಸಿಎಂ ಬಸವರಾಜ ಬೊಮ್ಮಾಯಿ ವೀಡಿಯೋ ಕಾನ್ಪೆರೆನ್ಸ್ ಮೂಲಕ ಸಭೆ ನಡೆಸಿದ್ರು. ಸಭೆಯಲ್ಲಿ ಜಿಲ್ಲೆಗಳ ಕೋವಿಡ್ ಪರಿಸ್ಥಿತಿ ಬಗ್ಗೆ ಅವಲೋಕಿಸಿದ ಸಿಎಂ, ಈ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದರು. ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಾಮರಾಜನಗರ ಹಾಗೂ ಹಾಸನ ಜಿಲ್ಲೆಗಳ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲೆಯ ಪಾಸಿಟಿವಿಟಿ ದರ, ಮರಣ ಪ್ರಮಾಣ, ಆಸ್ಪತ್ರೆ ದಾಖಲಾತಿ ವಿವರ, ಲಸಿಕೆ ಕಾರ್ಯಕ್ರಮದ ಪ್ರಗತಿಯ ಮಾಹಿತಿ ಪಡೆದರು.
ಪರೀಕ್ಷೆ ಪ್ರಮಾಣ ಹೆಚ್ಚಿಸುವ ಮೂಲಕ ತಮ್ಮ ಜಿಲ್ಲೆಯ ಪರಿಸ್ಥಿತಿ ಕುರಿತು ತೀವ್ರ ನಿಗಾ ವಹಿಸುವಂತೆ ಅವರು ಜಿಲ್ಲಾಧಿಕಾರಿಗಳಿಗೆ ನಿರ್ದಶನ ನೀಡಿದರು. ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗ ಮತ್ತು ನಗರ ಪ್ರದೇಶದಲ್ಲಿ ಪರೀಕ್ಷೆ ಪ್ರಮಾಣ ಹಾಗೂ ಲಸಿಕೆಯ ಪ್ರಮಾಣ ಹೆಚ್ಚಿಸಲು ಸೂಚಿಸಿದರು. ಈ ಎಲ್ಲ ಜಿಲ್ಲೆಗಳಲ್ಲಿ ಲಸಿಕೆ ಅಭಿಯಾನ ತೀವ್ರಗೊಳಿಸಬೇಕು. ಶೇ. 35 ರಷ್ಟು ಲಸಿಕೆಯ ಪ್ರಮಾಣ ಹೆಚ್ಚಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು. ಗಡಿಯಿಂದ 20 ಕಿ.ಮೀ. ವ್ಯಾಪ್ತಿಯ ಗ್ರಾಮಗಳಲ್ಲಿ ಶೇ. 100 ರಷ್ಟು ಲಸಿಕೆ ಹಾಕಿಸಬೇಕು ಎಂದು ತಿಳಿಸಿದರು.
ಇದನ್ನು ಓದಿ: Ganesha Festival: ಗಣೇಶ ಹಬ್ಬದ ಆಚರಣೆಗೆ ಓಕೆ.. ಆದ್ರೆ ಷರತ್ತು ಇರುತ್ತೆ ಜೋಕೆ..!
ಇನ್ನೂ ಈ ಜಿಲ್ಲೆಗಳಲ್ಲಿ ಗಣೇಶ ಹಬ್ಬ ಆಚರಣೆ ಸಂಬಂಧವೂ ಅಗತ್ಯ ಮಾಹಿತಿಯನ್ನು ಸಿಎಂ ಬೊಮ್ಮಾಯಿ ಅವರು ಪಡೆದರು. ಸಭೆ ನಂತರ ಮಾತಾಡಿದ ಸಿಎಂ ಬೊಮ್ಮಾಯಿ, ಈ ಜಿಲ್ಲೆಗಳಲ್ಲಿನ ಕೋವಿಡ್ ಸ್ಥಿತಿಗತಿ ಬಗ್ಗೆ ಚರ್ಚೆ ನಡೆಸಲಾಗಿದೆ. ಆದರೆ ಹಬ್ಬ ಆಚರಣೆ ಬಗ್ಗೆ ಡಿಸಿಗಳ ಜೊತೆ ಚರ್ಚೆ ಮಾಡಿಲ್ಲ. ಆದರೆ ರಾಜ್ಯದಲ್ಲಿ ಒಟ್ಟಾರೆ ಗಣೇಶ ಹಬ್ಬವನ್ನು ಯಾವ ರೀತಿ ಆಚರಣೆ ಮಾಡಬೇಕು ಎಂದು ನಾಳೆ ಅಂತಿಮವಾದ ನಿರ್ಧಾರ ಕೈಗೊಳ್ಳುವುದಾಗಿ ಸಿಎಂ ತಿಳಿಸಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ