SSLC Exam 2021: ಕೊರೋನಾ ಎರಡನೇ ಅಲೆಗೆ ಬೆಚ್ಚಿ ಬಿದ್ದಿದ್ದ ಕರ್ನಾಟಕ ಸರ್ಕಾರ ದ್ವಿತೀಯ ಪಿಯು ಪರೀಕ್ಷೆಯನ್ನು ರದ್ದುಗೊಳಿಸಿತ್ತು. ಅದರಂತೆ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ರದ್ದು ಮಾಡುತ್ತದೆ ಎಂದು ಚಾತಕ ಪಕ್ಷಿಗಳಂತೆ ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಹೈಕೋರ್ಟ್ ನಿರಾಸೆ ಮಾಡಿದೆ. ಇದೇ ಜುಲೈ 19 ಮತ್ತು 22 ರಂದು ಎರಡು ದಿನಗಳ ಕಾಲ ಪರೀಕ್ಷೆ ನಡೆಯಲಿದೆ.
ಜುಲೈ 19 ಮತ್ತು 22ರಂದು 2020-21ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ಎತ್ತಿ ಹಿಡಿಯಿತು. ಇದರಿಂದ ಸರ್ಕಾರಕ್ಕೆ ಎದುರಾಗಿದ್ದ ಒಂದು ವಿಘ್ನ ಕಳೆದಂತಾಗಿದೆ.
ಕೋವಿಡ್ ಮೂರನೇ ಅಲೆ ಮಕ್ಕಳಿಗೆ ಹೆಚ್ಚು ಪರಿಣಾಮ ಬೀರುತ್ತದೆ ಎನ್ನುವ ಹಿನ್ನೆಲೆಯಲ್ಲಿ ಪರೀಕ್ಷೆ ರದ್ದುಗೊಳಿಸುವಂತೆ ಕೋರಿ ಸಿಂಗ್ರೇಗೌಡ ಎಂಬವರು ಸಲ್ಲಿಸಿದ್ದ ಮನವಿಯನ್ನು ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಹಂಚಾಟೆ ಸಂಜೀವ್ಕುಮಾರ್ ನೇತೃತ್ವದ ವಿಭಾಗೀಯ ಪೀಠ ವಜಾ ಮಾಡಿದೆ.
ಎರಡು ದಿನ ಪರೀಕ್ಷೆ ನಡೆಸಲಾಗುತ್ತಿದ್ದು, ಮುಂಜಾಗ್ರತಾ ಕ್ರಮಕೈಗೊಳ್ಳಲಾಗುವುದು ಎಂಬ ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಅವರ ವಾದವನ್ನು ನ್ಯಾಯಾಲಯ ಪರಿಗಣಿಸಿದೆ. ʼಒಂದು ಕೊಠಡಿಯಲ್ಲಿ 12 ವಿದ್ಯಾರ್ಥಿಗಳು ಮಾತ್ರ ಇರಲಿದ್ದಾರೆ. ಒಂದು ಬೆಂಚಿನಲ್ಲಿ ಒಬ್ಬರೇ ವಿದ್ಯಾರ್ಥಿ ಕುಳಿತು ಪರೀಕ್ಷೆ ಬರೆಯಲಿದ್ದಾರೆ. ಸಾಮಾಜಿಕ ಅಂತರ, ಆರೋಗ್ಯ ತಪಾಸಣೆ ಮತ್ತು ಪ್ಯಾರಾಮೆಡಿಕಲ್ ಸಿಬ್ಬಂದಿಯನ್ನು ನಿಯೋಜಿಸಲಾಗುವುದುʼ ಎಂದು ಅಡ್ವೋಕೇಟ್ ಜನರಲ್ ನಾವದಗಿ ಅವರು ನ್ಯಾಯಾಲಯಕ್ಕೆ ತಿಳಿಸಿದರು.
ರಾಜ್ಯ ಸರ್ಕಾರದ ವಾದವನ್ನು ಒಪ್ಪಿದ ನ್ಯಾಯಾಲಯವು ಸಿಂಗ್ರೇಗೌಡ ಎಂಬವರ ಅರ್ಜಿಯನ್ನು ವಜಾ ಮಾಡಿತು. “ಈ ವಿಚಾರದಲ್ಲಿ ಮಧ್ಯಪ್ರವೇಶಿಸಲು ನ್ಯಾಯಾಲಯ ಬಯಸುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಮಧ್ಯಸ್ಥಗಾರರು ಅನುಸರಿಸಬೇಕಾದ ಸುತ್ತೋಲೆಯ ರೂಪದಲ್ಲಿ ಮಾರ್ಗಸೂಚಿ ಬಿಡುಗಡೆ ಮಾಡುವ ಮೂಲಕ ಪರೀಕ್ಷೆಯನ್ನು ನಡೆಸಲು ರಾಜ್ಯವು ಕಾಳಜಿ ವಹಿಸಿದೆ ಎಂಬುದು ನಮಗೆ ಅರ್ಥವಾಗಿದೆ. ಸರ್ಕಾರ ಹೇಗೆ ಸ್ವೇಚ್ಛೆಯಿಂದ ಪರೀಕ್ಷೆ ನಡೆಸುತ್ತಿದೆ ಎಂಬುದರತ್ತ ಅರ್ಜಿದಾರರು ಬೆರಳು ಮಾಡಿ ತೋರಿಸಿಲ್ಲ. ಹೀಗಾಗಿ, ಅರ್ಜಿಯಲ್ಲಿ ಯಾವುದೇ ಮಹತ್ವ ಕಾಣುತ್ತಿಲ್ಲ. ಇದರಿಂದ ಮನವಿ ವಜಾ ಮಾಡಲಾಗಿದೆʼʼ ಎಂದು ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ.
ಕೆಲವು ಸಂಸ್ಥೆಗಳಲ್ಲಿ ಸರಿಯಾದ ರೀತಿಯಲ್ಲಿ ಆನ್ಲೈನ್ ತರಗತಿಗಳನ್ನು ನಡೆಸಿಲ್ಲ. ಹಲವು ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿಯಲ್ಲಿ ವಿವಿಧ ವಿಷಯಗಳನ್ನು ಅರ್ಥೈಸಿಕೊಳ್ಳಲು ಕಷ್ಟವಾಗಿದೆ ಎಂದು ಅರ್ಜಿದಾರರು ಮನವಿಯಲ್ಲಿ ವಿವರಿಸಿದ್ದರು. ಗ್ರಾಮೀಣ ಪ್ರದೇಶದಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ತರಗತಿ ನಡೆಸಲು ವ್ಯವಸ್ಥೆ ಇಲ್ಲ. ಕೆಲವು ಪ್ರದೇಶಗಳಲ್ಲಿ ಒಂದೇ ಒಂದು ತರಗತಿ ನಡೆಸಿಲ್ಲ. ಹೀಗಾಗಿ, ಈ ಸಂದರ್ಭದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವುದು ಸೂಕ್ತವಲ್ಲ ಎಂದು ವಾದಿಸಲಾಗಿತ್ತು.
ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಗೊಳಿಸಿ, ಎಸ್ಎಸ್ಎಲ್ಸಿ ಮತ್ತು ಪ್ರಥಮ ಪಿಯುಸಿ ಅಂಕಗಳನ್ನು ಆಧರಿಸಿ ದ್ವಿತೀಯ ಪಿಯುಸಿಯ ಎಲ್ಲಾ ವಿದ್ಯಾರ್ಥಿಗಳನ್ನು ಪಾಸು ಮಾಡುವ ನಿರ್ಧಾರ ಕೈಗೊಂಡಿದ್ದ ರಾಜ್ಯ ಸರ್ಕಾರದ ನಿಲುವಿನ ಹಿನ್ನೆಲೆಯಲ್ಲಿ ಈ ಮನವಿಗೆ ಹೆಚ್ಚಿನ ಮಹತ್ವ ಬಂದಿತ್ತು.
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಪಾಸು ಮಾಡಲು ಅನುಸರಿಸಿದ ಮಾನದಂಡವನ್ನೇ ಅನುಸರಿಸಿ ಪೂರ್ವಸಿದ್ಧತಾ ಪರೀಕ್ಷೆ ಅಥವಾ 9ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಆಧರಿಸಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳನ್ನು ಪಾಸು ಮಾಡಬೇಕು ಎಂದು ಮನವಿ ಮಾಡಲಾಗಿತ್ತು.
1 ರಿಂದ 18 ವಯಸ್ಸಿನ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗಿಲ್ಲ. ರಾಜ್ಯದಲ್ಲಿ ಡೆಲ್ಟಾ ಪ್ಲಸ್ ವೈರಾಣು ಪತ್ತೆಯಾಗಿದೆ. ಈ ಸಂದರ್ಭದಲ್ಲಿ ಪರೀಕ್ಷೆಯ ನೆಪದಲ್ಲಿ ಮಕ್ಕಳನ್ನು ಅಪಾಯಕ್ಕೆ ದೂಡವುದು ಒಳ್ಳೆಯದಲ್ಲ ಎಂದು ಅರ್ಜಿದಾರರು ವಾದಿಸಿದ್ದರು.
ಇದನ್ನೂ ಓದಿ: ZyCoV-D Vaccine - ಮಕ್ಕಳಿಗೆ ಕೋವಿಡ್ ಲಸಿಕೆ: ಅನುಮೋದನೆ ದೊರತೆರೆ ಮುಂದಿನ ತಿಂಗಳೇ ಸರಬರಾಜು
ʼಹೆಚ್ಚಿನ ಪೋಷಕರು ಒಂದೇ ಮಗುವನ್ನು ಹೊಂದಿರುತ್ತಾರೆ. ಆ ಮಗುವಿಗೆ ಏನಾದರೂ ಆದರೆ ಆ ಮಗುವಿನ ಜೀವವನ್ನು ಸರ್ಕಾರ ಮರಳಿ ನೀಡುವುದೇ? ಇದನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷೆ ರದ್ದುಗೊಳಿಸುವುದು ಅಗತ್ಯʼ ಎಂದು ಕೋರಲಾಗಿತ್ತು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ