ಬೆಂಗಳೂರು(ಜೂ.19): ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಲೇಡಿ ಪೊಲೀಸ್ ಕಾನ್ಸ್ಟೇಬಲ್ ಗಂಡನಿಗೆ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದೆ. ಇದರಿಂದ ಸಿಎಂ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿ ಮತ್ತು ಹಿರಿಯ ಅಧಿಕಾರಿಗಳಿಗೆ ಕೊರೋನಾ ಭೀತಿ ಶುರುವಾಗಿದೆ.
ಇತ್ತೀಚೆಗಷ್ಟೇ ಈ ಲೇಡಿ ಕಾನ್ಸ್ಟೇಬಲ್ ಸಿಎಂ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಅಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಿ.ಎಸ್ ಯಡಿಯೂರಪ್ಪ ಸ್ಮಾರ್ಟ್ ಆ್ಯಪ್ ಯೋಜನೆಯಡಿ ಕಾರವಾನ್ ಪ್ರವಾಸೋದ್ಯಮದ ಉತ್ತೇಜನಕ್ಕಾಗಿ ಅಭಿವೃದ್ಧಿಪಡಿಸಿದ ಹೊಸ ಕಾರವಾನ್ಗಳಿಗೆ ಗ್ರೀನ್ ಸಿಗ್ನಲ್ ತೋರುವ ಮೂಲಕ ಚಾಲನೆ ನೀಡಿದ್ದರು. ಈ ಕಾರ್ಯಕ್ರಮದಲ್ಲಿ ಈ ಲೇಡಿ ಕಾನ್ಸ್ಟೇಬಲ್ ಕಾರ್ಯ ನಿರ್ವಹಿಸಿದ್ದರು. ಇದೀಗ ಈಕೆ ಗಂಡನಿಗೆ ಕೊರೋನಾ ಕಾಣಿಸಿಕೊಂಡಿದೆ. ಹಾಗಾಗಿ ಈಕೆಗೂ ಕೋವಿಡ್-19 ಟೆಸ್ಟ್ ಮಾಡಲಾಗಿದ್ದು, ಇನ್ನೇನು ವರದಿ ಬರಬೇಕಿದೆ.
ಸಿಎಂ ಕಚೇರಿ ಸಿಬ್ಬಂದಿ ಸಂಬಂಧಿಗೆ ಕೋವಿಡ್-19 ಬಂದಿರುವುದು ಹಿರಿಯ ಸಚಿವರು, ಅಧಿಕಾರಿಗಳು, ಸಿಬ್ಬಂದಿಗೂ ಭೀತಿ ಸೃಷ್ಟಿಸಿದೆ. ಈಗಾಗಲೇ ಲೇಡಿ ಕಾನ್ಸ್ಟೇಬಲ್ ಗಂಡನಿಗೆ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜತೆಗೆ ಈಕೆಯೊಂದಿಗೆ ಕೆಲಸ ಮಾಡಿದ ಎಲ್ಲರಿಗೂ ಕೋವಿಡ್-19 ಪರೀಕ್ಷೆ ಮಾಡಿಸುವಂತೆ ಸೂಚಿಸಲಾಗಿದೆ.
ಇದನ್ನೂ ಓದಿ: ದೇಶದಲ್ಲಿ ದಿನೇದಿನೇ ದುಪ್ಪಟ್ಟಾಗುತ್ತಿರುವ ಕೊರೋನಾ: ಒಂದೇ ದಿನ 13,586 ಹೊಸ ಕೇಸ್ ಪತ್ತೆ
ಜೂನ್ 17ನೇ ತಾರೀಕಿನಂದು ಗೃಹ ಕಚೇರಿ ಕೃಷ್ಣಾಗೆ ಭೇಟಿ ನೀಡಿದ್ದ ಪ್ರವಾಸೋದ್ಯಮ ಸಚಿವ ಸಿ.ಟಿ ರವಿ, ಡಿಸಿಎಂ ಡಾ. ಸಿ.ಎನ್ ಅಶ್ವತ್ಥ ನಾರಾಯಣ ಮತ್ತಿತರಿಗೆ ಕೊರೋನಾ ಭೀತಿ ಶುರುವಾಗಿದೆ. ಲೇಡಿ ಕಾನ್ಸ್ಟೇಬಲ್ ಅಲ್ಲೇ ಕೆಲಸ ಮಾಡುತ್ತಿದ್ದ ಕಾರಣ ಈ ಎಲ್ಲರಿಗೂ ಭಯ ಆಗುತ್ತಿದೆ ಎನ್ನಲಾಗುತ್ತಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ