ನವದೆಹಲಿ(ಏ.28): ಐಟಿ ಬಿಟಿ ಕಂಪನಿಗಳ ಎಲ್ಲಾ ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡಬೇಕು (ವರ್ಕ್ ಫ್ರಮ್ ಹೋಮ್) ಎಂದು ನೀಡಿದ್ದ ಆದೇಶವನ್ನು ಕಟ್ಟುನಿಟ್ಟಾಗಿ ಜುಲೈ 31ನೇ ತಾರೀಕುವರೆಗೂ ಪಾಲಿಸಲು ಕೇಂದ್ರ ಐಟಿ ಮತ್ತು ದೂರಸಂಪರ್ಕ ಖಾತೆ ಸಚಿವ ರವಿಶಂಕರ್ ಪ್ರಸಾದ್ ಪ್ರಕಟಿಸಿದ್ದಾರೆ. ಕೊರೋನಾ ಲಾಕ್ಡೌನ್ನಿಂದ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಉಂಟಾದ ಸಮಸ್ಯೆಗಳ ಕುರಿತಂತೆ ಎಲ್ಲಾ ರಾಜ್ಯಗಳ ಮಾಹಿತಿ ತಂತ್ರಜ್ಞಾನ ಸಚಿವರೊಂದಿಗೆ ನಡೆಸಿದ ವೀಡಿಯೋ ಸಂವಾದದ ವೇಳೆ ಹೀಗೆ ರವಿಶಂಕರ್ ಪ್ರಸಾದ್ ಆದೇಶಿಸಿದರು.
ಲಾಕ್ಡೌನ್ ಬಳಿಕ ರಾಜ್ಯದ ಐಟಿ ವಲಯ ಎದುರಿಸುತ್ತಿರುವ ಸವಾಲುಗಳು ಬಗ್ಗೆ ಕೇಂದ್ರ ಸಚಿವರಿಗೆ ವಿವರಿಸಿದ ಉಪಮುಖ್ಯಮಂತ್ರಿ ಡಾ. ಸಿ.ಎನ್ ಅಶ್ವತ್ಥನಾರಾಯಣ ಹೀಗೊಂದು ಪ್ರಸ್ತಾಪವಿತ್ತರು. ರಾಜ್ಯದ ಐಟಿ ವೃತ್ತಿಪರರಿಗೆ ಮುಂದಿನ ವರ್ಷ ಮಾರ್ಚ್ ತಿಂಗಳವರೆಗೂ ಮನೆಯಿಂದ ಕೆಲಸ ಮಾಡಲು ಅವಕಾಶ ಮಾಡಿಕೊಡಿ ಎಂದು ಕೋರಿದರು. ಇದಕ್ಕೆ ಸ್ಪಂದಿಸಿದ ಕೇಂದ್ರ ಸಚಿವರು ಸದ್ಯ ಜುಲೈ 31ರವರೆಗೂ ಮನೆಯಿಂದಲೇ ಕೆಲಸ ಮಾಡಿ ಎಂದರು.
ಇನ್ನು, ಮನೆಯಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಬ್ರಾಡ್ಬ್ಯಾಂಡ್, ಇಂಟರ್ನೆಟ್, ವಿದ್ಯುತ್ ಸಮಸ್ಯೆ ಎದುರಾಗುತ್ತದೆ. ಜತೆಗೆ ಬಹಳಷ್ಟು ಮಂದಿ ಯುವ ಉದ್ಯೋಗಿಗಳು ಊಟದ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದಾರೆ. ಈ ಸಂಬಂಧ ಬೆಸ್ಕಾಂ ಮತ್ತು ಟೆಲಿಕಾಂ ಸಂಸ್ಥೆಗಳ ಜತೆ ಮಾತುಕತೆ ನಡೆಸಲಾಗುವುದು. ಈ ಎಲ್ಲ ಸಮಸ್ಯೆಗಳ ಬಗ್ಗೆ ಗಮನ ಹರಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಇದನ್ನೂ ಓದಿ: ಕೇರಳದಲ್ಲಿಂದು ನಾಲ್ಕು ಮಂದಿಗೆ ಕೊರೋನಾ: ಸೋಂಕಿತರ ಸಂಖ್ಯೆ 485ಕ್ಕೇರಿಕೆ
ಕೋವಿಡ್ ನಂತರ ಆರೋಗ್ಯ ಸೇವೆಯಲ್ಲೂ ತಂತ್ರಜ್ಞಾನದ ಬಳಕೆ ಹೆಚ್ಚಿದೆ. ಆನ್ಲೈನ್ ಆರೋಗ್ಯ ವ್ಯವಸ್ಥೆಗೆ ಹೆಚ್ಚು ಒತ್ತು ನೀಡಲಾಗಿದೆ. ಕರ್ನಾಟಕ ಸೇರಿಂದಂತೆ ಮಹಾರಾಷ್ಟ್ರ, ತಮಿಳುನಾಡು, ತೆಲಂಗಾಣ ಹಾಗೂ ತಮಿಳುನಾಡಿನಲ್ಲಿ ಆನ್ಲೈನ್ ಆರೋಗ್ಯ ಸೇವೆ ಉತ್ತಮ ವಾಗಿದೆ. ಇತರ ರಾಜ್ಯಗಳಲ್ಲೂ ಇದು ವಿಸ್ತರಣೆ ಆಗಬೇಕು ಎಂದರು ರವಿಶಂಕರ್ ಪ್ರಸಾದ್.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ