ಕೊಡಗು: ಪ್ರವಾಹ ಪೀಡಿತ ಗ್ರಾಮಗಳ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ವ್ಯಾಕ್ಸಿನ್ ನೀಡುವಂತೆ ಆಗ್ರಹ
ಈ ಗ್ರಾಮಗಳಲ್ಲಿ ಕಳೆದ ಮೂರು ವರ್ಷಗಳಿಂದ ಪ್ರವಾಹದಲ್ಲಿ ಮನೆ ಕಳೆದುಕೊಂಡಿದ್ದ ಸಾಕಷ್ಟು ಕುಟುಂಬಗಳಿಗೆ ಇಂದಿಗೂ ಬದಲಿ ವಸತಿ ವ್ಯವಸ್ಥೆ ಆಗಿಲ್ಲ. ಹೀಗಾಗಿ ನದಿ ದಂಡೆಯಲ್ಲೇ ಮತ್ತೆ ಶೆಡ್ ಗಳನ್ನು ನಿರ್ಮಿಸಿಕೊಂಡು ಬದುಕು ನಡೆಸುತ್ತಿವೆ.
ಕೊಡಗು; ಜಿಲ್ಲೆಯ ಹತ್ತಾರು ಹಳ್ಳಿಗಳಿಗೆ ಕಳೆದ ಮೂರು ವರ್ಷಗಳಿಂದ ಪ್ರವಾಹ, ಭೂಕುಸಿತದ ಭೀತಿ ತಪ್ಪಿಲ್ಲ. ಈಗಾಗಲೇ ಮಳೆಗಾಲ ಆರಂಭವಾಗಿದ್ದು, ಈ ಬಾರಿಯೂ ಪ್ರವಾಹ ಉದ್ಭವಿಸುವುದಿಲ್ಲ ಎನ್ನೋ ಯಾವ ಖಾತರಿಯೂ ಇಲ್ಲ. ಇದರ ನಡುವೆಯೇ ಕೊವಿಡ್ ಸೋಂಕಿನ ಭೀತಿ ತೀವ್ರವಾಗಿ ಕಾಡುತ್ತಿದೆ. ಹೌದು ಮಳೆ ತೀವ್ರವಾಯಿತ್ತೆಂದರೆ ಬಾಗಮಂಡಲದಿಂದ ಆರಂಭವಾಗಿ ಇತ್ತ ಕಣಿವೆ ಗ್ರಾಮದ ವರೆಗೂ ಕಾವೇರಿ ನದಿ ದಂಡೆಯ 60 ಕ್ಕೂ ಹೆಚ್ಚು ಗ್ರಾಮಗಳು ಪ್ರವಾಹ ಪೀಡಿತವಾಗು ತ್ತವೆ. ವಿರಾಜಪೇಟೆ ತಾಲ್ಲೂಕಿನ ಕರಡಿಗೋಡು, ಗುಹ್ಯ, ಕಕ್ಕಟ್ಟು ಕಾಡು ಹಾಗೆಯೇ ಸೋಮವಾರಪೇಟೆ ತಾಲ್ಲೂಕಿನ ನೆಲ್ಯಹುದಿಕೇರಿ, ಕುಂಬಾರ ಗುಂಡಿ ಬೆಟ್ಟದಕಾಡು, ಬರಡಿ ಸೇರಿದಂತೆ ಹಲವು ಗ್ರಾಮಗಳು ತೀವ್ರ ಸಂಕಷ್ಟಕ್ಕೆ ಸಿಲುಕುತ್ತವೆ.
ಈ ಗ್ರಾಮಗಳಲ್ಲಿ ಕಳೆದ ಮೂರು ವರ್ಷಗಳಿಂದ ಪ್ರವಾಹದಲ್ಲಿ ಮನೆ ಕಳೆದುಕೊಂಡಿದ್ದ ಸಾಕಷ್ಟು ಕುಟುಂಬಗಳಿಗೆ ಇಂದಿಗೂ ಬದಲಿ ವಸತಿ ವ್ಯವಸ್ಥೆ ಆಗಿಲ್ಲ. ಹೀಗಾಗಿ ನದಿ ದಂಡೆಯಲ್ಲೇ ಮತ್ತೆ ಶೆಡ್ ಗಳನ್ನು ನಿರ್ಮಿಸಿಕೊಂಡು ಬದುಕು ನಡೆಸುತ್ತಿವೆ. ಒಂದೊಮ್ಮೆ ಏನಾದ್ರೂ ಈ ಬಾರಿಯೂ ಪ್ರವಾಹ ಎದುರಾಗಿದ್ದೇ ಆದಲ್ಲಿ ಇಂತಹ ಗ್ರಾಮಗಳ ಸಾವಿರಾರು ಕುಟುಂಬಗಳನ್ನು ಕಳೆದ ಮೂರು ವರ್ಷದಂತೆ ಈ ಬಾರಿಯೂ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರ ಮಾಡಬೇಕಾಗಿರುವುದು ಅಗತ್ಯ.
ಹೀಗಾಗಿಯೇ ಜಿಲ್ಲಾಧಿಕಾರಿಯವರು ಈಗಾಗಲೇ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿ ಬಂದಿದ್ದಾರೆ. ಆದರೆ ಜಿಲ್ಲಾಡಳಿತ ಈ ಗ್ರಾಮಗಳ ಜನರನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರ ಮಾಡಿದರೆ ಕೊವಿಡ್ ಸೋಂಕು ತೀವ್ರವಾಗಿ ಹರಡೋದು ಖಚಿತ. ಈಗಾಗಲೇ ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡಿಗೋಡು, ಗುಹ್ಯ, ಕಕ್ಕಟ್ಟು ಕಾಡು ಸೇರಿದಂತೆ ಹಲವು ಗ್ರಾಮಗಳಲ್ಲಿ 200 ಕ್ಕೂ ಹೆಚ್ಚು ಕೊವಿಡ್ ಪಾಸಿಟಿವ್ ಪ್ರಕರಣಗಳಿವೆ.
ಕುಂಬಾರಗುಂಡಿ, ನೆಲ್ಯಹುದಿಕೇರಿ ಸೇರಿದಂತೆ ಹಲವು ಗ್ರಾಮಗಳಲ್ಲಿಯೂ ಇಂದಿಗೂ ಸಾಕಷ್ಟು ಕೊವಿಡ್ ಪಾಸಿಟಿವ್ ಪ್ರಕರಣಗಳಿದ್ದು, ಮನೆಗಳನ್ನು ಸೀಲ್ ಡೌನ್ ಮಾಡಲಾಗಿದೆ. ಸ್ಥಿತಿ ಹೀಗಿರುವಾಗ ಪ್ರವಾಹ ಎದುರಾಗುತ್ತಿದ್ದಂತೆ ಕಾಳಜಿ ಕೇಂದ್ರಗಳಿಗೆ ಜನರನ್ನು ಸ್ಥಳಾಂತರಿಸಿದ್ದೇ ಆದಲ್ಲಿ ಕೊವಿಡ್ ಸೋಂಕು ಎಲ್ಲರಿಗೂ ಹರಡೋದು ಸತ್ಯ. ಅಂದರೆ ಒಂದರ್ಥದಲ್ಲಿ ಕಾಳಜಿ ಕೇಂದ್ರಗಳೇ ಕೊವಿಡ್ ಸೋಂಕು ಹರಡುವ ಕೇಂದ್ರಗಳಾಗಿ ಬಿಡುವ ಸಾಧ್ಯತೆಯೇ ಹೆಚ್ಚು.
ಹೀಗಾಗಿ ಜಿಲ್ಲಾಡಳಿತ ಪ್ರವಾಹ ಎದುರಾಗುವ ಎಲ್ಲಾ ಗ್ರಾಮಗಳ 18 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನ್ ಕೊಡುವಂತೆ ಆಗ್ರಹಿಸುತ್ತಿದ್ದಾರೆ. ಹಿಂದಿನ ವರ್ಷಗಳಲ್ಲಾದರೆ ಮಳೆಯ ಪ್ರಮಾಣ ಜಾಸ್ತಿಯಾಗುತ್ತಿದ್ದಂತೆ ನದಿ ಪಾತ್ರದ ಜನರೆಲ್ಲರೂ ತಮ್ಮ ಸಂಬಂಧಿಕರ ಮನೆಗಳಿಗೆ ತೆರಳುತ್ತಿದ್ದೆರು. ಆದರೆ ಈ ಬಾರಿ ಕೊವಿಡ್ ಸೋಂಕು ಇರುವುದರಿಂದ ಸಂಬಂಧಿಕರ ಮನೆಗಳಿಗೂ ಹೋಗುವುದಕ್ಕೆ ಹಿಂದೆ, ಮುಂದೆ ನೋಡಬೇಕಾಗಿದೆ.
ಜೊತೆಗೆ ಸಂಬಂಧಿಕರು ನಮ್ಮನ್ನು ಅವರ ಮನೆಗಳಿಗೆ ಸೇರಿಸಿಕೊಳ್ಳುವುದಕ್ಕೆ ಹಿಂಜರಿಯುತ್ತಾರೆ. ಹೀಗಾಗಿ ತಕ್ಷಣವೇ ಜನರಿಗೆ ವ್ಯಾಕ್ಸಿನ್ ನೀಡಬೇಕು, ಕಾಳಜಿ ಕೇಂದ್ರಗಳನ್ನು ಸುಸಜ್ಜಿತವಾಗಿ ಮಾಡಬೇಕು ಎನ್ನೋದು ಜನರ ಆಗ್ರಹ.
ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.
Published by:MAshok Kumar
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ