ಚಾಮರಾಜನಗರ(ಸೆ. 12): ಜಿಲ್ಲೆಯ ಎಲ್ಲ ಕೆರೆಗಳ ಒತ್ತುವರಿ ತೆರವುಗೊಳಿಸಿ ಅಭಿವೃದ್ಧಿಪಡಿಸಿ ಸಂರಕ್ಷಿಸಲು ಜಿಲ್ಲಾಡಳಿತ ತೀರ್ಮಾನಿಸಿದ್ದು ಇದಕ್ಕಾಗಿ ಕಾಲಬದ್ಧ ಯೋಜನೆ ರೂಪಿಸಿ, ಅನುಷ್ಠಾನಕ್ಕೆ ಮುಂದಾಗಿದೆ. ಜಿಲ್ಲೆಯಲ್ಲಿ ಈಗಾಗಲೇ 267 ಕೆರೆಗಳ ಸರ್ವೆ ಕಾರ್ಯ ಮಾಡಲಾಗಿದೆ. ಪ್ರತಿ ತಿಂಗಳು ಎರಡನೇ ಶನಿವಾರ ಕೆರೆಗಳ ಸರ್ವೆ ಮಾಡಿ 3 ನೇ ಶನಿವಾರ ಕೆರೆಗಳ ಒತ್ತುವರಿ ತೆರವು ಮಾಡುವ ಕಾರ್ಯವನ್ನು ಪ್ರಾರಂಭಿಸಲಾಗಿದೆ. ಕೆರೆಗಳ ಒತ್ತುವರಿ ತೆರವುಗೊಳಿಸುವ ಉದ್ದೇಶಕ್ಕಾಗಿಯೇ ಜಿಲ್ಲಾ ಹಾಗೂ ತಾಲೂಕು ಸಮಿತಿ ಕಾರ್ಯಪಡೆಯನ್ನು ರಚಿಸಲಾಗಿದೆ. ಜಿಲ್ಲಾ ಸಮಿತಿಯಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷರಾಗಿದ್ದು, ಭೂ ದಾಖಲೆಗಳ ಉಪನಿರ್ದೇಶಕರು ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ. ತಾಲೂಕು ಸಮಿತಿಯಲ್ಲಿ ತಹಶೀಲ್ದಾರ್ ಅಧ್ಯಕ್ಷರಾಗಿದ್ದು, ಭೂ ದಾಖಲೆಗಳ ಸಹಾಯಕ ನಿರ್ದೇಶಕರು ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ. ಸಮಿತಿಯು ಪೂರ್ವಭಾವಿ ಸಭೆ ನಡೆಸಿ ಕೆರೆಗಳ ವಿವರ ಮಾಹಿತಿಯನ್ನು ವಿನಿಮಯ ಮಾಡಿಕೊಂಡಿದೆ. ಏಕ ಕಾಲದಲ್ಲಿ ನಗರ ಹಾಗೂ ಗ್ರಾಮೀಣ ಕೆರೆಗಳ ಸರ್ವೆಕಾರ್ಯ ಹಾಗೂ ಒತ್ತುವರಿ ತೆರವು ಕಾರ್ಯ ನಡೆಯಬೇಕಿರುವ ಹಿನ್ನಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳು ಪಂಚಾಯತ್ ರಾಜ್ ಮತ್ತು ಕಂದಾಯ ಇಲಾಖೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಕಂದಾಯ ಅಧಿಕಾರಿಗಳ ಸಭೆ ನಡೆಸಿ ಒತ್ತುವರಿ ತೆರವು ಕಾರ್ಯಚರಣೆಗಾಗಿ ಪ್ರತಿ ತಹಶೀಲ್ದಾರ್ ಗಳು ಹಾಗು ಭೂಮಾಪಕರಿಗೆ ಗುರಿ ನಿಗದಿಪಡಿಸಿದ್ದಾರೆ. ಅಧಿಕಾರಿಗಳ ಸಭೆ ನಡೆಸಿ ಒತ್ತುವರಿ ತೆರವು ಕಾರ್ಯಚರಣೆಗಾಗಿ ಪ್ರತಿ ತಹಶೀಲ್ದಾರ್ ಗಳು ಹಾಗು ಭೂಮಾಪಕರಿಗೆ ಗುರಿ ನಿಗದಿಪಡಿಸಿದ್ದಾರೆ.
ಈಗಾಗಲೇ ಸರ್ವೆ ಮಾಡಿರುವ 267 ಕೆರೆಗಳ ಒತ್ತುವರಿ ತೆರವುಗೊಳಿಸಿ ಕಂದಾಯ ಇಲಾಖೆಯಿಂದ ಗಡಿ ನಿಗದಿ ಮಾಡಿ ಸಂಬಂಧಿಸಿದ ಒಡೆತನದ ಇಲಾಖೆಗೆ ಹಸ್ತಾಂತರಿಸಲಾಗಿದೆ. ಉಳಿದ ಕೆರೆಗಳ ಅಳತೆ, ಒತ್ತುವರಿ ತೆರವು ಕಾರ್ಯ ಮುಂದುವರಿಸಲಾಗಿದೆ.
ಈ ನಡುವೆ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ರೈತ ಮುಖಂಡರು, ಪ್ರತಿನಿಧಿಗಳು ಕೆರೆಗಳ ಒತ್ತುವರಿ ತೆರವುಗೊಳಿಸುವ ಕಾರ್ಯಕ್ಕೆ ಸಹಕರಿಸುವುದಾಗಿ ತಿಳಿಸಿದ್ದರು.
ಇದನ್ನೂ ಓದಿ : ಖಾಸಗಿ ಶಿಕ್ಷಕರಿಗೆ ಸಹಾಯಕ್ಕಾಗಿ ಸರ್ಕಾರದ ಚಿಂತನೆ : ಶಿಕ್ಷಣ ಸಚಿವ ಸುರೇಶ್ ಕುಮಾರ್
ಕರ್ನಾಟಕ ಭೂ ಕಂದಾಯ ಅಧಿನಿಯಮ 1964 ರಂತೆ ಸರ್ಕಾರಿ ಸ್ವತ್ತು ಸಂರಕ್ಷಿಸುವ ಕಾರ್ಯವನ್ನು ಜಿಲ್ಲಾಡಳಿತ ಕೈಗೊಂಡಿದೆ. ಕೆರೆಗಳನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವವರು ಸ್ವಯಂಪ್ರೇರಿತರಾಗಿ ಒತ್ತುವರಿ ತೆರವುಗೊಳಿಸಬೇಕು. ಇಲ್ಲವಾದಲ್ಲಿ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಎಚ್ಚರಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ