‘ಎಲ್ಲಿಗೆ ಹೋದ, ಎಲ್ಲಿಗೆ ಬಂದ ಅನ್ನೋದೇ ಗೊತ್ತಿಲ್ಲ’ - ಸಚಿವ ಸುರೇಶ್ ಕುಮಾರ್ ವಿರುದ್ಧ ಪುಟ್ಟರಂಗಶೆಟ್ಟಿ ವಾಗ್ದಾಳಿ
ನನ್ನ ಕ್ಷೇತ್ರದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ಆದರೆ ನನಗೆ ತಿಳಿಸದೆ ಸಚಿವ ಸುರೇಶ್ ಕುಮಾರ್ ಕಾಮಗಾರಿ ವೀಕ್ಷಣೆಗೆ ಹೋಗಿರುವುದು ಎಷ್ಟು ಸರಿ ಎಂದು ಶಾಸಕ ಪುಟ್ಟರಂಗ ಶೆಟ್ಟಿ ಪ್ರಶ್ನಿಸಿದ್ದಾರೆ.
ಚಾಮರಾಜನಗರ(ಜುಲೈ 18): ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಮನಸ್ಸಿಗೆ ಬಂದಂತೆ ಶಿಷ್ಠಾಚಾರ ಪಾಲನೆ ಮಾಡುತ್ತಿದ್ದಾರೆ. ರಾತ್ರಿ ಹೊರಟ, ಹಗಲಿನಲ್ಲಿ ಬಂದ, ಎಲ್ಲಿಗೆ ಬಂದ ಎಲ್ಲಿಗೆ ಹೋದ ಅನ್ನೋದೇ ಗೊತ್ತಾಗ್ತಾ ಇಲ್ಲ ಎಂದು ಮಾಜಿ ಉಸ್ತುವಾರಿ ಸಚಿವ ಹಾಗೂ ಚಾಮರಾಜನಗರ ಶಾಸಕ ಸಿ. ಪುಟ್ಟರಂಗಶೆಟ್ಟಿ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.
ನನ್ನ ಕ್ಷೇತ್ರದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ಆದರೆ ನನಗೆ ತಿಳಿಸದೆ ಸಚಿವ ಸುರೇಶ್ ಕುಮಾರ್ ಕಾಮಗಾರಿ ವೀಕ್ಷಣೆಗೆ ಹೋಗಿರುವುದು ಎಷ್ಟು ಸರಿ ಎಂದು ಅವರು ಪ್ರಶ್ನಿಸಿದ್ದಾರೆ. ಈಗಾಗಲೇ ನಾಲ್ಕೈದು ಬಾರಿ ಇದೇ ರೀತಿ ಮಾಡಿದ್ದಾರೆ ನಾಲ್ಕೈದು ಬಾರಿಯು ಕ್ಷಮೆ ಕೇಳಿದ್ದಾರೆ. ಆದರೆ ಮಾಡೋದನ್ನೆ ಮಾಡ್ತಾ ಇದ್ರೆ ನಾನು ನೋಡ್ತಾ ಕುಳಿತುಕೊಳ್ಳಬೇಕಾ ಎಂದು ಅವರೂ ಹರಿಹಾಯ್ದಿದ್ದಾರೆ.
ಜುಲೈ15 ರಂದು ಚಾಮರಾಜನಗರಕ್ಕೆ ಭೇಟಿ ನೀಡಿದ್ದ ಸಚಿವ ಸುರೇಶ್ ಕುಮಾರ್, ಕೃಷಿ, ನೀರಾವರಿ ಹಾಗು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಪ್ರತ್ಯೇಕ ಸಭೆ ನಡೆಸಿದ್ದರು. ಈ ಸಭೆಗಳಿಗೆ ತಮ್ಮನ್ನು ಆಹ್ವಾನಿಸದೆ ಕಡೆಗಣಿಸಲಾಗಿದೆ ಎಂದು ಕಾಂಗ್ರೆಸ್ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಆರ್. ನರೇಂದ್ರ ಸೇರಿದಂತೆ ಕಾಂಗ್ರೆಸ್ ಜನಪ್ರತಿನಿಧಿಗಳು ಕೋವಿಡ್ ಪರಿಶೀಲನಾ ಸಭೆಯಲ್ಲಿ ದಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದ್ದರು.
ಈ ಎಲ್ಲಾ ಸಭೆಗಳು ಮುಗಿದ ಬಳಿಕ ಸಚಿವ ಸುರೇಶ್ ಕುಮಾರ್, ಹದಗೆಟ್ಟು ಹೋಗಿರುವ ರಾಷ್ಟ್ರೀಯ ಹೆದ್ದಾರಿ 209ಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಆದರೆ ಪರಿಶೀಲನೆ ವೇಳೆಯಲ್ಲೂ ಸಚಿವ ಸುರೇಶ್ ಕುಮಾರ್ ತಮ್ಮನ್ನು ಆಹ್ವಾನಿಸದೆ ಕಡೆಗಣಿಸಿದ್ದಾರೆ ಎಂದು ಶಾಸಕ ಪುಟ್ಟರಂಗಶೆಟ್ಟಿ ಗರಂ ಆಗಿದ್ದಾರೆ.
ಗುಂಡ್ಲುಪೇಟೆ ಶಾಸಕ ನಿರಂಜನ್ ಕುಮಾರ್ ವಿರುದ್ದವೂ ಕೆಂಡಾಮಂಡಲವಾಗಿರುವ ಮಾಜಿ ಸಚಿವ ಪುಟ್ಟರಂಗಶೆಟ್ಟಿ, ಇಡೀ ಜಿಲ್ಲೆಯಲ್ಲಿ ತಾನೊಬ್ಬನೇ ಶಾಸಕ ಎಂದು ನಿರಂಜನ್ ಕುಮಾರ್ ತಿಳಿದುಕೊಂಡಿದ್ದಾರೆ. ನಮ್ಮನ್ನೆಲ್ಲ ದನ ಕಾಯೋರು ಅನ್ಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ನಾನು ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ಉಡಿಗಾಲ ಕೆರೆ ತುಂಬಿಸುವ ಯೋಜನೆ ಮಾಡಿದ್ದೆ. ಆದರೆ ಯಾರನ್ನೂ ಕರೆಯದೆ ತಮಗೆ ಬೇಕಾದವರನ್ನು ಕರೆದುಕೊಂಡು ಹೋಗಿ ಉದ್ಘಾಟನೆ ಮಾಡಿದ್ದಾರೆ. ಜವಾಬ್ದಾರಿಯಿಂದ ತನ್ನ ಕೆಲಸ ತಾನು ಮಾಡಬೇಕು. ಮುಂದಿನ ದಿನಗಳಲ್ಲಿ ಸರಿಯಾಗಿ ಹೇಳಬೇಕಾಗುತ್ತದೆ ಎಂದು ಹರಿಹಾಯ್ದಿದ್ದಾರೆ
ನಾನು ಕ್ಷೇತ್ರದ ಶಾಸಕ. ನನ್ನ ಅಧ್ಯಕ್ಷತೆಯಲ್ಲಿ ಎಲ್ಲ ಕಾರ್ಯಕ್ರಮಗಳೂ ನಡೆಯಬೇಕು. ಶಿಷ್ಠಾಚಾರದಲ್ಲಿ ಲೋಪವಾಗದಂತೆ ನೋಡಿಕೊಳ್ಳಿ ಎಂದು ಸಚಿವ ಸುರೇಶ್ ಕುಮಾರ್ ಮಾಜಿ ಸಚಿವ ಪುಟ್ಟರಂಗ ಶೆಟ್ಟಿ ಇದೇ ವೇಳೆ ಎಚ್ಚರಿಕೆ ನೀಡಿದ್ದಾರೆ.
ವರದಿ: ಎಸ್.ಎಂ. ನಂದೀಶ್
Published by:Vijayasarthy SN
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ