ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿಸಲು ಸರ್ಕಾರ ಆದೇಶ ನೀಡಿದ್ದು, ರೈತರು ಮತ್ತು ಅಕ್ಕಿ ಗಿರಣಿಗಳ ನೊಂದಣಿ ಹಾಗೂ ಖರೀದಿ ಕೇಂದ್ರ ಪ್ರಾರಂಭಕ್ಕೆ ಅಗತ್ಯ ಸಿದ್ಧತೆಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಂಬಲ ಬೆಲೆಯಲ್ಲಿ ಭತ್ತ ಹಾಗೂ ಶೇಂಗಾ ಖರೀದಿಸುವ ಸಂಬಂಧ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆದಿರುವ ಭತ್ತವನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಸರ್ಕಾರ ಆದೇಶ ನೀಡಿದೆ. ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್ಗೆ ರೂ. 1868 ಹಾಗೂ ಗ್ರೇಡ್-ಎ ಭತ್ತಕ್ಕೆ 1888 ರೂ. ಬೆಂಬಲ ಬೆಲೆ ಘೋಷಿಸಲಾಗಿದೆ. ಸಾಮಾನ್ಯ ಭತ್ತ ಪ್ರತಿ ರೈತರಿಂದ ಗರಿಷ್ಟ 40 ಕ್ವಿಂ. (ಪ್ರತಿ ಎಕರೆಗೆ 16 ಕ್ವಿಂ. ನಂತೆ) ಖರೀದಿಗೆ ಅವಕಾಶ ಕಲ್ಪಿಸಲಾಗಿದೆ.
ಬೆಂಬಲ ಬೆಲೆಯಲ್ಲಿ ಭತ್ತ ಖರೀದಿಸಲು ದಾವಣಗೆರೆ ಜಿಲ್ಲೆಗೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮವನ್ನು ಸಂಗ್ರಹಣಾ ಏಜೆನ್ಸಿಯಾಗಿ ನೇಮಿಸಲಾಗಿದೆ. ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ನೊಂದಣಿ ಮಾಡಿದಂತಹ ರೈತರಿಂದ ಭತ್ತವನ್ನು, ನಿಗದಿತ ಅಕ್ಕಿ ಗಿರಣಿಗಳ ಮೂಲಕ ನೇರವಾಗಿ ಪಡೆದುಕೊಳ್ಳಲು ಸರ್ಕಾರ ತೀರ್ಮಾನಿಸಿದೆ. ಸದ್ಯ ಮಾರುಕಟ್ಟೆಯಲ್ಲಿ ಭತ್ತಕ್ಕೆ ಬೆಂಬಲ ಬೆಲೆಗಿಂತಲೂ ಕಡಿಮೆ ದರ ಇದೆ. ಹೀಗಾಗಿ ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ ಕೇಂದ್ರ ಪ್ರಾರಂಭ ಮಾಡುತ್ತಿರುವುದು ರೈತರಿಗೆ ಅನುಕೂಲವಾಗಲಿದೆ.
ಭತ್ತ ಮಾರಾಟ ಮಾಡಬಯಸುವ ರೈತರು ಕೃಷಿ ಇಲಾಖೆ ಜಾರಿಗೊಳಿಸಿರುವ ಫ್ರೂಟ್ಸ್ ದತ್ತಾಂಶದಲ್ಲಿ ತಮ್ಮ ಹೆಸರು ನೊಂದಣಿ ಮಾಡಿಸಿರಬೇಕು. ಫ್ರೂಟ್ಸ್ ದತ್ತಾಂಶದಲ್ಲಿ ನೊಂದಣಿ ಆಗಿರದ ರೈತರಿಂದ ಭತ್ತ ಖರೀದಿಗೆ ಅವಕಾಶವಿಲ್ಲ. ಇದುವರೆಗೂ ನೊಂದಣಿ ಮಾಡಿಸದೇ ಇರುವ ರೈತರು ಸಮೀಪದ ರೈತ ಸಂಪರ್ಕ ಕೇಂದ್ರಕ್ಕೆ ತೆರಳಿ ನೊಂದಣಿ ಮಾಡಿಸಲು ಅವಕಾಶವಿದೆ. ಸರ್ಕಾರದ ಸೂಚನೆಯಂತೆ ಜಿಲ್ಲೆಯಲ್ಲಿ ಕಾರ್ಯನಿರತವಾಗಿರುವ ಅಕ್ಕಿ ಗಿರಣಿಗಳನ್ನು ಭತ್ತ ಖರೀದಿ ಕಾರ್ಯಕ್ಕೆ ನೊಂದಾಯಿಸಿಕೊಳ್ಳಬೇಕಿದ್ದು, ನ. 20 ರಿಂದ 25 ರವರೆಗೆ ನೊಂದಣಿ ಮಾಡಿಕೊಳ್ಳಬೇಕು.
ಭತ್ತ ಗುಣಮಟ್ಟ ಪರಿಶೀಲನೆಗೆ ಕೃಷಿ ಇಲಾಖೆ ಗ್ರೇಡರ್ಗಳನ್ನು ನಿಯೋಜಿಸಿ, ಇವರಿಗೆ ಸೂಕ್ತ ತರಬೇತಿ ನೀಡಬೇಕು. ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿಸಲು ರೈತರ ನೊಂದಣಿ ಕಾರ್ಯ ನ. 30 ರಿಂದ ಡಿ. 30 ರವರೆಗೆ ನಡೆಯಲಿದೆ. ಭತ್ತ ಮಾರಾಟ ಮಾಡುವ ರೈತರಿಗೆ 03 ದಿನಗಳ ಒಳಗಾಗಿ ಅವರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
16 ಹೋಬಳಿಗಳಲ್ಲಿ ಖರೀದಿ ಕೇಂದ್ರ;
ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿಸುವ ಸಲುವಾಗಿ ಕಳೆದ ಬಾರಿ ತಾಲ್ಲೂಕು ಕೇಂದ್ರಗಳಲ್ಲಿ ಖರೀದಿ ಕೇಂದ್ರ ಪ್ರಾರಂಭಿಸಲಾಗಿತ್ತು. ಆದರೆ ಈ ಬಾರಿ ಜಗಳೂರು ತಾಲ್ಲೂಕು ಹೊರತುಪಡಿಸಿ ಉಳಿದ ಎಲ್ಲ ತಾಲ್ಲೂಕುಗಳ ಒಟ್ಟು 16 ಹೋಬಳಿ ಕೇಂದ್ರಗಳಲ್ಲಿಯೂ ಭತ್ತ ಖರೀದಿ ಕೇಂದ್ರ ತೆರೆಯಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಸಿಬ್ಬಂದಿ ಕೊರತೆಯಾದಲ್ಲಿ ಜಿಲ್ಲಾಡಳಿತದ ವತಿಯಿಂದಲೇ ಸಿಬ್ಬಂದಿ ನಿಯೋಜಿಸಲಾಗುವುದು. ಬೆಂಬಲ ಬೆಲೆಯಲ್ಲಿ ಭತ್ತ ಖರೀದಿಸುವ ಕುರಿತು ಜಿಲ್ಲೆಯಲ್ಲಿ ವ್ಯಾಪಕ ಪ್ರಚಾರ ಆಗಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಇದನ್ನೂ ಓದಿ : ಕೊರೋನಾ ಕಂಟಕ; ಈ ದೀಪಾವಳಿಯಲ್ಲಿ ಪಟಾಕಿಯನ್ನು ಸಿಡಿಸದಂತೆ ಜನರಲ್ಲಿ ಮನವಿ ಮಾಡಿರುವ ರಾಜ್ಯ ಸರ್ಕಾರ
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿನಿರ್ದೇಶಕ ಮಂಟೇಸ್ವಾಮಿ ಅವರು ಮಾತನಾಡಿ, ಸದ್ಯ ಭತ್ತಕ್ಕೆ ಮಾರುಕಟ್ಟೆಯಲ್ಲಿ ಬೆಂಬಲ ಬೆಲೆಗಿಂತಲೂ ಕಡಿಮೆ ಬೆಲೆ ಇದೆ. ಫ್ರೂಟ್ಸ್ ದತ್ತಾಂಶ ವ್ಯವಸ್ಥೆ ಪ್ರಾರಂಭವಾದಾಗಿನಿಂದ, ರೈತರಿಗೆ ತ್ವರಿತವಾಗಿ ಹಣ ಪಾವತಿ ಆಗುತ್ತಿದೆ. ಕಳೆದ ಬಾರಿ ಬೆಂಬಲ ಬೆಲೆ ಯೋಜನೆಯಡಿ ಸುಮಾರು 40 ಸಾವಿರ ಕ್ವಿಂ. ನಷ್ಟು ಭತ್ತ ಖರೀದಿ ಆಗಿತ್ತು. ಎಲ್ಲ ರೈತರಿಗೂ ಹಣ ಪಾವತಿಯಾಗಿದೆ ಎಂದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ