ಚಾಮರಾಜನಗರ( ಸೆಪ್ಟೆಂಬರ್. 27): ಕಾಂಗ್ರೆಸ್ ಪಕ್ಷದವರು ಸರ್ಕಾರದ ಮೇಲೆ ಮಂಡಿಸಿದ ಅವಿಶ್ವಾಸ ನಿರ್ಣಯ ಬಿದ್ದು ಹೋಗಿದ್ದರಿಂದ ಸರ್ಕಾರದ ಮೇಲೆ ವಿಶ್ವಾಸ ಮತ್ತಷ್ಟು ಹೆಚ್ಚಾಗಿದೆ ಎಂದು ಪ್ರಾಥಮಿಕ ಹಾಗು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಚಾಮರಾಜನಗರದಲ್ಲಿ ಮಾತನಾಡಿದ ಅವರ ನಮ್ಮ ಸರ್ಕಾರದ ಮೇಲೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅವಿಶ್ವಾಸ ತಂದ್ದರು, ಅದು ಬಿದ್ದು ಹೋಗಿದೆ, ಸರ್ಕಾರದ ಬಗ್ಗೆ ವಿಶ್ವಾಸ ಹೆಚ್ಚಾಗಿದ್ದು, ಯಡಿಯೂರಪ್ಪನವರೆ ಮುಖ್ಯಮಂತ್ರಿಯಾಗಿ ನೂರಕ್ಕೆ ನೂರರಷ್ಟು ಮುಂದುವರಿಯುತ್ತಾರೆ ಎಂದರು. ನಾಳೆ ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಬಗ್ಗೆ ಪ್ರತಿಕ್ರಿಯಿಸಿದ ಅವರು ಪ್ರತಿಭಟನೆ ಮಾಡುವುದು, ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ಮಾಡುವುದು ಎಲ್ಲರ ಹಕ್ಕು. ಆದರೆ, ಬಂದ್ ಕರೆ ಕೊಟ್ಟಿರುವವರು ಜನಸಾಮಾನ್ಯರಿಗೆ ತೊಂದರೆಯಾಗದಂತೆ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗದಂತೆ ಪ್ರತಿಭಟನೆ ನಡೆಸಲಿ ಎಂದು ಮನವಿ ಮಾಡಿದರು.
ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಹಾಗು ಎಪಿಎಂಸಿ ಕಾಯ್ದೆ ತಿದ್ದುಪಡಿ ಕುರಿತು ರೈತ ಮುಖಂಡರೊಡನೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಈಗಾಗಲೇ ಮಾತುಕತೆ ನಡೆಸಿದ್ದಾರೆ. ಅಗತ್ಯ ಬಿದ್ದರೆ ಮತ್ತೊಮ್ಮೆ ಚರ್ಚೆ ನಡೆಸಲಿದ್ದಾರೆ. ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಮಸೂದೆ ಬಗ್ಗೆ ವಿಧಾನ ಸಭೆಯಲ್ಲಿ ಕಂದಾಯ ಸಚಿವ ಆರ್. ಅಶೋಕ್ ಅವರು ವಿವರವಾಗಿ ಹೇಳಿದ್ದಾರೆ. ಈ ಕಾಯ್ದೆ ತಿದ್ದುಪಡಿ ಅಂಶಗಳನ್ನು ಸ್ವತ: ಕಾಂಗ್ರೆಸ್ ನ ಶಾಸಕ ಆರ್.ವಿ.ದೇಶಪಾಂಡೆ ಒಪ್ಪಿಕೊಂಡಿದ್ದಾರೆ. ಪ್ರೊ.ಎಂ.ಡಿ.ನಂಜುಂಡಸ್ವಾಮಿ ಅವರ ಆಶಯವೂ ಸಹ ಅದೇ ಆಗಿತ್ತು ಎಂಬುದನ್ನು ದಾಖಲೆ ಸಮೇತ ಸಚಿವ ಅಶೋಕ್ ಅವರು ವಿವರಿಸಿದ್ದಾರೆ ಎಂದರು
ಕೊರೋನಾ ಪರಿಸ್ಥಿತಿಯನ್ನು ದುರುಪಯೋಗ ಪಡಿಸಿಕೊಂಡು ತಿದ್ದುಪಡಿ ಮಾಡಿರುವುದಾಗಿ ಕೇಳಿ ಬರುತ್ತಿರುವ ಆರೋಪ ನಿರಾಕರಿಸಿದ ಸಚಿವ ಸುರೇಶ್ ಕುಮಾರ್, 2020 ರ ವೇಳೆಗೆ ರೈತರ ಪ್ರಗತಿ ಹಾಗು ಅವರ ಆದಾಯ ದ್ವಿಗುಣ ಗೊಳಿಸುವುದು ಈ ಕಾಯ್ದೆಗಳ ತಿದ್ದುಪಡಿ ಮಸೂದೆಯ ಉದ್ದೇಶ ಆಗಿದೆ ಎಂದು ಅವರು ಹೇಳಿದರು.
ಇದಕ್ಕೂ ಮೊದಲು ನಗರದ ಜೆ.ಎಚ್ ಪಟೇಲ್ ಸಭಾಂಗಣದಲ್ಲಿ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಸಮಾರಂಭ ಉದ್ಘಾಟಿಸಿದ ಸಚಿವ ಸುರೇಶ್ ಕುಮಾರ್ ಚಾಮರಾಜನಗರ ಜಿಲ್ಲೆ ಪ್ರವಾಸೋದ್ಯಮಕ್ಕೆ ಹೇಳಿ ಮಾಡಿಸಿದಂತಿದೆ. ಪ್ರವಾಸೋದ್ಯಮ ಸಚಿವರು ಅಧಿಕಾರಿಗಳನ್ನು ಭೇಟಿ ಮಾಡಿ ಜಿಲ್ಲೆಯ ಪ್ರವಾಸಿ ತಾಣಗಳ ವೈಶಿಷ್ಟ್ಯತೆಗಳ ಬಗ್ಗೆ ಬಳಿ ವಿವರಿಸಿ ಹೆಚ್ಚಿನ ರೀತಿಯಲ್ಲಿ ಬೆಳಕಿಗೆ ತರುವ ನಿಟ್ಟಿನಲ್ಲಿ ಪ್ರಯತ್ನ ನಡೆಸುತ್ತೇನೆ ಎಂದರು.
ಇದನ್ನೂ ಓದಿ : ಪಕ್ಷದ ಹೊಸ ಜವಾಬ್ದಾರಿ ಹಿನ್ನೆಲೆ, ಸಿ.ಟಿ. ರವಿ ಮಂತ್ರಿಸ್ಥಾನಕ್ಕೆ ರಾಜೀನಾಮೆ ಸಾಧ್ಯತೆ
ರಾಜ್ಯದ ಪ್ರವಾಸೋದ್ಯಮಕ್ಕೆ ಕೊರೋನಾ ಭಾರೀ ಪೆಟ್ಟು ನೀಡಿದೆ ಎಂದ ಅವರು, ಮುಂಬರುವ ದಿನಗಳಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಕೊಡುಗೆ ನೀಡುವಂತಹ ಕ್ರಮಗಳನ್ನು ಕೈಗೊಳ್ಳುವುದಾಗಿ ಹೇಳಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ