ಕೊಡಗು: ಹಾರಂಗಿ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ವರಲಕ್ಷ್ಮೀ ಹಬ್ಬದ ದಿನವಾದ ಶುಕ್ರವಾರ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಹಾರಂಗಿ ಜಲಾಶಯಕ್ಕೆ ಬಾಗಿನ ಅರ್ಪಿಸಿದರು.
ಹಾರಂಗಿ ಜಲಾಶಯದ ಕಾವೇರಿ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಿ, ಜಲಾಶಯಕ್ಕೆ ತೆರಳಿ ಬಾಗಿನ ಅರ್ಪಿಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಶಾಸಕರು, ನಾಡಿನಲ್ಲಿ ಕಾಲ ಕಾಲಕ್ಕೆ ಮಳೆ, ಬೆಳೆಯಾಗಿ ಕೃಷಿಕರಲ್ಲಿ ಸಮೃದ್ಧಿ ತರುವಂತಾಗಲಿ ಎಂದು ಅವರು ಆಶಿಸಿದರು.
ಕೃಷಿ ಬೆಳೆಗಾಗಿ ಬಲದಂಡೆ ಮತ್ತು ಎಡದಂಡೆ ನಾಲೆಗಳಿಗೆ ಒಟ್ಟು 1900 ಕ್ಯುಸೆಕ್ ನೀರನ್ನು ಹರಿಯಬಿಡಲಾಗುತ್ತಿದೆ. ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿ ರಾಜ್ಯ ಹಾಗೂ ತಮಿಳುನಾಡಿಗೆ ಕುಡಿಯಲು ಮತ್ತು ಕೃಷಿಗೆ ನೀರು ಒದಗಿಸುವಂತಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು.
ಕಳೆದ 24 ವರ್ಷಗಳಿಂದ ಬಾಗಿನ ಅರ್ಪಿಸಿಕೊಂಡು ಬರಲಾಗಿದೆ. ಗುರುವಾರ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನಿಸಿದಂತೆ ಹಾಗೂ ನೀರಾವರಿ ಸಚಿವರ ಗಮನಕ್ಕೆ ತಂದು ಶುಕ್ರವಾರ ಬಾಗಿನ ಅರ್ಪಿಸಲಾಗುತ್ತಿದೆ ಎಂದು ಶಾಸಕರು ತಿಳಿಸಿದರು.
ಹಾರಂಗಿ ನದಿ ಪಾತ್ರದಲ್ಲಿ ಹೂಳು ತೆಗೆಯಲು ಈಗಾಗಲೇ ಆರ್ಥಿಕ ಇಲಾಖೆಗೆ 135 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಆರ್ಥಿಕ ಪರಿಸ್ಥಿತಿ ಕುಂಠಿತಗೊಂಡಿರುವುದರಿಂದ ಯಾವಾಗ ಹಣ ಬಿಡುಗಡೆಯಾಗುತ್ತದೆ ಎಂದು ಹೇಳಲು ಬರುವುದಿಲ್ಲ ಎಂದು ಶಾಸಕರು ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ಇದನ್ನು ಓದಿ: ಮೇಲಾಧಿಕಾರಿ ಒತ್ತಡದಿಂದ ಪಿಎಸ್ಐ ಕಿರಣ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ; ಅಂತಿಮ ದರ್ಶನದ ಬಳಿಕ ಎಚ್.ಡಿ.ರೇವಣ್ಣ ಆರೋಪ
ಕುಶಾಲನಗರದ ಕಾವೇರಿ ನದಿ ಬಳಿ ಹೂಳು ತೆಗೆದಿರುವುದರಿಂದ ಈ ಬಾರಿ ಪ್ರವಾಹ ಪರಿಸ್ಥಿತಿ ಉಂಟಾಗುವುದಿಲ್ಲ ಎಂದು ಅಪ್ಪಚ್ಚು ರಂಜನ್ ವಿಶ್ವಾಸ ವ್ಯಕ್ತಪಡಿಸಿದರು. ಹಾರಂಗಿ ಅಚ್ಚುಕಟ್ಟು ವ್ಯಾಪ್ತಿಯ ಬಲದಂಡೆ ನಾಲೆಗೆ 1500 ಕ್ಯುಸೆಕ್ ಮತ್ತು ಎಡದಂಡೆ ನಾಲೆಗೆ 400 ಕ್ಯುಸೆಕ್ ನೀರು ಹರಿಸುವುದಕ್ಕೆ ಶಾಸಕರು ಚಾಲನೆ ನೀಡಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ