• ಹೋಂ
  • »
  • ನ್ಯೂಸ್
  • »
  • ಜಿಲ್ಲೆ
  • »
  • ಕೊಡಗಿನಲ್ಲಿ ಮತ್ತೆ ಪ್ರವಾಹದ ಭೀತಿ: ಮುನ್ನೆಚ್ಚರಿಕೆ ತೆಗೆದುಕೊಳ್ಳಲು ಜಿಲ್ಲಾಡಳಿತ ಸಜ್ಜು

ಕೊಡಗಿನಲ್ಲಿ ಮತ್ತೆ ಪ್ರವಾಹದ ಭೀತಿ: ಮುನ್ನೆಚ್ಚರಿಕೆ ತೆಗೆದುಕೊಳ್ಳಲು ಜಿಲ್ಲಾಡಳಿತ ಸಜ್ಜು

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಹಾರಂಗಿ ಅಣೆಕಟ್ಟು ಹಿನ್ನೀರು ಹಾಗೂ ಕುಶಾಲನಗರ ವ್ಯಾಪ್ತಿಯ ಕಾವೇರಿ ನದಿ ಪಾತ್ರದಲ್ಲಿನ ಹೂಳು ಹೊರ ತೆಗೆಯದಿದ್ದಲ್ಲಿ ಈ ಬಾರಿಯೂ ಮತ್ತೆ ಪ್ರವಾಹ ಎದುರಾಗುವ ಸಾಧ್ಯತೆ ಇದೆ ಎಂಬ ಆತಂಕ ವ್ಯಕ್ತವಾಗಿದೆ. ಕುಶಾಲನಗರ ಬಳಿಯ ಕಾವೇರಿ ನದಿ ಪಾತ್ರದಲ್ಲಿ ಮರಳು ತೆಗೆಯುವಂತೆ ಸಾರ್ವಜನಿಕರು ಕೂಡ ಒತ್ತಾಯಿಸುತ್ತಿದ್ದಾರೆ.

ಮುಂದೆ ಓದಿ ...
  • Share this:

ಕೊಡಗು(ಏಪ್ರಿಲ್ 12) : ಕೊಡಗಿನಲ್ಲಿ ಕಳೆದ ಮೂರು ವರ್ಷಗಳಿಂದ ಪ್ರವಾಹ ಮತ್ತು ಭೂಕುಸಿತ ಆಗುತ್ತಿರುವುದು ಗೊತ್ತೇ ಇದೆ. ಆದರೆ ಪ್ರವಾಹ ಎದುರಾಗಲು ರಾಜ್ಯದ ಪ್ರಮುಖ ನದಿ, ಕೊಡಗಿನಲ್ಲಿ ಹುಟ್ಟಿ ಬೆಳೆಯುವ ಕಾವೇರಿ ಮತ್ತು ಹಾರಂಗಿ ಜಲಾಶಯದಲ್ಲಿ ಹೂಳು ತುಂಬಿಕೊಂಡಿರುವುದು ಪ್ರಮುಖ ಕಾರಣ ಎನ್ನಲಾಗುತ್ತಿದೆ. ಹೀಗಾಗಿ ಹಾರಂಗಿ ಜಲಾಶಯ ಮತ್ತು ಕಾವೇರಿ ನದಿಯಲ್ಲಿ ಆದಷ್ಟು ಶೀಘ್ರ ಮರಳು ಮತ್ತು ಹೂಳು ತೆಗೆಯುವುದು ಅಗತ್ಯವಿದೆ ಎಂದು ಕೊಡಗು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅಧಿಕಾರಿಗಳಿಗೆ ತಿಳಿಸಿದ್ದಾರೆ.


ಈ ಸಂಬಂಧ ಮಡಿಕೇರಿಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದ್ದು ಶೀಘ್ರವೇ ಕಾರ್ಯಗತಗೊಳಿಸುವಂತೆ ಸೂಚಿಸಿದ್ದಾರೆ. ಹಾರಂಗಿ ಅಣೆಕಟ್ಟು ಹಿನ್ನೀರು ಹಾಗೂ ಕುಶಾಲನಗರ ವ್ಯಾಪ್ತಿಯ ಕಾವೇರಿ ನದಿ ಪಾತ್ರದಲ್ಲಿನ ಹೂಳು ಹೊರ ತೆಗೆಯದಿದ್ದಲ್ಲಿ ಈ ಬಾರಿಯೂ ಮತ್ತೆ ಪ್ರವಾಹ ಎದುರಾಗುವ ಸಾಧ್ಯತೆ ಇದೆ ಎಂಬ ಆತಂಕ ವ್ಯಕ್ತವಾಗಿದೆ. ಕುಶಾಲನಗರ ಬಳಿಯ ಕಾವೇರಿ ನದಿ ಪಾತ್ರದಲ್ಲಿ ಮರಳು ತೆಗೆಯುವಂತೆ ಸಾರ್ವಜನಿಕರು ಕೂಡ ಒತ್ತಾಯಿಸುತ್ತಿದ್ದಾರೆ.


ಈ ಬಗ್ಗೆ ಮಾಹಿತಿ ನೀಡಿದ ಭೂ ವಿಜ್ಞಾನಿ ರೋಜಾ ಕಾವೇರಿ ನದಿ ಪಾತ್ರದಲ್ಲಿ ಮರಳು ಮಿಶ್ರಿತ ಮಣ್ಣು ಇದ್ದು, ಇದನ್ನು ಮರಳು ಬ್ಲಾಕ್‍ನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಜಿಲ್ಲಾಧಿಕಾರಿ ಅವರ ಗಮನಕ್ಕೆ ತಂದಿದ್ದಾರೆ. ಹಿರಿಯ ಭೂ ವಿಜ್ಞಾನಿ ಶ್ರೀನಿವಾಸ್ ಅವರು ಮರಳು ಲಭ್ಯವಾದರೆ ನಿಯಮಿತವಾಗಿ ಜಿಲ್ಲಾ ಮರಳು ಸಮಿತಿ ಸಭೆಯ ಮುಂದೆ ತಂದು ಸರ್ಕಾರಿ ಸಂಸ್ಥೆಯ ಮೂಲಕ ಮರಳು ತೆಗೆಯಬಹುದಾಗಿದೆ. ಇಲ್ಲಿ ಮರಳು ಮಿಶ್ರಿತ ಮಣ್ಣು ಇರುವುದರಿಂದ ಮರಳು ಬ್ಲಾಕ್ ಎಂದು ಘೋಷಿಸಲು ಸಾಧ್ಯವಿಲ್ಲ ಎಂದು ಜಿಲ್ಲಾಧಿಕಾರಿ ಅವರ ಗಮನಕ್ಕೆ ತಂದರು.


ಈ ಕುರಿತು ಮಾತನಾಡಿದ ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರು ಮರಳು ಮಿಶ್ರಿತ ಮಣ್ಣು ಇದೆ ಎಂದು ಭೂ ವಿಜ್ಞಾನಿಗಳು ಹೇಳುತ್ತಿರುವುದರಿಂದ ಈ ಬಗ್ಗೆ ನೀರಾವರಿ ಇಲಾಖೆಯ ಕಾರ್ಯದರ್ಶಿಯವರಿಗೆ ಪತ್ರ ಬರೆದು ಮರಳು ಮಿಶ್ರಿತ ಮಣ್ಣು ತೆಗೆಯಲು ಅವಕಾಶ ಮಾಡಲು ಅನುಮತಿ ಪಡೆಯುವಂತೆ ನೀರಾವರಿ ಇಲಾಖೆಯ ಎಂಜಿನಿಯರ್ ಅವರಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದ್ದಾರೆ. ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಮದನ್ ಮೋಹನ್ ಅವರು ಮರಳು ಮಿಶ್ರಿತ ಮಣ್ಣನ್ನು ಟೆಂಡರ್ ಆಹ್ವಾನಿಸಲು ಬರುವುದಿಲ್ಲ ಎಂದರು.


ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ ಅವರು ಹಾರಂಗಿ ಜಲಾಶಯ ಬಳಿಯ ಕಾವೇರಿ ನದಿ ಪಾತ್ರದಲ್ಲಿ ಮರಳು ಇರುವುದಿಲ್ಲ ಎಂದು ಹೇಳುತ್ತಿರುವುದರಿಂದ ಮಣ್ಣು ತೆಗೆಯಲು ಎನ್‍ಒಸಿ ನೀಡುವಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿಗೆ ಸಲಹೆ ಮಾಡಿದರು. ಕಾವೇರಿ ನೀರಾವರಿ ನಿಗಮದ ಹಾರಂಗಿ ಜಲಾಶಯದ ಕಾರ್ಯಪಾಲಕ ಎಂಜಿನಿಯರ್ ಮಂಜು ಅವರು ಹಾರಂಗಿ ಜಲಾಶಯ ವ್ಯಾಪ್ತಿಯಲ್ಲಿ ಹೂಳು ತೆಗೆಯುವ ಸಂಬಂಧ ಹಲವು ಮಾಹಿತಿ ನೀಡಿ ಹಾರಂಗಿ ಹಿನ್ನೀರಿನ ನದಿ ಪಾತ್ರದಲ್ಲಿ ಭೂಕುಸಿತ ಸಂಭವಿಸುವ ಪ್ರದೇಶದಲ್ಲಿ ಗೇಬಿಯಾನ್ ತಡೆಗೋಡೆ ನಿರ್ಮಾಣ ಕಾರ್ಯ ಸದ್ಯದಲ್ಲೇ ಆರಂಭವಾಗಲಿದೆ. ಹಾಗೆಯೇ ವಿವಿಧ ಕಡೆಗಳಲ್ಲಿ ಚೆಕ್ ಡ್ಯಾಂ ನಿರ್ಮಾಣ ಮಾಡುವ ಕಾರ್ಯ ಆರಂಭಗೊಳ್ಳಲಿದೆ. ಮಾದಾಪುರ, ಮುಕ್ಕೋಡ್ಲು ಮತ್ತಿತರ ಕಡೆಗಳಲ್ಲಿ ತಡೆಗೋಡೆ ನಿರ್ಮಾಣ ಮಾಡಲಾಗುತ್ತದೆ ಎಂದು ತಿಳಿಸಿದರು.

top videos
    First published: