ಪುತ್ತೂರು; ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಮಳೆಯ ಕಾರಣದಿಂದಾಗಿ ಹಲವು ಕಡೆಗಳಲ್ಲಿ ಹೊಂಡ-ಗುಂಡಿಗಳು ನಿರ್ಮಾಣಗೊಂಡಿದ್ದು, ಮಳೆ ಕಡಿಮೆಯಾದ ತಕ್ಷಣವೇ ಅವುಗಳನ್ನು ದುರಸ್ತಿಪಡಿಸಲಾಗುವುದು ಎಂದು ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ಪುತ್ತೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ನಳಿನ್ ಕುಮಾರ್ ಕಟೀಲ್ ಅವರು ಜಿಲ್ಲೆಯಲ್ಲಿ ಸುರಿಯುವ ಮಳೆಯಿಂದಾಗಿ ಹೆದ್ದಾರಿಗಳ ಕೆಲವು ಕಡೆಗಳಲ್ಲಿ ಹೊಂಡ-ಗುಂಡಿಗಳು ಬಿದ್ದಿದ್ದು ಅವುಗಳನ್ನು ಮಳೆ ಕಡಿಮೆಯಾದ ತಕ್ಷಣವೇ ದುರಸ್ತಿ ಮಾಡುವಂತೆ ಹೆದ್ದಾರಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರಸ್ತೆಗೆ ಡಾಂಬರೀಕರಣ ಮಾಡುವ ಎಲ್ಲಾ ಪ್ಲಾಂಟ್ ಗಳು ಸೆಪ್ಟಂಬರ್ ಬಳಿಕವೇ ಕಾರ್ಯಾಚರಣೆ ನಡೆಸುವುದರಿಂದ ತಕ್ಷಣಕ್ಕೆ ಮರು ಡಾಂಬರೀಕರಣ ಮಾಡುವುದು ಸಾಧ್ಯವಿಲ್ಲ ಎಂದರು.
ಇದನ್ನು ಓದಿ: ಆರ್ಥಿಕ ಪ್ರಗತಿಗಾಗಿ ವಿದೇಶಿ ನೇರ ಹೂಡಿಕೆಗೆ ಉತ್ತೇಜನ - ಸಿಎಂ ಬಿಎಸ್ ಯಡಿಯೂರಪ್ಪ
ಬಿ.ಸಿ.ರೋಡ್ನಿಂದ ಅಡ್ಡಹೊಳೆವರೆಗಿನ ಹೆದ್ದಾರಿಯನ್ನು ಚತುಷ್ಪಥ ಮಾಡುವ ಕಾಮಗಾರಿ ಕೆಲವು ಕಾನೂನಾತ್ಮಕ ಸಮಸ್ಯೆಯಿಂದ ನಿಂತಿದೆ. ಇದೀಗ ಮತ್ತೆ ಮರು ಟೆಂಡರ್ ಕರೆಯಲಾಗಿದ್ದು, ಸದ್ಯದಲ್ಲೇ ಈ ಕಾಮಗಾರಿಯೂ ಆರಂಭಗೊಳ್ಳಲಿದೆ ಎಂದರು. ನ್ಯೂಸ್ 18 ಕನ್ನಡ ರಾಷ್ಟ್ರೀಯ ಹೆದ್ದಾರಿಯ ಅವ್ಯವಸ್ಥೆಯ ಬಗ್ಗೆ ವಿಸ್ತೃ ವರದಿ ಪ್ರಕಟಿಸಿದ ಬಳಿಕ ಇದೀಗ ಹೆದ್ದಾರಿಯಲ್ಲಿ ಹೊಂಡ ಮುಚ್ಚುವ ಕಾಮಗಾರಿಯು ಆರಂಭಗೊಂಡಿದೆ.
ನಳಿನ್ ಕುಮಾರ್ ಕಟೀಲ್ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಇಂದಿಗೆ ಒಂದು ವರ್ಷ ಪೂರ್ಣಗೊಂಡಿದೆ. ಒಂದು ವರ್ಷ ಪಕ್ಷದ ಸಂಘಟನೆ ಕಾರ್ಯ ನಿರ್ವಹಿಸಿದ್ದಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ಕಟೀಲ್ ಅವರಿಗೆ ಶುಭ ಆರೈಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ