ದೇವನಹಳ್ಳಿ: ಗ್ರಾಮ ಪಂಚಾಯಿತಿಗಳಲ್ಲಿರುವ ಕುಡಿಯುವ ನೀರಿನ ಘಟಕಗಳು ಹಲವು ಕಡೆ ಶಿಥಿಲಗೊಂಡಿದ್ದು, ಅವುಗಳನ್ನು ಶೀಘ್ರವಾಗಿ ದುರಸ್ತಿಗೊಳಿಸಿ ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಮಾಡುವ ಮೂಲಕ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಜಯಮ್ಮ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕುಡಿಯುವ ನೀರು ಘಟಕ ನಿರ್ವಹಣೆ ಜವಾಬ್ದಾರಿ ಹೊತ್ತ ಗುತ್ತಿಗೆದಾರರು ನಿರ್ಲಕ್ಷ್ಯ ವಹಿಸಿದರೆ ಅವರಿಗೆ ದಂಡ ವಿಧಿಸಿ, ಅಗತ್ಯ ಕ್ರಮ ಕೈಗೊಳ್ಳಿ, ಘಟಕಗಳ ನಿರ್ವಹಣೆ ಜೊತೆಗೆ ಸಾಕಷ್ಟು ನೀರು ಪೋಲಾಗುತ್ತಿದ್ದು, ನೀರಿನ ಸಂರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಎಚ್ಚರಿಕೆ ನೀಡಿದರು, ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆಯನ್ನು ಆಯಾ ಪಂಚಾಯಿತಿಗಳಿಗೆ ವಹಿಸಿಕೊಡಲು ಜಿಲ್ಲಾ ಪಂಚಾಯಿತಿ ಸದಸ್ಯರು ಒತ್ತಾಯಿಸಿದಾಗ ಜಿ.ಪಂ. ಸಿಇಓ ಎನ್.ಎಂ.ನಾಗರಾಜ ಪ್ರತಿಕ್ರಿಯಿಸಿ, ಈಗಾಗಲೇ ಹಲವು ಘಟಕಗಳ ನಿರ್ವಹಣೆ ಜವಾಬ್ದಾರಿಯನ್ನು ಗ್ರಾಮ ಪಂಚಾಯತಿಗಳಿಗೆ ನೀಡಲಾಗಿದ್ದು, ಕೆಲವೊಂದು ಕಡೆಗಳಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿದೆ. ಈ ಬಗ್ಗೆ ಪರಿಶೀಲಿಸಿ ನಿರ್ವಹಣೆಗೆ ಕ್ರಮ ವಹಿಸಲಾಗುವುದು ನಿರ್ವಹಣೆಯಲ್ಲಿ ಕಣ್ಣಾಮುಚ್ಚಾಲೆ ಆಡುವ ಗುತ್ತಿಗೆದಾರರ ಪರವಾನಗಿ ರದ್ದು ಮಾಡುವುದಾಗಿ ಎಚ್ಚರಿಕೆ ನೀಡಿದರು.
ಜಿಲ್ಲೆಯಲ್ಲಿ ಕೊರೋನಾ ಸೋಂಕಿತ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಂಬುಲೆನ್ಸ್ ಸೇರಿದಂತೆ ಅಗತ್ಯ ಸೌಲಭ್ಯಗಳು ಸೋಂಕಿತರಿಗೆ ಶೀಘ್ರವಾಗಿ ದೊರೆಯುವಂತೆ ಕ್ರಮವಹಿಸಲು ತಿಳಿಸಿದರಲ್ಲದೆ, ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಜಿಲ್ಲೆಯಲ್ಲಿರುವ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆಯಾಗದಂತೆ ಮುಂಜಾಗ್ರತೆ ಕ್ರಮ ವಹಿಸುವಂತೆ ಸೂಚಿಸಿದರು. ಆರೋಗ್ಯ ಇಲಾಖೆ ಸಿಬ್ಬಂದಿಗಳು ಸಾರ್ವಜನಿಕರಿಗೆ ಸ್ಪಂದಿಸದೆ ನಿರ್ಲಕ್ಷ್ಯ ತೋರಿದ್ದಾರೆ ಎಂದು ಗರಂ ಆದರು. ಜಿಲ್ಲೆಯಲ್ಲಿ ಹೊಸಕೋಟೆಯ ನರಸಾಪುರ, ನೆಲಮಂಗಲ ತಾಲ್ಲೂಕಿನ ಮಾಗಡಿ ತಾಲ್ಲೂಕು ಗಡಿಭಾಗ ಹೊಂದಿರುವ ಗ್ರಾಮಗಳಲ್ಲಿ ಇತ್ತೀಚಿನ ದಿನಗಳಲ್ಲಿ ಚಿರತೆಯ ಹಾವಳಿ ಹೆಚ್ಚಾಗಿದ್ದು, ಜನರು ಆಂತಕದಲ್ಲಿದ್ದಾರೆ. ಹೀಗಾಗಿ ಅರಣ್ಯ ಇಲಾಖೆಯವರು ಚಿರತೆಯನ್ನು ಸೆರೆ ಹಿಡಿಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು ಹಾಗೂ ಚಿರತೆ ದಾಳಿ ಮಾಡಿರುವ ಹಸು, ಕುರಿ, ಮೇಕೆಯ ವಾರಸುದಾರರಿಗೆ ಶೀಘ್ರವಾಗಿ ಪರಿಹಾರಧನವನ್ನು ನೀಡುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು. ಈ ವೇಳೆ ಉತ್ತರಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಕಳೆದ ಎರಡು ತಿಂಗಳಲ್ಲಿ ಆರು ಚಿರತೆಗಳನ್ನು ಸೆರೆಹಿಡಿಯಲಾಗಿದೆ ಎಂದರಲ್ಲದೆ, ನೆಲಮಂಗಲ ತಾಲ್ಲೂಕಿನ ಅಂಚಿನಲ್ಲಿ ಬೆಟ್ಟಗುಡ್ಡ ಹೆಚ್ಚಾಗಿದ್ದು, ಮಾಗಡಿಗೆ ಹೊಂದಿಕೊಂಡಂತೆ ಇರುವುದರಿಂದ ಚಿರತೆ ಹಾವಳಿ ಹೆಚ್ಚಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಇದನ್ನು ಓದಿ: ಗದಗ ಜಿಲ್ಲೆಯಲ್ಲಿ ಬೆಣ್ಣೆ ಹಳ್ಳದ ಆರ್ಭಟಕ್ಕೆ ಸೇತುವೆಗಳು ಜಲಾವೃತ; ಜಲಾಸುರನ ಅಬ್ಬರಕ್ಕೆ ಜನರು ಕಂಗಾಲು!
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ