ರಾಮನಗರ(ಜು.16) : ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಮಾಡುವುದಾಗಿ ಕರ್ನಾಟಕ ರಾಜ್ಯ ಮೇಕೆದಾಟು ಹೋರಾಟ ಸಮಿತಿ ರಾಮನಗರದಲ್ಲಿ ಪ್ರಕಟ ಮಾಡಿದೆ. ರಾಮನಗರದ ಎಪಿಎಂಸಿ ಯಲ್ಲಿ ಸುದ್ದಿಗೋಷ್ಟಿ ನಡೆಸಿದ ಸಂಘಟನೆಯ ಪದಾಧಿಕಾರಿಗಳು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ಕಿಡಿಕಾರಿದರು. ರಾಮನಗರದ ರೈತ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿ, ಆಗಸ್ಟ್ 3 ರಿಂದ 7 ನೇ ತಾರೀಖಿನವರೆಗೆ ರೈತರಿಂದ ಪಾದಯಾತ್ರೆ ನಡೆಯಲಿದೆ ಎಂದು ತಿಳಿಸಿದರು.
ಕನಕಪುರದ ಮೇಕೆದಾಟಿನಿಂದ ಬೆಂಗಳೂರಿನ ವಿಧಾನಸೌಧದವರೆಗೆ ಪಾದಯಾತ್ರೆ ನಡೆಯಲಿದ್ದು, 5 ದಿನಗಳ ಕಾಲ ಪಾದಯಾತ್ರೆ ನಡೆಸಲಿದ್ದೇವೆಂದು ತಿಳಿಸಿದರು. ಕರ್ನಾಟಕ ರಾಜ್ಯ ರೈತ ಸಂಘದಿಂದ ನಡೆಯುವ ಪಾದಪಾತ್ರೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ರೈತರು ಭಾಗಿಯಾಗಲಿದ್ದಾರೆಂದು ಸಮಿತಿಯ ಉಪಾಧ್ಯಕ್ಷೆ ಕಲ್ಪನಾ ಶಿವಣ್ಣ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.
ರೇಷ್ಮೆನಾಡಿನ ಕನಸಿನ ಯೋಜನೆ ಮೇಕೆದಾಟು
ರೇಷ್ಮೆನಗರಿಯ ಮಹತ್ವಾಕಾಂಕ್ಷೆ ಯೋಜನೆ ಮೇಕೆದಾಟುವಿಗೆ ಈ ಬಾರಿ ಜೀವ ಬರುವ ಸಾಧ್ಯತೆ ಹೆಚ್ಚಾಗಿದೆ. ಕಳೆದ ಕಾಂಗ್ರೆಸ್ - ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಯೋಜನೆಯ ಸಂಪೂರ್ಣ ಡಿಪಿಆರ್ ನ್ನ ಕೇಂದ್ರಕ್ಕೆ ಕಳುಹಿಸಲಾಗಿತ್ತು. ನಂತರ ಮತ್ತೆ ತಮಿಳುನಾಡು ತಕರಾರು ಮಾಡಿದ ಪರಿಣಾಮ ಯೋಜನೆಗೆ ಬ್ರೇಕ್ ಬಿತ್ತು. ಆದರೆ ಈಗ ಹಸಿರು ಪೀಠದ ಜೊತೆಗೆ ಸುಪ್ರೀಂಕೋರ್ಟ್ ಸಹ ಯೋಜನೆ ಪರವಾಗಿ ತೀರ್ಪು ನೀಡಿದೆ. ರಾಮನಗರ ಜಿಲ್ಲಾಡಳಿತ ಸಹ ಯೋಜನೆ ಆದಷ್ಟು ಬೇಗ ಪ್ರಾರಂಭವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದೆ.
ಈ ಹಿಂದಿನ ಸಿದ್ದರಾಮಯ್ಯ ನೇತ್ಱತ್ವದ ಕಾಂಗ್ರೆಸ್ ಸರ್ಕಾರವು ಸಲ್ಲಿಸಿದ್ದ ವರದಿಯಂತೆ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಸುಮಾರು 5,612 ಕೋಟಿ ನಿರ್ಮಾಣ ವೆಚ್ಚ ಅಂದಾಜಿಸಲಾಗಿತ್ತು. ಆದರೆ ಈಗ ಅದು 9 ಸಾವಿರ ಕೋಟಿಗೂ ಹೆಚ್ಚಾಗಲಿದೆ ಎನ್ನಲಾಗ್ತಿದೆ. ಇದರಿಂದ ಸುಮಾರು 60.17 ಟಿಎಂಸಿ ನೀರನ್ನು ಸಂಗ್ರಹಿಸುವ ಗುರಿ ಹೊಂದಲಾಗಿದೆ. ಇದರಿಂದಾಗಿ ಬಯಲುಸೀಮೆ ಜಿಲ್ಲೆಗಳಾದ ರಾಮನಗರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ಸೇರಿದಂತೆ ಒಟ್ಟು 12 ಜಿಲ್ಲೆಗಳಿಗೆ ಕುಡಿಯುವ ನೀರು ಸರಬರಾಜು ಮಾಡಬಹುದಾಗಿದೆ. ಹಾಗಾಗಿ ಆದಷ್ಟು ಬೇಗ ಈ ಯೋಜನೆಯನ್ನ ಪ್ರಾರಂಭ ಮಾಡಬೇಕು ಎಂದು ಮೇಕೆದಾಟು ಹೋರಾಟ ಸಮಿತಿ ಈಗಿನ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಇನ್ನು ಮೇಕೆದಾಟು ಜಲಾಶಯದ ಸುತ್ತಮುತ್ತವೆಲ್ಲ ಬಹುಪಾಲು ಅರಣ್ಯ ಪ್ರದೇಶವಾಗಿದೆ. ಇದೇ ಕಾರಣಕ್ಕೆ ಕೇಂದ್ರ ಪರಿಸರ ಸಚಿವಾಲಯ ಹಾಗೂ ಸಂಬಂಧಿಸಿದ ಟ್ರಿಬ್ಯುನಲ್ನ ಅನುಮತಿ ಸಿಗುವುದು ವಿಳಂಬವಾಗುತ್ತಿದೆ ಎನ್ನಲಾಗುತ್ತಿದೆ.
ಯೋಜನೆ ಅನುಷ್ಠಾನಗೊಂಡಿದ್ದೇ ಆದಲ್ಲಿ ಬೆಂಗಳೂರಿಗರಿಗೆ ಕುಡಿಯುವ ನೀರಿನ ಬವಣೆ ತಪ್ಪಲಿದೆ. ರಾಮನಗರವೂ ಸೇರಿದಂತೆ ಬಯಲು ಸೀಮೆಯ ಜಿಲ್ಲೆಗಳಿಗೆ ನೀರಾವರಿ ವ್ಯವಸ್ಥೆಯಾಗಲಿದೆ. ಜೊತೆಗೆ ೪೦೦ ಮೆಗಾವಾಟ್ನಷ್ಟು ವಿದ್ಯುತ್ ಉತ್ಪಾದನೆಗೂ ಕೂಡ ಸಾಧ್ಯವಾಗಲಿದೆ ಎಂದು ಅಂದಾಜಿಸಲಾಗಿದೆ. ಅಣೆಕಟ್ಟು ನಿರ್ಮಾಣದಿಂದ ಸರಿಸುಮಾರು 2.500 ಸಾವಿರ ಹೆಕ್ಟೇರ್ ಅರಣ್ಯ ಪ್ರದೇಶ ಮುಳುಗಡೆಯಾಗಲಿದ್ದು, ಬದಲಿ ಜಾಗವನ್ನ ಅರಣ್ಯ ಇಲಾಖೆಗೆ ಒಪ್ಪಿಸಲು ಈಗಾಗಲೇ ಬದಲಿ ಜಾಗವನ್ನು ಸಹ ಸರ್ವೆ ಮಾಡಲಾಗಿದೆ.
ರಾಮನಗರ ಜಿಲ್ಲೆಯಾದ್ಯಂತ ಜಾಗವನ್ನ ಸರ್ವೆ ಮಾಡಲಾಗಿದ್ದು ಕೊನೆ ಹಂತವನ್ನ ತಲುಪಲಾಗಿದೆ. ಇನ್ನೊಂದು ವಾರದಲ್ಲಿ ಅರಣ್ಯ ಇಲಾಖೆಗೆ ಜಾಗವನ್ನ ಒಪ್ಪಿಸಲು ರಾಜ್ಯ ಸರ್ಕಾರಕ್ಕೆ ವರದಿ ನೀಡಲಾಗುತ್ತೆ, ಆದಷ್ಟು ಬೇಗ ಸಿವಿಲ್ ಕೆಲಸಗಳು ಪ್ರಾರಂಭವಾಗಲಿದೆ. ನಂತರ ಡ್ಯಾಂ ಕೆಲಸ ಸರ್ಕಾರದ ಹಂತದಲ್ಲಿ ಪ್ರಾರಂಭವಾಗಲಿದೆ ಎಂದು ರಾಮನಗರ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಸಹ ನ್ಯೂಸ್ 18 ಗೆ ತಿಳಿಸಿದ್ದಾರೆ.
(ವರದಿ : ಎ.ಟಿ.ವೆಂಕಟೇಶ್)
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ