ಅನರ್ಹರು ಬಿಪಿಎಲ್ ಪಡಿತರ ಚೀಟಿಗಳನ್ನು ಹಿಂದಿರುಗಿಸಿ, ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಿ; ಸಿಎಂ ಯಡಿಯೂರಪ್ಪ ಎಚ್ಚರಿಕೆ
ಕಾನೂನು ಬಾಹಿರವಾಗಿ ಬಿಪಿಎಲ್ ಕಾರ್ಡ್ ಪಡೆದಿರುವವರು ಸ್ವಯಂಪ್ರೇರಿತವಾಗಿ ಅದನ್ನು ತಕ್ಷಣ ವಾಪಾಸು ಮಾಡಬೇಕು. ಇಲ್ಲದಿದ್ದರೆ ಅಂತವರನ್ನು ಗುರುತಿಸಿ ಹಣವನ್ನು ವಸೂಲು ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಶಿವಮೊಗ್ಗ (ಫೆಬ್ರವರಿ 16); ಬಿಪಿಎಲ್ ಕಾರ್ಡ್ ಕುರಿತಾಗಿ ಸರ್ಕಾರದ ನೀತಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಆದರೆ, ಇದರ ಸೌಲಭ್ಯ ಕೇವಲ ಬಡವರಿಗೆ ಮಾತ್ರ ಸಿಗಬೇಕು. ಶ್ರೀಮಂತರು ಬಿಪಿಎಲ್ ಕಾರ್ಡ್ ಪಡೆಯುವುದನ್ನು ತಪ್ಪಿಸಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಕಾನೂನು ಬಾಹಿರವಾಗಿ ಬಿಪಿಎಲ್ ಕಾರ್ಡ್ ಪಡೆದಿರುವವರು ಸ್ವಯಂಪ್ರೇರಿತವಾಗಿ ಅದನ್ನು ತಕ್ಷಣ ವಾಪಾಸು ಮಾಡಬೇಕು. ಇಲ್ಲದಿದ್ದರೆ ಅಂತವರನ್ನು ಗುರುತಿಸಿ ಹಣವನ್ನು ವಸೂಲು ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಇನ್ನು ಶಿವಮೊಗ್ಗ ವಿಮಾನ ನಿಲ್ದಾಣ ವರ್ಷದ ಒಳಗಾಗಿ ಕಾರ್ಯಾರಂಭ ಮಾಡಲಿದೆ ಎಂದು ತಿಳಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಶಿವಮೊಗ್ಗ ಹೊರವಲಯದ ಸೋಗಾನೆಯಲ್ಲಿ 384 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ವರ್ಷದ ಒಳಗಾಗಿ ಕಾರ್ಯಾರಂಭವಾಗುವ ನಿರೀಕ್ಷೆಯಿದೆ ಎಂದು ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಣೆ ನಡೆಸಿದ ಬಳಿಕ ಮಾಹಿತಿ ನೀಡಿದರು.
"ಮೊದಲ ಹಂತದಲ್ಲಿ ರನ್ವೇ ಮತ್ತು ಕಂಪೌಂಡ್ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಎರಡನೇ ಹಂತದಲ್ಲಿ ಟರ್ಮಿನಲ್ ಕಟ್ಟಡ ನಿರ್ಮಾಣ ಕಾಮಗಾರಿ ಆರಂಭಿಸಬೇಕಿದ್ದು, ಟೆಂಡರ್ ಕರೆಯುವ ಪ್ರಕ್ರಿಯೆ ನಡೆಯುತ್ತಿದೆ ಎಂದರು. ಎಲ್ಲಾ ಕಾಮಗಾರಿಗಳನ್ನು ಜತೆಯಾಗಿಯೇ ನಡೆಸಲು ಸೂಚನೆ ನೀಡಲಾಗಿದೆ. ಅನುದಾನಕ್ಕೆ ಯಾವುದೇ ಕೊರತೆ ಇರುವುದಿಲ್ಲ. ನಿಲ್ದಾಣ ಕಾಮಗಾರಿ ನಿರೀಕ್ಷೆಯಂತೆ ತ್ವರಿತವಾಗಿ ನಡೆಯುತ್ತಿದ್ದು, ಇನ್ನಷ್ಟು ವೇಗವಾಗಿ ಯೋಜನೆ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ" ಎಂದು ಮಾಹಿತಿ ನೀಡಿದ್ದಾರೆ.
"ಕಾಮಗಾರಿಗೆ ಯಾವುದೇ ಅಡಚಣೆಯಾಗದಂತೆ ಜಲ್ಲಿ ಒದಗಿಸಲು ಸ್ಥಳೀಯವಾಗಿ 4 ಎಕರೆ ಕ್ವಾರಿ ಒದಗಿಸಲಾಗಿದೆ. ಎರಡು ತಿಂಗಳ ಬಳಿಕ ಮತ್ತೆ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆಗೆ ಆಗಮಿಸಲಾಗುವುದು. ಇದು ಪೂರ್ಣ ಪ್ರಮಾಣದ ವಿಮಾನ ನಿಲ್ದಾಣವಾಗಿದ್ದು, ರಾತ್ರಿ ವಿಮಾನಗಳ ಇಳಿಯುವಿಕೆಗೂ ವ್ಯವಸ್ಥೆ ಕಲ್ಪಿಸಲಾಗುವುದು ವಿಮಾನ ನಿಲ್ದಾಣದಿಂದಾಗಿ ಈ ಭಾಗದ ಕೈಗಾರಿಕಾ ಬೆಳವಣಿಗೆ ಸಹಕಾರಿಯಾಗಲಿದೆ" ಎಂದು ಅವರು ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಕ್ರೀಡಾ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ ಹಲವಾರು ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಅವರು ಫೆ.21 ರಂದು ಶಿವಮೊಗ್ಗ ಆಗಮಿಸಿ ಹಲವು ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವರು.
ಸಹ್ಯಾದ್ರಿ ಕಾಲೇಜಿನಲ್ಲಿ 4 ಕೋಟಿ ರೂ. ವೆಚ್ಚದಲ್ಲಿ ಒಳಾಂಗಣ ಕ್ರೀಡಾಂಗಣ ಹಾಗೂ ಸ್ಮಾರ್ಟ್ ಸಿಟಿ ಯೋಜನೆಯಡಿ 4 ಕೋಟಿ ರೂ. ಕಾಮಗಾರಿಗಳಿಗೆ ಅವರು ಶಂಕು ಸ್ಥಾಪನೆ ನೆರವೇರಿಸುವರು. ಶಿವಮೊಗ್ಗದಲ್ಲಿ ವಿಶೇಷ ಕ್ರೀಡಾ ವಲಯ ಸ್ಥಾಪನೆ ಕುರಿತು ಸ್ಥಳ ಪರಿಶೀಲನೆಯನ್ನು ಸಹ ಸಚಿವರು ಕೈಗೊಳ್ಳಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಮಾಹಿತಿ ನೀಡಿದ್ದಾರೆ.
Published by:MAshok Kumar
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ