ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳೊಂದಿಗೆ ಗೆಲುವು ಸಾಧಿಸಿದ ಕಾಂಗ್ರೆಸ್ (Congress) ಪಕ್ಷ ರಾಜ್ಯದಲ್ಲಿ ಅಧಿಕಾರವನ್ನು ವಹಿಸಿಕೊಂಡಿದೆ. ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ ಕರ್ನಾಟಕ-ತಮಿಳುನಾಡು (Karnataka and Tamil Nadu) ನಡುವೆ ಭಿನ್ನಾಭಿಪ್ರಾಯ ಹೊಂದಿರುವ ಮೇಕೆದಾಟು ಯೋಜನೆಯೂ (Mekedatu Project) ಮತ್ತೆ ಬೆಳಕಿಗೆ ಬಂದಿದೆ. ತಮಿಳುನಾಡಿನ (Tamil Nadu) ಡಿಎಂಕೆ (DMK) ಮತ್ತು ಕರ್ನಾಟಕದಲ್ಲಿ (Karnataka) ಕಾಂಗ್ರೆಸ್ ಪಕ್ಷಗಳು ಒಳ್ಳೆಯ ಸೇಹವನ್ನು ಹೊಂದಿದ್ದರೂ ಸಹಾ ಮೇಕೆದಾಟು ಅಣೆಕಟ್ಟು ವಿಚಾರದಲ್ಲಿ ಮಾತ್ರ ಎರಡು ರಾಜ್ಯಗಳ ನಿಲುವು ಭಿನ್ನವಾಗಿದೆ. ಕರ್ನಾಟಕದ ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ (DK Shivakumar) ಅವರು ಮೇಕೆದಾಟುವಿನಲ್ಲಿ ಅಣೆಕಟ್ಟು ನಿರ್ಮಿಸುವುದು ಖಚಿತ ಅಂತ ಹೇಳಿದ್ದಾರೆ. ಕಾಮಗಾರಿ ಶೀಘ್ರದಲ್ಲಿಯೇ ಆರಂಭವಾಗಲಿದೆ ಎಂದೂ ಹೇಳಿಕೆ ನೀಡಿದರು. ಈ ಹೇಳಿಕೆಗೆ ತಮಿಳುನಾಡು ಜಲಸಂಪನ್ಮೂಲ ಸಚಿವ ದುರೈಮುರುಗನ್ ಹಾಗೂ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ (MK Stalin) ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ತಮಿಳುನಾಡು ವಿರೋಧ
ನದಿಗೆ ಅಡ್ಡಲಾಗಿ ಯಾವುದೇ ಅನಧಿಕೃತ ನಿರ್ಮಾಣ ತಮಿಳುನಾಡಿಗೆ ಹಾನಿಯಾಗಬಹುದು ಮತ್ತು CWDTಯ 2007ರ ಅಂತಿಮ ಆದೇಶ ಮತ್ತು 2018 ರ ಎಸ್ಸಿ ತೀರ್ಪು ಎರಡನ್ನೂ ಉಲ್ಲಂಘಿಸಬಹುದು ಎಂದು ತಮಿಳುನಾಡು ರಾಜ್ಯದ ಜಲಸಂಪನ್ಮೂಲ ಸಚಿವ ವಿರೋಧ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆಯ ಎಚ್ಚರಿಕೆ
ವಿವಾದಿತ ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕ ಮುಂದಾದರೆ ಪ್ರತಿಭಟನೆ ನಡೆಸುವುದಾಗಿ ತಮಿಳುನಾಡಿನ ಪ್ರಮುಖ ಪ್ರತಿಪಕ್ಷ ಎಐಎಡಿಎಂಕೆ ಎಚ್ಚರಿಕೆ ನೀಡಿದೆ. ಶಿವಕುಮಾರ್ ಅವರ ಹೇಳಿಕೆಯನ್ನು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಕೆ. ಪಳನಿಸ್ವಾಮಿ ಟೀಕಿಸಿದ್ದಾರೆ.
ಪಳನಿಸ್ವಾಮಿ ಅವರು ಅಂತರ-ರಾಜ್ಯ ನದಿ ನೀರಿನ ವಿವಾದಗಳ ಕಾಯ್ದೆ, 1956ರ ಅಡಿಯಲ್ಲಿ, ಕರ್ನಾಟಕವು ನದಿಯ ನೈಸರ್ಗಿಕ ಹಾದಿಯ ತಡೆಯುವಿಕೆ ಅಥವಾ ಬದಲಾಯಿಸುವುದನ್ನು ಕಾನೂನುಬದ್ಧವಾಗಿ ನಿಷೇಧಿಸಲಾಗಿದೆ ಎಂದು ಪ್ರತಿಪಾದಿಸಿದರು. ಕಾವೇರಿ ಜಲವಿವಾದದ ಅಂತಿಮ ತೀರ್ಪನ್ನು ಉಲ್ಲೇಖಿಸಿದ ಅವರು, ನದಿಯ ಕೆಳಭಾಗದ ರಾಜ್ಯಗಳ ಒಪ್ಪಿಗೆಯಿಲ್ಲದೆ ಯಾವುದೇ ನೀರಾವರಿ ಯೋಜನೆಯನ್ನು ಪ್ರಾರಂಭಿಸಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದರು ಎಂದು ವರದಿಗಳು ಉಲ್ಲೇಖಿಸಿವೆ. ಡಿಸೆಂಬರ್ 2018 ರಲ್ಲಿ,ಪಳನಿಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ, ಕರ್ನಾಟಕದಲ್ಲಿ ಯೋಜನೆಗಾಗಿ ನಡೆಸಲಾಗುತ್ತಿರುವ ಕಾರ್ಯಸಾಧ್ಯತೆಯ ಅಧ್ಯಯನವನ್ನು ನಿಲ್ಲಿಸುವಂತೆ ಒತ್ತಾಯಿಸಿ ಪ್ರಧಾನಿಗೆ ಪತ್ರ ಬರೆದಿದ್ದರು.
ಇದನ್ನೂ ಓದಿ: Free Electricity: ನಿಮ್ಮ ಮನೆಗೂ ಸಿಗುತ್ತಾ 200 ಯುನಿಟ್ ಉಚಿತ ವಿದ್ಯುತ್? ಫ್ರೀ ಕರೆಂಟ್ ಪಡೆಯುವುದು ಹೇಗೆ?
ಮೇಕೆದಾಟು ಯೋಜನೆ ಎಂದರೇನು?
ಮೇಕೆದಾಟು ಎಂದರೇನು ಎಂದು ಕೇಳಿದರೆ ಸಿಗುವ ಉತ್ತರ ಪಿಕ್ನಿಕ್ ಸ್ಪಾಟ್. ಬೆಂಗಳೂರಿನಿಂದ 100 ಕಿ.ಮೀ ದೂರದಲ್ಲಿದ್ದು, ರಾಮನಗರ ಜಿಲ್ಲೆಯಲ್ಲಿ ಮೇಕೆದಾಟು ಸ್ಥಳವಿದೆ. ಕಾವೇರಿ ಮತ್ತು ಅರ್ಕಾವತಿ ನದಿಗಳ ಸಂಗಮ ಸ್ಥಳದಿಂದ 4 ಕಿಲೋಮೀಟರ್ ದೂರದಲ್ಲಿದೆ ಮೇಕೆದಾಟು. ಇಲ್ಲಿ ಕಾವೇರಿ ನದಿ ಕಿರು ಜಾಗದಲ್ಲಿ ಹರಿದು ಹೋಗುತ್ತದೆ. ಇಲ್ಲಿಗೆ ಮೇಕೆದಾಟು ಎಂಬ ಹೆಸರು ಬರಲು ಒಂದು ಕಥೆಯೇ ಇದೆ.
ಯೋಜನೆಗಾಗಿ 250 ಕೋಟಿ ರಿಲೀಸ್
48 ಟಿಎಂಸಿ (ಸಾವಿರ ಮಿಲಿಯನ್ ಕ್ಯೂಬಿಕ್) ಅಡಿಗಳ ಪ್ರಸ್ತಾವಿತ ಸಾಮರ್ಥ್ಯ ಮತ್ತು ರೂ 6,000 ಕೋಟಿ ವೆಚ್ಚದ ಈ ಅಣೆಕಟ್ಟು ಬೆಂಗಳೂರಿಗೆ ಕುಡಿಯುವ ನೀರನ್ನು ಪೂರೈಸುವ ಮತ್ತು ಪ್ರಾದೇಶಿಕ ಅಂತರ್ಜಲವನ್ನು ಮರುಪೂರಣಗೊಳಿಸುವ ಗುರಿಯನ್ನು ಹೊಂದಿದೆ. ನವೆಂಬರ್ 2014 ರಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರವು ಯೋಜನೆಯ ಕುರಿತು ಆಸಕ್ತಿಯನ್ನು ವ್ಯಕ್ತಪಡಿಸಿತ್ತು. ಸಿದ್ದರಾಮಯ್ಯ ಸರ್ಕಾರದಲ್ಲಿ ಜಲಸಂಪನ್ಮೂಲ ಸಚಿವರಾಗಿದ್ದ ಶಿವಕುಮಾರ್ ಯೋಜನಾ ವರದಿಗಾಗಿ 2015 ರ ಬಜೆಟ್ನಲ್ಲಿ 250 ಕೋಟಿ ಹಣವನ್ನು ಬಿಡುಗಡೆ ಮಾಡಿದ್ದರು.
ತಮಿಳುನಾಡು ಜೊತೆ ಮಾತುಕತೆಗೆ ಸಿದ್ಧ
ಮೇಕೆದಾಟು ಅಣೆಕಟ್ಟು ಕಾವೇರಿ ನದಿಯ ಕೃಷ್ಣರಾಜ ಸಾಗರ ಯೋಜನೆಗಿಂತ ದೊಡ್ಡದಾಗಿದೆ. ಕೇಂದ್ರ ಜಲ ಆಯೋಗವು (ಸಿಡಬ್ಲ್ಯುಸಿ) 2018 ರಲ್ಲಿ ಯೋಜನೆಗೆ ಕಾರ್ಯಸಾಧ್ಯತೆಯ ಅಧ್ಯಯನಕ್ಕೆ ಅನುಮತಿ ನೀಡಿತ್ತು.
ಶಿವಕುಮಾರ್ ಅವರು ಯೋಜನೆಗೆ 2018 ರಲ್ಲಿ 1,000 ಕೋಟಿ ಹಣ ಬೇಕಾಗುತ್ತದೆ ಎಂದು ಸಮರ್ಥಿಸಿಕೊಂಡಿದ್ದರು, "ತಮಿಳುನಾಡಿಗೆ ನಿಗದಿತ ಪ್ರಮಾಣದ ನೀರನ್ನು ಬಿಡುಗಡೆ ಮಾಡಲು ಇದು ಅಡ್ಡಿಯಾಗುವುದಿಲ್ಲ ಮತ್ತು ಅದನ್ನು ನೀರಾವರಿ ಉದ್ದೇಶಗಳಿಗಾಗಿ ಬಳಸಲಾಗುವುದಿಲ್ಲ" ಎಂದು ಹೇಳಿದರು. ಮೇಕೆದಾಟು ವಿಚಾರವಾಗಿ ತಮಿಳುನಾಡು ಜತೆ ಮಾತುಕತೆ ನಡೆಸಲು ಕರ್ನಾಟಕ ಸರ್ಕಾರ ಸಿದ್ಧವಿದೆ ಎಂದು ಹೇಳಿದ್ದರು.
ಕರ್ನಾಟಕ ಸರ್ಕಾರ ಮೇಕೆದಾಟಿನಲ್ಲಿ ಅಣೆಕಟ್ಟು ನಿರ್ಮಿಸಲು ಕಾರಣ ಏನು?
ಕಾವೇರಿ ನ್ಯಾಯಾಧೀಕರಣ ಐತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಪ್ರತಿವರ್ಷ ಕರ್ನಾಟಕ 177 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡಬೇಕೆಂದು ಆದೇಶ ನೀಡಿದೆ. ಈ ನೀರಿನ ಜೊತೆಗೆ ಹೆಚ್ಚುವರಿಯಾಗಿ ಒಂದು ಅಂದಾಜಿನ ಪ್ರಕಾರ 80, 90 ಟಿಎಂಸಿ ನೀರು ತಮಿಳುನಾಡಿಗೆ ಸೇರುತ್ತದೆ. ಹೀಗೆ ರಾಜ್ಯದಿಂದ ಹರಿದು ಹೋಗುತ್ತಿರುವ ಈ ನೀರನ್ನು ಸಂಗ್ರಹಿಸಿ ಬೆಂಗಳೂರು ನಗರಕ್ಕೆ ಪೂರೈಕೆ ಮಾಡಲು ಕರ್ನಾಟಕ ಸರ್ಕಾರ ಅಣೆಕಟ್ಟು ನಿರ್ಮಿಸಲು ನಿರ್ಧಾರಿಸಿದೆ.
ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದೇಕೆ?
ತಮಿಳುನಾಡು 2015 ರಲ್ಲಿ ಅಣೆಕಟ್ಟಿನ ವಿರುದ್ಧ ವ್ಯಾಪಕ ಪ್ರತಿಭಟನೆ ಕೈಗೊಂಡವು, ವಿವಿಧ ಮಧ್ಯಸ್ಥಗಾರರ ಬೆಂಬಲದೊಂದಿಗೆ ರಾಜ್ಯಾದ್ಯಂತ ಬಂದ್ ನಡೆಯಿತು. ರಾಜ್ಯ ವಿಧಾನಸಭೆಯು ಡಿಸೆಂಬರ್ 2018 ಮತ್ತು ಜನವರಿ 2022 ರಲ್ಲಿ ಯೋಜನೆಯ ವಿರುದ್ಧ ಸರ್ವಾನುಮತದ ನಿರ್ಣಯಗಳನ್ನು ಅಂಗೀಕರಿಸಿತು.
ಪ್ರಧಾನಿ ಬಳಿಗೆ ನಿಯೋಗ
ತಮಿಳುನಾಡಿನಲ್ಲಿ 2016ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ, ಡಿಎಂಡಿಕೆಯ ಕ್ಯಾಪ್ಟನ್ ವಿಜಯಕಾಂತ್ ಅವರು ಈ ವಿಷಯದ ಬಗ್ಗೆ ಪ್ರಧಾನಿಯನ್ನು ಭೇಟಿ ಮಾಡಲು ವಿರೋಧ ಪಕ್ಷದ ನಾಯಕರ ನಿಯೋಗವನ್ನು ನಡೆಸಿದರು. ಯೋಜನೆಗೆ ಕೇಂದ್ರದ ಸಹಕಾರ ಕೋರಿ ಕರ್ನಾಟಕದಿಂದ ಪ್ರಧಾನಿ ಬಳಿಗೆ ಸರ್ವಪಕ್ಷ ನಿಯೋಗವನ್ನು ಸಿದ್ದರಾಮಯ್ಯ ನೇತೃತ್ವ ವಹಿಸಿದ್ದರು.
ತಮಿಳುನಾಡಿನ ವಾದ ಏನು?
ಆಗಸ್ಟ್ 2021 ರಲ್ಲಿ, ತಮಿಳುನಾಡು ಯೋಜನೆಯ ವಿರುದ್ಧ ಸುಪ್ರೀಂ ಕೋರ್ಟ್ಗೆ ಮೊರೆ ಹೋಗಿತ್ತು. ತಮಿಳುನಾಡಿನ ಪ್ರಮುಖ ವಾದಗಳೆಂದರೆ ಕರ್ನಾಟಕವು ನದಿಯ ಮೇಲೆ ಎರಡು ಜಲಾಶಯಗಳನ್ನು ನಿರ್ಮಿಸುವ ಮೂಲಕ ನದಿಯ ಹರಿವನ್ನು ಮಾರ್ಪಡಿಸಲು ಪ್ರಯತ್ನಿಸುತ್ತಿದೆ.ತಮಿಳುನಾಡಿಗೆ ನೈಸರ್ಗಿಕವಾಗಿಯೇ ಮಳೆ ಮೂಲಕ ಹೆಚ್ಚುವರಿ ನೀರು ಬರುತ್ತದೆ. ಅದರೆ ಈ ಅಣೆಕಟ್ಟು ನಿರ್ಮಿಸುವ ಮೂಲಕ ಕರ್ನಾಟಕ ತಮಿಳುನಾಡಿನ ರೈತರ ಕೃಷಿಗೆ ಅಡ್ಡಗಾಲು ಹಾಕುತ್ತಿದೆ ಎಂದು ತಮಿಳುನಾಡು ವಾದಿಸುತ್ತಿದೆ.
ಕರ್ನಾಟಕದ ವಾದ ಏನು?
ಪ್ರತಿವರ್ಷ 177.25 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡುವುದು ನಮ್ಮ ಹೊಣೆ. ಒಂದು ವೇಳೆ ನಾವು ಅಷ್ಟು ಪ್ರಮಾಣದ ನೀರನ್ನು ಬಿಡದಿದ್ದರೆ ತಮಿಳುನಾಡು ಪ್ರಶ್ನಿಸುವುದು ಸರಿ. 2018 ರಲ್ಲಿ ಭಾರೀ ಮಳೆಯಾದ ಪರಿಣಾಮ ಈಗಾಗಲೇ ಕರ್ನಾಟಕದಿಂದ 310 ಟಿಎಂಸಿಗಿಂತಲೂ ಹೆಚ್ಚಿನ ಪ್ರಮಾಣದ ನೀರು ತಮಿಳುನಾಡು ಹರಿದುಹೋಗಿದೆ. ಮೆಟ್ಟೂರಿನಲ್ಲಿ ಅಧಿಕ ನೀರಿನ ಸಂಗ್ರಹ ಸಾಮರ್ಥ್ಯ ಇಲ್ಲದೇ ಇರುವ ಕಾರಣ 100 ಟಿಎಂಸಿಗೂ ಹೆಚ್ಚು ನೀರು ಸಮುದ್ರಕ್ಕೆ ಹರಿದು ಹೋಗಿದೆ. ಮೇಕೆದಾಟಿನಲ್ಲಿ ಅಣೆಕಟ್ಟೆ ಇದ್ದಿದ್ದರೆ ಕನಿಷ್ಠ 60 ಟಿಎಂಸಿ ಹಿಡಿದಿಟ್ಟುಕೊಳ್ಳಬಹುದಾಗಿತ್ತು. ಒಂದು ಡ್ಯಾಂ ಇದ್ದಿದ್ದರೆ ತಮಿಳುನಾಡಿಗೆ ತಿಂಗಳವಾರು ಕೋಟಾದಂತೆ ನೀರು ಬಿಡುಗಡೆ ಮಾಡಲು ಕರ್ನಾಟಕಕ್ಕೂ ಅನುಕೂಲವಾಗುತ್ತಿತ್ತು. ನಾವು ಕುಡಿಯುವ ನೀರಿಗಾಗಿ ಡ್ಯಾಂ ಕಟ್ಟುತ್ತೇವೆಯೇ ಹೊರತು ವಿದ್ಯುತ್ ಉತ್ಪಾದನೆಯೇ ನಮ್ಮ ಮೂಲ ಉದ್ದೇಶ ಅಲ್ಲ. ನದಿ ನೀರಿನ ಹಂಚಿಕೆ ವಿಚಾರದಲ್ಲಿ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಬೇಕೆಂದು ಎಂದು ಅಂತಾರಾಷ್ಟ್ರೀಯ ಜಲ ನೀತಿಯೇ ಹೇಳಿದೆ. ಹೀಗಾಗಿ ನಾವು ಎತ್ತಿಕೊಂಡ ಮೇಕೆದಾಟು ಯೋಜನೆ ನ್ಯಾಯ ಸಮ್ಮತವಾಗಿದೆ.
ಈ ಕ್ರಮವು ಸಿಆರ್ಡಬ್ಲ್ಯುಟಿಯ ಅಂತಿಮ ಪುರಸ್ಕಾರವನ್ನು ಉಲ್ಲಂಘಿಸುತ್ತದೆ ಮತ್ತು ಕೃಷ್ಣರಾಜ ಸಾಗರ ಮತ್ತು ಕಬಿನಿ ಜಲಾಶಯಗಳ ಕೆಳಗಿನ ಮಧ್ಯಂತರ ಜಲಾನಯನ ಪ್ರದೇಶ ಮತ್ತು ಕರ್ನಾಟಕ ಮತ್ತು ತಮಿಳುನಾಡು ಗಡಿಯಲ್ಲಿರುವ ಬಿಲ್ಲಿಗುಂಡುಲು ಹರಿವನ್ನು ತಡೆಹಿಡಿಯುತ್ತದೆ ಎಂದು ರಾಜ್ಯ ವಾದಿಸಿದೆ.
ಕರ್ನಾಟಕಕ್ಕೆ ಈ ಅಣೆಕಟ್ಟಿನಿಂದ ಆಗುವ ಲಭಗಳು ಏನು?
ಬೆಂಗಳೂರು ನಗರಕ್ಕೆ ನೀರು ಬರುವುದು ಕೆಆರ್ಎಸ್ ಡ್ಯಾಂನಿಂದ. ಮಳೆಗಾಲದಲ್ಲಿ ಡ್ಯಾಂ ಭರ್ತಿಯಾದರೆ ಬೆಂಗಳೂರು ಜನತೆಗೆ ನೀರು ಭಾಗ್ಯ. ಬೆಂಗಳೂರು ನಗರಕ್ಕೆ ಪ್ರತಿದಿನ 1400 ದಶಲಕ್ಷ ಲೀಟರ್ ಅಗತ್ಯವಿದೆ. ಬೇಸಿಗೆ ಸಮಯದಲ್ಲಿ ನೀರಿನ ಬೇಡಿಕೆ ಶೇ.15ರಷ್ಟು ಹೆಚ್ಚಾಗುತ್ತದೆ. ತಿಪ್ಪಗೊಂಡನಹಳ್ಳಿ ಜಲಾಶಯದಿಂದ 2012ರಲ್ಲಿ ನೀರು ಪಂಪಿಂಗ್ ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ಬೆಂಗಳೂರಿನ ನೀರಿನ ಬೇಡಿಕೆ ಹೆಚ್ಚಾಗುತ್ತಿದೆ. ಹೀಗಾಗಿ ಇಲ್ಲಿ ಸಂಗ್ರಹವಾದ ಡ್ಯಾಂ ನೀರನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆಯ ಕುಡಿಯುವ ನೀರಿನ ಯೋಜನೆಗೆ ಬಳಸುವ ಉದ್ದೇಶ ರಾಜ್ಯ ಸರ್ಕಾರದ್ದು.
ಇದನ್ನೂ ಓದಿ: Gruhalakshmi Scheme: 2 ಸಾವಿರ ಪಡೆಯಲು ಅರ್ಜಿ ಹಾಕ್ಬೇಕಾ? ಕ್ಯೂ ನಿಲ್ಬೇಕಾ? 'ಗೃಹಲಕ್ಷ್ಮಿ'ಯರು ಹಣ ಪಡೆಯೋದು ಹೇಗೆ?
ಯೋಜನೆ ಜಾರಿಗೆ ಅಡ್ಡಿ ಏನು?
ಮೇಕೆದಾಟು ಯೋಜನೆಗೆ ಕಾನೂನು ಸಮ್ಮತಿ ಸಿಕ್ಕರೂ, ಕೇಂದ್ರ ಪರಿಸರ ಇಲಾಖೆ ಇನ್ನೂ ಗ್ರೀನ್ ಸಿಗ್ನಲ್ ನೀಡಿಲ್ಲ. ಕಾರಣ, ಮೇಕೆದಾಟು ಯೋಜನೆಯಿಂದ 3181.9 ಹೆಕ್ಟೇರ್ ಕಾವೇರಿ ವನ್ಯಜೀವಿ ಅಭಯಾರಣ್ಯದ ಪ್ರದೇಶ ಹಾಗೂ 1869.5 ಹೆಕ್ಟೇರ್ ಅರಣ್ಯ ಭೂಮಿ ಹಾನಿಗೊಳಗಾಗುವ ಸಾಧ್ಯತೆ ಇದೆ. ಯೋಜನೆ ಜಾರಿಗೆ ಬಂದರೆ ಭಾರೀ ಪ್ರಮಾಣದಲ್ಲಿ ಅರಣ್ಯ ಪ್ರದೇಶ ಮುಳುಗಡೆಯಾಗುವುದು, ಆನೇಕ ಪ್ರಾಣಿಗಳ ಜೀವ ಹೋಗುವುದು ಎಂಬುವುದು ಪರಿಸರವಾದಿಗಳ ವಾದ. ಈ ಅರಣ್ಯ ಪ್ರದೇಶದಲ್ಲಿ ಆನೆಗಳು ಹೆಚ್ಚಾಗಿದ್ದು, ಆನೆ ಕಾರಿಡಾರ್ಗೂ ಧಕ್ಕೆಯಾಗುವ ಆತಂಕ ಹೆಚ್ಚಿನ ಜನರಲ್ಲಿದೆ.ಇದರ ಪರಿಣಾಮವಾಗಿ ಕೇಂದ್ರ ಅರಣ್ಯ ಇಲಾಖೆ ಯೋಜನೆಗೆ ಗ್ರೀನ್ ಸಿಗ್ನಲ್ ನೀಡಿಲ್ಲ ಎಂದು ಮೂಲಗಳು ತಿಳಿಸಿವೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ