ನವದೆಹಲಿ(ಜೂ.23): ಇಂದು ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ಮಹತ್ವದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯಲಿರುವ ಸಭೆಯಲ್ಲಿ ಐದು ಪ್ರಮುಖ ಅಂಶಗಳ ಬಗ್ಗೆ ಚರ್ಚೆ ಆಗಲಿದೆ ಎಂದು ತಿಳಿದು ಬಂದಿದೆ.
ಇನ್ನು, ಚರ್ಚೆಯಾಗಲಿರುವ ಐದು ಅಂಶಗಳೆಂದರೆ ಒಂದು ಭಾರತ ಮತ್ತು ಚೀನಾ ಗಡಿಯಲ್ಲಿ ಉಂಟಾಗಿರುವ ಉದ್ವಿಗ್ನ ವಾತಾವರಣದ ಬಗ್ಗೆ. ಎರಡನೆಯದು ಚೀನಾ ಸಮಸ್ಯೆ ಹಾಗೂ ಭಾರತ- ಚೀನಾ ಸೈನಿಕರ ನಡುವೆ ನಡೆದ ಸಂಘರ್ಷದ ಬಗ್ಗೆ. ಮೂರನೆಯದು ಈ ಸಂಕಷ್ಟದ ಪರಿಸ್ಥಿತಿಯನ್ನು ನಿಭಾಯಿಸಲು ವಿಫಲವಾಗಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಬಗ್ಗೆ ಎನ್ನಲಾಗಿದೆ.
ಜತೆಗೆ ನಾಲ್ಕನೆಯ ವಿಷಯ ದೇಶದಲ್ಲಿ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ನಿಯಂತ್ರಿಸಲು ವೈಫಲ್ಯವಾಗಿರುವ ಸರ್ಕಾರದ ನಡೆಗಳ ಬಗ್ಗೆ. ಐದನೇ ವಿಚಾರದ ಅಂತಾರಾಷ್ಟ್ರೀಯ ಮಾರುಕಟ್ಟೆಲ್ಲಿ ಕ್ರೂಡ್ ಆಯಿಲ್ ದರ ಸತತವಾಗಿ ಇಳಿಕೆಯಾಗುತ್ತಿದ್ದರೂ ಮೋದಿ ಸರ್ಕಾರ ಕಳೆದ ಹದಿನೇಳು ದಿನಗಳಿಂದ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರುಸುತ್ತಿರುವ ಬಗ್ಗೆ ಚರ್ಚೆಯಾಗಲಿದೆ.
ಈ ಎಲ್ಲಾ ವಿಷಯಗಳಲ್ಲಿ ಕಾಂಗ್ರೆಸ್ ಪಕ್ಷ ಯಾವ ನಿಲುವನ್ನು ತೆಗೆದುಕೊಳ್ಳಬೇಕು? ಕೇಂದ್ರ ಸರ್ಕಾರಕ್ಕೆ ಏನು ಸಲಹೆ ಕೊಡಬೇಕು? ಕೇಂದ್ರ ಸರ್ಕಾರದ ವಿರುದ್ಧ ಯಾವ ರೀತಿಯ ಹೋರಾಟ ಮಾಡಬೇಕು? ಎಂಬಿತ್ಯಾದಿ ಬಗ್ಗೆ ಕೂಡ ಸಭೆಯಲ್ಲಿ ಸಮಾಲೋಚನೆ ನಡೆಸಲಾಗುತ್ತದೆ.
ಇದನ್ನೂ ಓದಿ: Delhi Coronavirus: ದೆಹಲಿಯಲ್ಲಿ ಕೋವಿಡ್-19: ಒಂದೇ ದಿನ 2,909 ಕೇಸ್, 60 ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಇಷ್ಟಕ್ಕೂ ಮೇಲಿನ ಯಾವುದೇ ಪ್ರಮುಖ ವಿಷಯಗಳ ಬಗ್ಗೆ ಬೇರಾವುದೇ ಪ್ರತಿಪಕ್ಷಗಳು ಸೊಲ್ಲೆತ್ತುತ್ತಿಲ್ಲ. ಆದರೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಾತ್ರ ಭಾರತ ಮತ್ತು ಚೀನಾ ಗಡಿಯಲ್ಲಿ ಸಮಸ್ಯೆ ಆರಂಭವಾದಾಗಿನಿಂದಲೂ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ನರೇಂದ್ರ ಮೋದಿ ಅವರಿಗೆ ಖಡಕ್ ಪ್ರಶ್ನೆ ಮಾಡುತ್ತಿದ್ದಾರೆ. ಗಡಿಯಲ್ಲಿ ಏನಾಗುತ್ತಿದೆ ಹೇಳಿ ಎಂದು ಒತ್ತಾಯಿಸುತ್ತಿದ್ದಾರೆ.
ಎರಡೂ ದೇಶಗಳ ಸೈನಿಕರ ನಡುವೆ ಸಂಘರ್ಷವಾಗಿ 20 ಮಂದಿ ಭಾರತೀಯ ಸೈನಿಕರು ಮೃತಪಟ್ಟ ಮೇಲೆ ಸೋನಿಯಾ ಗಾಂಧಿ, ಪ್ರಿಯಾಂಕ ಗಾಂಧಿ ಹಾಗೂ ಕೆಲ ಕಾಂಗ್ರೆಸ್ ನಾಯಕರು ಕೂಡ ರಾಹುಲ್ ಗಾಂಧಿ ಅವರೊಂದಿಗೆ ದನಿಗೂಡಿಸಿದ್ದಾರೆ. ಈಗ ಕಾಂಗ್ರೆಸ್ ಪಕ್ಷವೇ ಕಾರ್ಯಕಾರಿ ಸಮಿತಿ ಸಭೆಯಲ್ಲಿ ವಿಷಯ ಪ್ರಸ್ತಾಪಿಸುತ್ತಿದೆ. ಕಳೆದ 17 ದಿನಗಳಿಂದ ನಿರಂತರವಾಗಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯಾಗುತ್ತಿರುವುದನ್ನು ವಿರೋಧಿಸಿ ಹೋರಾಟ ರೂಪಿಸುವ ಬಗ್ಗೆ ಇಂದು ನಿರ್ಧಾರಕ್ಕೆ ಬರುವ ಸಾಧ್ಯತೆ ಇದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ