ಭಾರತದಲ್ಲಿ ಮೊದಲ ಬಾರಿಗೆ ಡಿಪ್ಲೋಮಾ ನಂತರ ಪದವಿ ಮತ್ತು ಸ್ನಾತಕೋತ್ತರ ಹಂತಗಳಲ್ಲಿ ಒಂದೇ ಪ್ರಶ್ನೆ ಪತ್ರಿಕೆಗೆ ದ್ವಿಭಾಷಾ ಉತ್ತರಗಳನ್ನು ಬರೆಯುವ ಅವಕಾಶವನ್ನು ಕರ್ನಾಟಕ ಸರ್ಕಾರ ಪರಿಚಯಿಸುತ್ತಿದೆ. ಉನ್ನತ ಶಿಕ್ಷಣದಲ್ಲಿನ (Higher Education) ಪ್ರಮುಖ ಸುಧಾರಣೆಯಲ್ಲಿ, ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿ (KSHEC) ಪರೀಕ್ಷೆಗಳನ್ನು ಬರೆಯುವಾಗ ವಿದ್ಯಾರ್ಥಿಗಳಿಗೆ (Students) ದ್ವಿಭಾಷಾ ಆಯ್ಕೆಗಳನ್ನು ಒದಗಿಸಲು ನಿರ್ಧರಿಸಿದೆ. ಯುಜಿ ಮತ್ತು ಪಿಜಿ ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆಯಲ್ಲಿ ಇಂಗ್ಲಿಷ್ (English) ಮತ್ತು ಕನ್ನಡ ಎರಡರಲ್ಲೂ ತಮ್ಮ ಉತ್ತರಗಳನ್ನು (Answer) ಬರೆಯಲು ಅನುಮತಿಸಲಾಗಿದೆ.
23ನೇ ಸಾಮಾನ್ಯ ಸಭೆಯಲ್ಲಿ ನಿರ್ಧಾರ
2023ರಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷ ಮತ್ತು ನಂತರದ ಮುಂಬರುವ ಪರೀಕ್ಷೆಗಳಲ್ಲಿ ಈ ವಿಧಾನವನ್ನು ಅಳವಡಿಸಿಕೊಳ್ಳಲು ನಿರ್ಧರಿಸಲಾಗಿದೆ. ಕರ್ನಾಟಕ ಉನ್ನತ ಶಿಕ್ಷಣ ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ ಅವರ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ (ಕೆಎಸ್ಹೆಚ್ಇಸಿ) 23 ನೇ ಸಾಮಾನ್ಯ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಕರ್ನಾಟಕದ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ.
ದ್ವಿ ಭಾಷೆಗಳಲ್ಲಿ ಉತ್ತರ ಬರೆಯಲು ವಿದ್ಯಾರ್ಥಿಗಳಿಗೆ ಅನುವು
ಪ್ರಸ್ತುತ, ಪದವಿ ಅಥವಾ ಸ್ನಾತಕೋತ್ತರ ಕೋರ್ಸ್ಗಳ ವಿದ್ಯಾರ್ಥಿಗಳು ಉತ್ತರ ಪತ್ರಿಕೆಗಳನ್ನು ಯಾವ ಭಾಷೆಯಲ್ಲಿ ಬರೆಯಬೇಕು ಎಂಬುದನ್ನು ಪರೀಕ್ಷೆಗೆ ಮುಂಚಿತವಾಗಿ ಆಯ್ಕೆ ಮಾಡಬೇಕಾಗುತ್ತದೆ. ಆದರೆ ಈಗ ಹೊಸ ನಿಯಮಗಳನುಸಾರ ಎರಡೂ ಭಾಷೆಗಳನ್ನು ಬಳಸಿಕೊಂಡು ಪತ್ರಿಕೆಗೆ ಉತ್ತರಗಳನ್ನು ಬರೆಯಲು ವಿದ್ಯಾರ್ಥಿಗಳಿಗೆ ಅನುವು ಮಾಡಿಕೊಡುತ್ತದೆ. ಇದರರ್ಥ, ಕೆಲವು ಪ್ರಶ್ನೆಗಳಿಗೆ ಕನ್ನಡದಲ್ಲಿ ಮತ್ತು ಇನ್ನು ಕೆಲವು ಪ್ರಶ್ನೆಗಳಿಗೆ ಇಂಗ್ಲಿಷ್ನಲ್ಲಿ ಮಿಶ್ರಣ ಮಾಡಿ ಉತ್ತರ ಬರೆಯಬಹುದು.
ಇದನ್ನೂ ಓದಿ: India And Germany: ಶಿಕ್ಷಣ ಹಾಗೂ ಉದ್ಯೋಗ ಅನುಕೂಲಕ್ಕಾಗಿ ಸಂಚಾರ ಒಪ್ಪಂದಕ್ಕೆ ಸಹಿ ಹಾಕಿದ ಭಾರತ ಮತ್ತು ಜರ್ಮನ್
"ಉನ್ನತ ಶಿಕ್ಷಣದಲ್ಲಿ ಕನ್ನಡವನ್ನು ಪ್ರೋತ್ಸಾಹಿಸಲು ಕ್ರಮ"
ಸಭೆಯ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ ಸಿ. ಎನ್ ಅಶ್ವಥ್ ನಾರಾಯಣ್, "ಉನ್ನತ ಶಿಕ್ಷಣದಲ್ಲಿ ಕನ್ನಡವನ್ನು ಪ್ರೋತ್ಸಾಹಿಸಲು ಇದು ಒಂದು ಹೆಜ್ಜೆಯಾಗಿದೆ, ಪ್ರಸ್ತುತ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳು ಯಾವುದೇ ಒಂದು ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶವಿದೆ. ಉನ್ನತ ಶಿಕ್ಷಣ ಇಲಾಖೆಯು ಇತ್ತೀಚೆಗೆ ಡಿಪ್ಲೊಮಾ ಮತ್ತು ಪಾಲಿಟೆಕ್ನಿಕ್ ಕೋರ್ಸ್ಗಳಲ್ಲಿ ಈ ವ್ಯವಸ್ಥೆಯನ್ನು ಪರಿಚಯಿಸಿದೆ. ಹೀಗಾಗಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಯುಜಿ ಮತ್ತು ಪಿಜಿಯಲ್ಲೂ ಈ ವ್ಯವಸ್ಥೆ ಪರಿಚಯಿಸಲಾಗುತ್ತಿದೆ" ಎಂದರು.
ಮೌಲ್ಯಮಾಪನದಲ್ಲಿ ಎಡವಟ್ಟಾಗುವುದಿಲ್ಲ
ಉಭಯ ಭಾಷೆಯ ಉತ್ತರಗಳು ಮೌಲ್ಯಮಾಪನದಲ್ಲಿ ಸಮಸ್ಯೆಗಳನ್ನು ಉಂಟುಮಾಡುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅಶ್ವಥ್ ನಾರಾಯಣ್ "ಶಿಕ್ಷಕರು ತಮ್ಮ ಭಾಷೆಗಳಲ್ಲಿ ನಿರರ್ಗಳವಾಗಿ ಮಾತನಾಡುತ್ತಾರೆ ಮತ್ತು ಯಾವುದೇ ತೊಂದರೆಗಳನ್ನು ಎದುರಿಸುವುದಿಲ್ಲ. ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಇಂಗ್ಲಿಷ್ನಲ್ಲಿ ಸುಲಭವಾಗಿ ಪರೀಕ್ಷೆ ಬರೆಯುತ್ತಾರೆ, ಆದರೆ ಕಲಾ ವಿಭಾಗದ ವಿದ್ಯಾರ್ಥಿಗಳಿಗೆ ಇದು ಸ್ವಲ್ಪ ಕಷ್ಟವಾಗಬಹುದು. ಇದನ್ನೇಲ್ಲಾ ಗಮನಿಸಿ ಈ ಕ್ರಮಕ್ಕೆ ಮುಂದಾಗಿದ್ದೇವೆ. ಶಿಕ್ಷಕರು ಕೂಡ ಭಾಷೆಗಳೊಂದಿಗೆ ಪರಿಚಿತರಾಗಿದ್ದಾರೆ ಮತ್ತು ಉತ್ತರಗಳನ್ನು ಸರಿಯಾಗಿ ಮೌಲ್ಯಮಾಪನ ಮಾಡುತ್ತಾರೆ" ಎಂದಿದ್ದಾರೆ.
ಇನ್ನೂ ಕೆಎಸ್ಹೆಚ್ಇಸಿ ಉಪಾಧ್ಯಕ್ಷ ಪ್ರೊ.ಬಿ.ತಿಮ್ಮೇಗೌಡ ಮಾತನಾಡಿ, ''ವಿದ್ಯಾರ್ಥಿಗಳಿಗೆ ಭಾಷೆಯ ಅಡೆತಡೆಯಾಗದಂತೆ ಈ ನಿರ್ಧಾರ ಕೈಗೊಳ್ಳಲಾಗುತ್ತಿದೆ. ಹೆಚ್ಚಿನ ವಿದ್ಯಾರ್ಥಿಗಳು ಇದನ್ನು ಬಳಸಿಕೊಳ್ಳುವುದಿಲ್ಲ ಎಂದು ನಾವು ನಿರೀಕ್ಷಿಸುತ್ತಿರುವಾಗ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ತಮ್ಮ ಪರೀಕ್ಷೆಗಳನ್ನು ಬರೆಯುವಾಗ ಅರ್ಥಮಾಡಿಕೊಳ್ಳಲು ಇದು ಅವಕಾಶವನ್ನು ನೀಡುತ್ತದೆ” ಎಂದು ಅವರು ತಿಳಿಸಿದರು.
ಸರ್ಕಾರದ ನಿರ್ಧಾರಕ್ಕೆ ಟೀಕೆ
ಕೆಲವು ತಜ್ಞರು ಈ ಕ್ರಮವನ್ನು ಟೀಕಿಸಿದ್ದಾರೆ. ವಿಧಾನಸಭೆ ಚುನಾವಣೆಗೆ ಕೇವಲ ಮೂರು ತಿಂಗಳಿರುವಾಗ ಈ ನಿರ್ಧಾರಕ್ಕೆ ಬಂದಿದ್ದು, ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೆಲವರು ಅಭಿಪ್ರಾಯ ಪಟ್ಟಿದ್ದಾರೆ. ಶಿಕ್ಷಣದಲ್ಲಿ ರಾಜಕೀಯವನ್ನು ತರುವುದು ಒಳ್ಳೆಯದಲ್ಲ. ಶಿಕ್ಷಣದಲ್ಲಿ ಭಾಷೆಯ ಅಡೆತಡೆಗಳನ್ನು ಸೃಷ್ಟಿಸಬಾರದು. ಸರ್ಕಾರ ಎಲ್ಲರನ್ನು ಸಮಾಧಾನಪಡಿಸುವ ಸಮಯದಲ್ಲಿ ಕೆಲವು ತಪ್ಪುಗಳನ್ನು ಮಾಡುತ್ತಿದೆ. ಎಂದು ಶಿಕ್ಷಣ ತಜ್ಞರು ಸರ್ಕಾರದ ಕ್ರಮವನ್ನು ಟೀಕಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ