ಜೈಪುರ (ಆ.14): ಹಿರಿಯ ನಾಯಕರ ಜೊತೆ ಸಂಧಾನ ಮಾತುಕತೆ ಪೂರ್ಣಗೊಂಡ ನಂತರ ಸಚಿನ್ ಪೈಲಟ್ ಕಾಂಗ್ರೆಸ್ ಪಕ್ಷಕ್ಕೆ ಮರಳಿದ್ದಾರೆ. ಈ ಬೆನ್ನಲ್ಲೇ ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಹಾಕಲು ಬಿಜೆಪಿ ಪ್ರಯತ್ನ ನಡೆಸುತ್ತಿದೆ. ಹೀಗಾಗಿ ಇಂದಿನ ವಿಧಾನಸಭೆ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಬಿಜೆಪಿ ಸಿದ್ಧತೆ ನಡೆಸಿಕೊಂಡಿದೆ. ಈ ಮಧ್ಯೆ ಕಾಂಗ್ರೆಸ್ ವಿಶ್ವಾಸ ನಿರ್ಣಯ ಮಂಡಿಸಲು ಮುಂದಾಗಿದೆ.
ಶುಕ್ರವಾರ ಆರಂಭವಾಗುವ ಅಧಿವೇಶನದಲ್ಲಿ ಕಾಂಗ್ರೆಸ್ ಸರ್ಕಾರ ವಿಶ್ವಾಸ ನಿರ್ಣಯ ಮಂಡಿಸಲಿದೆ ಎಂದು ಪಕ್ಷದ ನಾಯಕರು ಹೇಳಿಕೊಂಡಿದ್ದಾರೆ. ಅಧಿವೇಶನಕ್ಕೂ ಮೊದಲು ಗುರುವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿತ್ತು. ಈ ಸಭೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಸೇರಿ ಇತರರು ಪಾಲ್ಗೊಂಡಿದ್ದರು.
ಅಧಿವೇಶನದ ನಿಯಮದ ಪ್ರಕಾರ ವಿರೋಧ ಪಕ್ಷಗಳು ಒಮ್ಮೆ ಅವಿಶ್ವಾಸ ನಿರ್ಯಣ ಮಂಡನೆ ಮಾಡಿದರೆ ಮತ್ತೆ ಆರು ತಿಂಗಳು ಅವಿಶ್ವಾಸ ನಿರ್ಣಯ ಮಂಡನೆ ಮಾಡಲು ಸಾಧ್ಯವಿಲ್ಲ. ಒಂದೊಮ್ಮೆ ಇಂದು ಕಾಂಗ್ರೆಸ್ ವಿಶ್ವಾಸ ಮಂಡನೆ ಮಾಡಿ ಗೆದ್ದರೆ ಬಿಜೆಪಿಗೆ ಭಾರೀ ಹಿನ್ನಡೆ ಉಂಟಾಗಲಿದೆ.
ನಿನ್ನೆ ನಡೆದ ಸಭೆಯಲ್ಲಿ ಇಂದು ಮಂಡನೆ ಮಾಡುವ ವಿಶ್ವಾಸ ನಿರ್ಣಯದ ಬಗ್ಗೆ ಚರ್ಚೆ ನಡೆಸಲಾಗಿದೆ. ಈ ಮೊದಲು ಬಂಡಾಯ ಎದ್ದಿದ್ದ ಸಚಿನ್ ಪೈಲಟ್ ಈಗ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ಗೆ ಬೆಂಬಲ ಸೂಚಿಸಿದ್ದಾರೆ. ಹೀಗಾಗಿ ಕಾಂಗ್ರೆಸ್ ತುಂಬಾನೇ ವಿಶ್ವಾಸದಲ್ಲಿದೆ.
ಬಂಡಾಯ ಏಳುವ ಮೂಲಕ ಸರ್ಕಾರವನ್ನೇ ಬೀಳಿಸಲು ಸಚಿನ್ ಪೈಲಟ್ ಮುಂದಾಗಿದ್ದರು. ತಮಗೆ ಸಿಎಂ ಸ್ಥಾನ ನೀಡಿ ಇಲ್ಲದಿದ್ದರೆ ಪಕ್ಷ ತೊರೆಯುತ್ತೇನೆ ಎಂದಿದ್ದರು. ಈ ಬೆನ್ನಲ್ಲೇ ಅವರು ಬೇರೆ ಪಕ್ಷ ಕಟ್ಟಲಿದ್ದಾರೆ, ಬಿಜೆಪಿ ಸೇರಲಿದ್ದಾರೆ ಎಂಬಿತ್ಯಾದಿ ವಿಚಾರಗಳು ಚರ್ಚೆಗೆ ಬಂದಿದ್ದವು. ಸೋಮವಾರ ದಿಢೀರ್ ಬೆಳವಣಿಗೆಯಲ್ಲಿ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯನ್ನು ಭೇಟಿ ಮಾಡಿದ್ದರು. ಈ ವೇಳೆ ಸಂಧಾನ ಮಾತುಕತೆ ಯಶಸ್ವಿಯಾಗಿತ್ತು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ