ನವದೆಹಲಿ: ದೇಶದಲ್ಲಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ (Lok Sabha Election) ಭಾರತೀಯ ಜನತಾ ಪಕ್ಷಕ್ಕೆ (BJP) ಪ್ರತಿ ಸ್ಪರ್ಧಿಯೇ ಇಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿದ್ದಾರೆ. ಕೇಂದ್ರ ಸರ್ಕಾರದ (Center Government) ಉಪಕ್ರಮಗಳು ತಳಮಟ್ಟದ ಜನರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಯನ್ನು ಗುರುತಿಸಿವೆ. ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ (Narendra Modi)ದೇಶದ ನಾಗರಿಕರು ತುಂಬು ಹೃದಯದಿಂದ ಸಾಗುತ್ತಿದ್ದಾರೆ. ಕೇಂದ್ರದಲ್ಲಿ ತಮ್ಮ ಪಕ್ಷ ಮಾಡಿರುವ ಕೆಲಸಗಳ ಬಗ್ಗೆ ವಿವರಿಸಿದ ಅಮಿತ್ ಶಾ ಮುಂಬರುವ ಲೋಕಸಭೆ ಮತ್ತು ರಾಜ್ಯ ವಿಧಾನಸಭಾ ಚುನಾವಣೆಗಳಲ್ಲೂ (Assembly Election) ಬಿಜೆಪಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಎಎನ್ಐ ಸುದ್ದಿ ಸಂಸ್ಥೆ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ ಅವರು, 2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಪ್ರಮುಖ ವಿರೋಧ ಪಕ್ಷ ಯಾವುದು ಎನ್ನುವುದರ ಬಗ್ಗೆ ದೇಶದ ಜನರು ನಿರ್ಧರಿಸುತ್ತಾರೆ. ಅವರು ಯಾವುದೇ ಪಕ್ಷಕ್ಕೆ ವಿರೋಧ ಪಕ್ಷದ ಸ್ಥಾನವನ್ನು ನೀಡಿಲ್ಲ ಎಂದು ತಿಳಿಸಿದ್ದಾರೆ.
ರಾಜ್ಯ ಚುನಾವಣೆಯಲ್ಲೂ ಬಿಜೆಪಿಗೆ ಗೆಲುವು
ಕರ್ನಾಟಕ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ಗಢ ಸೇರಿದಂತೆ ಈ ವರ್ಷ ಕೆಲವು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ರಾಜ್ಯಗಳಲ್ಲಿ ಬಿಜೆಪಿ ಉತ್ತಮ ಪ್ರದರ್ಶನ ನೀಡಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿ
ಬಿಜೆಪಿ ಆಡಳಿತದಲ್ಲಿ ಭಾರತ ಎಲ್ಲಾ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿದೆ. ದೇಶದ ಪ್ರಗತಿ, ದೇಶವನ್ನು ಸುಭದ್ರಗೊಳಿಸುವುದು ಮತ್ತು ಆರ್ಥಿಕತೆಯನ್ನು ಪ್ರಬಲಗೊಳಿಸುವುದು ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಆದ್ಯತೆಗಳಲ್ಲಿ ಒಂದಾಗಿದೆ. ವಿಶ್ವದಲ್ಲಿ ಭಾರತದ ಸಾಧನೆಗೆ ಮನ್ನಣೆ ಸಿಗುತ್ತಿದೆ ಎಂದರು.
ದೇಶದ ರಕ್ಷಣೆಯನ್ನು ಬಲಪಡಿಸುವುದು
ಆಂತರಿಕ ಭದ್ರತೆಯನ್ನು ಹೆಚ್ಚಿಸಲು ಮತ್ತು ರಕ್ಷಣಾ ವಲಯದಲ್ಲಿ ಆಮದು ಅವಲಂಬನೆಯನ್ನು ಕಡಿಮೆ ಮಾಡಲು ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ಭಾರತವನ್ನು ಉತ್ಪಾದನಾ ಕೇಂದ್ರವನ್ನಾಗಿ ಮಾಡಲು ಯಶಸ್ವಿ ಪ್ರಯತ್ನಗಳನ್ನು ಮಾಡಲಾಗಿದೆ. ರಕ್ಷಣಾ ವಲಯದಲ್ಲಿ ಸ್ವಾವಲಂಬನೆಯತ್ತ ಪ್ರಯತ್ನ ನಡೆಸಲಾಗಿದೆ. ಎಂಟು ವರ್ಷಗಳಲ್ಲಿ ಭಾರತವು ಇತರ ದೇಶಗಳ ಮೇಲಿನ ಅವಲಂಬನೆಯನ್ನು ಶೇಕಡಾ 30 ರಷ್ಟು ಕಡಿಮೆ ಮಾಡಿರುವುದು ದೊಡ್ಡ ಸಾಧನೆಯಾಗಿದೆ ಎಂದು ಅವರು ಅಮಿತ್ ಶಾ ಹೇಳಿದ್ದಾರೆ.
ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿ?
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಭಾರತ್ ಜೋಡೋ ಯಾತ್ರೆಯ ನಂತರ ರಾಹುಲ್ ಗಾಂಧಿ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮುವ ಸಾಧ್ಯತೆಯ ಕುರಿತು ಕೇಳಿದ ಪ್ರಶ್ನೆಗೆ, ಮೂರು ರಾಜ್ಯಗಳಲ್ಲಿ ಚುನಾವಣೆ ಇದೆ. ಭಾರತ್ ಜೋಡೋ ಯಾತ್ರೆಯ ಪ್ರಭಾವ ಏನೆಂದು ಅದರಲ್ಲಿ ಸಾಬೀತಾಗಲಿದೆ ಎಂದರು.
ಕರ್ನಾಟಕದಲ್ಲಿ ಬಿಜೆಪಿಗೆ ಬಹುಮತ
ಮುಂದಿನ ಕೆಲವು ತಿಂಗಳಲ್ಲಿ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಬಿಜೆಪಿ ಸಂಪೂರ್ಣ ಬಹುಮತ ಪಡೆದು ಅಧಿಕಾರವನ್ನು ಉಳಿಸಿಕೊಳ್ಳಲಿದೆ. ಕಳೆದ 2 ತಿಂಗಳಲ್ಲಿ ಕರ್ನಾಟಕಕ್ಕೆ 5 ಬಾರಿ ಭೇಟಿ ನೀಡಿದ್ದೇನೆ. ನಾನು ರಾಜ್ಯದ ಜನರ ನಾಡಿಮಿಡಿತವನ್ನು ಗ್ರಹಿಸಿದ್ದೇನೆ. ಕರ್ನಾಟಕದಲ್ಲಿ ಬಿಜೆಪಿಗೆ ಭಾರೀ ಜನಾದೇಶ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಂಡ್ಯದ ಬಗ್ಗೆಯೂ ಮಾತು
ಅಮಿತ್ ಶಾ ಸಂದರ್ಶನದ ವೇಳೆ ಮಂಡ್ಯ ಜಿಲ್ಲೆಯ ಬಗ್ಗೆಯೂ ಮಾತನಾಡಿದ್ದಾರೆ. ಅಲ್ಲಿನ ಜನ ವಂಶ ಪಾರಂಪರ್ಯ ಪಕ್ಷಗಳನ್ನು ಬಿಟ್ಟು ಬಿಜೆಪಿಯ ಅಭಿವೃದ್ಧಿ ರಾಜಕಾರಣವನ್ನು ಒಪ್ಪಿಕೊಳ್ಳುತ್ತಿದ್ದಾರೆ. ಇದು ಕರ್ನಾಟಕಕ್ಕೆ ಶುಭ ಸೂಚನೆಯಾಗಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಭಿವೃದ್ಧಿ ಪರ ಕೆಲಸಗಳನ್ನು ಮಾಡುತ್ತಿರುವ ಹಿನ್ನೆಲೆ ಮುಂಬರುವ ಚುನಾವಣೆಯಲ್ಲಿ ಗೆಲ್ಲಲಿದ್ದೇವೆ ಎನ್ನುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ