ಕೋಲ್ಕತ್ತ (ಪಶ್ಚಿಮ ಬಂಗಾಳ): ಚುನಾವಣಾ ಆಯೋಗವು (Election Commission) ಪಶ್ಚಿಮ ಬಂಗಾಳದ ವಿಧಾನಸಭಾ ಉಪಚುನಾವಣೆಯ (West Bengal Assembly Bypoll) ದಿನಾಂಕ ಘೋಷಿಸಿದ ದಿನವೇ ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಾಸಕ ಸೌಮೆನ್ ರಾಯ್ (BJP MLA Soumen Roy) ಅವರು ಶನಿವಾರ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಗೆ ಸೇರಿದ್ದಾರೆ. ಕಲಿಯಗಂಜ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ಸೌಮೆನ್ ರಾಯ್ ಅವರು ಈ ಹಿಂದೆ ಟಿಎಂಸಿಯ ಸದಸ್ಯರಾಗಿದ್ದರು. "ಬಿಜೆಪಿ ಶಾಸಕ ಸೌಮೆನ್ ರಾಯ್ ಬಂಗಾಳ ಮತ್ತು ಉತ್ತರ ಬಂಗಾಳದ ಅಭಿವೃದ್ಧಿಗೆ ನಮ್ಮೊಂದಿಗೆ ಸೇರಿಕೊಳ್ಳುತ್ತಿದ್ದಾರೆ" ಎಂದು ಟಿಎಂಸಿ ನಾಯಕ ಪಾರ್ಥ ಚಟರ್ಜಿ ಹೇಳಿದ್ದಾರೆ. "ಅವರು ಬಂಗಾಳದ ಸಂಸ್ಕೃತಿ ಮತ್ತು ಪರಂಪರೆಯನ್ನು ಹಾಗೆಯೇ ಉಳಿಸಿಕೊಳ್ಳಲು ಬಯಸುತ್ತಾರೆ" ಎಂದು ಅವರು ಹೇಳಿದರು.
ಸೌಮೆನ್ ರಾಯ್ ಟಿಎಂಸಿಗೆ ಸೇರಿದ ನಂತರ, ರಾಜ್ಯ ವಿಧಾನಸಭೆಯಲ್ಲಿ ಬಿಜೆಪಿಯ ಸಂಖ್ಯೆ 71 ಕ್ಕೆ ಇಳಿದಿದೆ. ಕಳೆದ ನಾಲ್ಕು ವಾರಗಳಲ್ಲಿ, ನಾಲ್ಕು ಬಿಜೆಪಿ ಶಾಸಕರು ಟಿಎಂಸಿಗೆ ಸೇರ್ಪಡೆಯಾಗಿದ್ದಾರೆ.
ಪಶ್ಚಿಮಬಂಗಾಳದ ಖಾಲಿ ಇರುವ ಮೂರು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಗೆ ಶನಿವಾರ ಚುನಾವಣಾ ಆಯೋಗ ದಿನಾಂಕ ನಿಗದಿಗೊಳಿಸಿ ಘೋಷಿಸಿದೆ. ಸಮ್ಸೆರ್ಗಂಜ್, ಜಂಗಿಪುರ್ ಹಾಗೂ ಭಬನಿಪುರ ಮೂರು ಕ್ಷೇತ್ರಗಳಿಗೆ ಸೆಪ್ಟೆಂಬರ್ 30ರಂದು ಉಪಚುನಾವಣೆ ನಡೆಯಲಿದೆ. ಅಕ್ಟೋಬರ್ 3ರಂದು ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ಹೇಳಿದೆ.
ಉಪಚುನಾವಣೆಯ ಘೋಷಣೆಯು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯ ವಿಧಾನಸಭೆಗೆ ಮರಳಲು ದಾರಿ ಮಾಡಿಕೊಡುತ್ತದೆ. ಚುನಾವಣಾ ಆಯೋಗ ಉಪಚುನಾವಣೆಗೆ ದಿನಾಂಕ ಘೋಷಿಸಿದ ಒಂದು ಗಂಟೆಯೊಳಗೆ, ಮಮತಾ ಬ್ಯಾನರ್ಜಿಗೆ ಮತ ಹಾಕುವಂತೆ ನಾಗರಿಕರಿಗೆ ಮನವಿ ಮಾಡಿರುವ ಪೋಸ್ಟರ್ಗಳನ್ನು ದಕ್ಷಿಣ ಕೋಲ್ಕತ್ತಾದ ಭಬನಿಪುರ ಪ್ರದೇಶದಲ್ಲಿ ಹಾಕಲಾಗಿತ್ತು.
ಕಳೆದ ಎರಡು ತಿಂಗಳ ಹಿಂದೆ ನಡೆದ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಮಮತಾ ಬಿಜೆಪಿ ನಾಯಕ ಸುವೇಂದು ಅಧಿಕಾರಿ ವಿರುದ್ಧ ನಂದಿ ಗ್ರಾಮದಲ್ಲಿ ಕಣಕ್ಕೆ ಇಳಿದಿದ್ದರು. ಟಿಎಂಸಿ ತೊರೆದು ಹೋದ ತಮ್ಮ ಈ ಹಿಂದಿನ ಆಪ್ತರಾಗಿದ್ದ ಸುವೇಂದು ಅಧಿಕಾರಿ ವಿರುದ್ಧ ಚುನಾವಣೆಗೆ ಸ್ಪರ್ಧಿಸಲು ಅವರು ತಮ್ಮ ಭವಾನಿಪುರ ಕ್ಷೇತ್ರವನ್ನು ತೊರೆದಿದ್ದರು. ತೀವ್ರ ಹಣಾಹಣಿಗೆ ಸಾಕ್ಷಿಯಾಗಿದ್ದ ಈ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಗೆಲುವು ಸಾಧಿಸುವ ಮೂಲಕ ಮಮತಾ ಸೋತರು. ನಂದಿ ಗ್ರಾಮದಲ್ಲಿ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಸೋಲು ಕಂಡರೂ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಅಧಿಕ ಬಹುಮತ ಪಡೆದು ಜಯಭೇರಿ ಬಾರಿಸಿತು. ಈ ಹಿನ್ನಲೆ ಅವರನ್ನು ಮುಖ್ಯಮಂತ್ರಿಯಾಗಿ ಪಕ್ಷ ಆಯ್ಕೆ ಮಾಡಿತು. ಇದೀಗ ನಡೆಯುತ್ತಿರುವ ಉಪಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರು ಮತ್ತೆ ಭಬನಿಪುರ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ.
ಮುಖ್ಯಮಂತ್ರಿಯಾಗಿ ಮುಂದುವರೆಯಲು ಮಮತಾ ಬ್ಯಾನರ್ಜಿ ಶಾಸಕರಾಗಿ ಆಯ್ಕೆಯಾಗುವುದು ಅನಿವಾರ್ಯವಾಗಿದೆ. ಈ ಹಿನ್ನಲೆ ಈಗ ತಮ್ಮ ಕ್ಷೇತ್ರವಾದ ಭಬನಿಪುರದಿಂದ ಅವರು ಚುನಾವಣೆ ಕಣಕ್ಕೆ ಇಳಿಯಲಿದ್ದಾರೆ. ಮಮತಾ ಅವರಿಗಾಗಿಯೇ ಭಬನಿಪುರದಲ್ಲಿ ಗೆಲುವು ಸಾಧಿಸಿದ್ದ ಟಿಎಂಸಿ ಅಭ್ಯರ್ಥಿ ಶೋಭಂದೇಬ್ ಚಟ್ಟೋಪಾಧ್ಯಾಯ ಫಲಿತಾಂಶ ಪ್ರಕಟವಾದ ಕೆಲವೇ ದಿನಗಳಲ್ಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಪಶ್ಚಿಮ ಬಂಗಾಳ ರಾಜ್ಯದಲ್ಲಿ ಕೋವಿಡ್- 19 ಪ್ರಕರಣಗಳು ಕಡಿಮೆಯಾಗಿರುವ ಕಾರಣ ಚುನಾವಣಾ ಆಯೋಗ ಉಪ ಚುನಾವಣೆ ನಡೆಸಲು ಸಜ್ಜಾಗಿದ್ದು, ಟಿಎಂಸಿ ಗೆಲುವಿನ ಉತ್ಸಾಹ ಹೊಂದಿದೆ. ನಾವು ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದೇವೆ ಎಂದು ಟಿಎಂಸಿ ಪ್ರಧಾನ ಕಾರ್ಯದರ್ಶಿ ಕುನಾಲ್ ಘೋಷ್ ತಿಳಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ