ನವದೆಹಲಿ(ಆ.24): ರಾಷ್ಟ್ರೀಯ ಕಾಂಗ್ರೆಸ್ ನಾಯಕತ್ವ ಬದಲಾವಣೆಗೆ ಬಲವಾದ ಕೂಗು ಕೇಳಿ ಬಂದಿದೆ. ಹೀಗಾಗಿ ಒಂದೆಡೆ ಕಾಂಗ್ರೆಸ್ನ ಬಣವೊಂದು ಸಾಮೂಹಿಕ ನಾಯಕತ್ವಕ್ಕೆ ಒತ್ತಾಯಿಸಿದರೆ, ಇನ್ನೊಂದು ಬಣ ರಾಹುಲ್ ಗಾಂಧಿಯವರನ್ನೇ ಮತ್ತೆ ಪಕ್ಷದ ಅಧ್ಯಕ್ಷರನ್ನಾಗಿ ಮಾಡಬೇಕು ಎಂದು ಆಗ್ರಹಿಸುತ್ತಿದೆ. ಇದೀಗ ಪಕ್ಷದಲ್ಲಿ ನಾಯಕತ್ವ ವಿಚಾರವಾಗಿ ಆಂತರಿಕ ಭಿನ್ನಮತ ಎದ್ದಿರುವ ಕಾರಣ ಈಗ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯುತ್ತಿದೆ.
ಇತ್ತೀಚೆಗೆ ಕಾಂಗ್ರೆಸ್ನ ಕೆಲವು ಹಿರಿಯ ಸಂಸದರು, ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ ಹಲವರು ಪಕ್ಷ ಪುನಶ್ಚೇತನಗೊಳಿಸಿ ಎಂದು ಸೋನಿಯಾ ಗಾಂಧಿಗೆ ಐದು ಅಂಶಗಳ ಅಜೆಂಡಾವುಳ್ಳ ಪತ್ರವೊಂದನ್ನು ಬರೆದಿದ್ದರು. ಈ ಪತ್ರದಲ್ಲಿ ಸದ್ಯದ ಪಕ್ಷದ ಸ್ಥಿತಿಗತಿ ಮತ್ತು ರಾಷ್ಟ್ರೀಯ ನಾಯಕತ್ವದ ಬಗ್ಗೆ ಹಲವು ಪ್ರಶ್ನೆಗಳನ್ನು ಕೇಳಲಾಗಿತ್ತು. ಕಾಂಗ್ರೆಸ್ ಬಗ್ಗೆ ಆತಂಕ ವ್ಯಕ್ತಪಡಿಸಿದ್ದ ನಾಯಕರು ಕಾಂಗ್ರೆಸ್ ಕಾರ್ಯಕಾರಿ ಸಮಿತಿಗೆ ಚುನಾವಣೆ ನಡೆಸಬೇಕೆಂದು ಒತ್ತಾಯಿಸಿದ್ದರು ಎನ್ನಲಾಗಿತ್ತು.
ಇದೇ ವಿಚಾರವಾಗಿ ಇಂದು ಸೋನಿಯಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯುತ್ತಿದೆ. ಕಾಂಗ್ರೆಸ್ನ ಮಧ್ಯಂತರ ಅಧ್ಯಕ್ಷೆಯಾಗಿರುವ ಸೋನಿಯಾ ಗಾಂಧಿ ಪಕ್ಷದ ಉನ್ನತ ಸ್ಥಾನದಿಂದ ಕೆಳಗಿಳಿಯಲು ಸನ್ನದ್ಧರಾಗಿದ್ದಾರೆ ಎನ್ನಲಾಗುತ್ತಿದೆ. ಈಗ ನಡೆಯುತ್ತಿರುವ ಸಭೆಯಲ್ಲಿ ರಾಷ್ಟ್ರೀಯ ಕಾಂಗ್ರೆಸ್ ನಾಯಕತ್ವ ಬದಲಾವಣೆ ಸಂಬಂಧ ಮಹತ್ವದ ಮಾತುಕತೆ ನಡೆಯುತ್ತಿದೆ.
ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಗಾಂಧಿ ಕುಟುಂಬಕ್ಕೆ ಹೊರತಾದ ವ್ಯಕ್ತಿ ಆಯ್ಕೆ ಬಗ್ಗೆ ಚರ್ಚೆಯಾಗುತ್ತಿದೆ. ಮಲ್ಲಿಕಾರ್ಜುನ ಖರ್ಗೆ, ಅಶೋಕ್ ಗೆಹ್ಲೋಟ್, ಸುಶೀಲ್ ಕುಮಾರ್ ಸಿಂಧೆ, ಮುಕುಲ್ ವಾಸ್ನಿಕ್, ಶಶಿ ತರೂರ್ ಹೆಸರು ರೇಸ್ನಲ್ಲಿವೆ. ಅಂತಿಮವಾಗಿ ಮಲ್ಲಿಕಾರ್ಜುನ ಖರ್ಗೆ ಮತ್ತು ಅಶೋಕ್ ಗೆಹ್ಲೋಟ್ ನಡುವೆ ಪೈಪೋಟಿ ಸಾಧ್ಯತೆ ಇದೆ.
ಇದನ್ನೂ ಓದಿ: ನಾನು ಅಸ್ಸಾಂ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಅಲ್ಲ; ಮಾಜಿ ಸಿಜೆಐ ರಂಜನ್ ಗೊಗೊಯ್ ಸ್ಪಷ್ಟನೆ
ಬೆಳಗ್ಗೆ 11 ಗಂಟೆಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಶುರುವಾದ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಬಿಸಿಬಿಸಿ ಚರ್ಚೆ ನಡೆಯುತ್ತಿದೆ. ಈ ಸಭೆಯಲ್ಲಿ ಕಾಂಗ್ರೆಸ್ ಅಂತಿಮವಾಗಿ ಯಾವ ತೀರ್ಮಾನಕ್ಕೆ ಬರಲಿದೆ ಎಂಬುದು ಮಾತ್ರ ಕಾದು ನೋಡಬೇಕಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ