ನವ ದೆಹಲಿ: ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ (Liquor Policy Case) ತನಿಖೆಗೆ ಹಾಜರಾಗುವಂತೆ ದೆಹಲಿ ಉಪ ಮುಖ್ಯಮಂತ್ರಿ (Delhi DCM) ಮನೀಶ್ ಸಿಸೋಡಿಯಾ (Manish Sisodia) ಅವರಿಗೆ ಸಿಬಿಐ ಸಮನ್ಸ್ (CBI) ಜಾರಿ ಮಾಡಿದೆ. ಮದ್ಯ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸರ್ಕಾರದ ವಿರುದ್ಧ ಸಿಬಿಐ ವಿಚಾರಣೆ ಕೈಗೆತ್ತಿಕೊಂಡಿದ್ದು, ಇದೀಗ ಆ ಪ್ರಕರಣದ ವಿಚಾರಣೆಯ ಭಾಗವಾಗಿ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ನೋಟಿಸ್ ನೀಡಿದೆ.
ಇದನ್ನೂ ಓದಿ: Shiv Sena Symbol Row: ಶಿಂಧೆ ಬಣದ ಪಾಲಾಯ್ತು ಶಿವಸೇನೆ ಬಿಲ್ಲು-ಬಾಣ! ಉದ್ಧವ್ ಠಾಕ್ರೆಗೆ ಹಿನ್ನಡೆ, ಸಿಎಂ ಏಕನಾಥ್ಗೆ ಗೆಲುವು
'ಈವರೆಗೆ ನನ್ನ ವಿರುದ್ಧ ಯಾವುದೇ ಸಾಕ್ಷಿ ಅವರಿಗೆ ಸಿಕ್ಕಿಲ್ಲ'
ಈ ಬಗ್ಗೆ ಟ್ವೀಟ್ ಮಾಡಿರುವ ದೆಹಲಿಯ ಡಿಸಿಎಂ ಮನೀಶ್ ಸಿಸೋಡಿಯಾ, ಸಿಬಿಐ ಅಧಿಕಾರಿಗಳು ನಾಳೆ ನನ್ನನ್ನು ಮತ್ತೆ ವಿಚಾರಣೆಗೆ ಕರೆದಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ನನ್ನ ಮೇಲೆ ಸಿಬಿಐ, ಜಾರಿ ನಿರ್ದೇಶನಾಲಯ (ಇ.ಡಿ) ಸೇರಿದಂತೆ ಎಲ್ಲಾ ರೀತಿಯ ಅಧಿಕಾರದ ಪ್ರಯೋಗಗಳನ್ನು ಮಾಡುತ್ತಿದೆ. ಅವರು ವಿಚಾರಣೆಯ ನೆಪದಲ್ಲಿ ನನ್ನ ಮನೆ ಮೇಲೆ ದಾಳಿ ಮಾಡಿದ್ದಾರೆ, ನನ್ನ ಬ್ಯಾಂಕ್ ಲಾಕರ್ ಅನ್ನು ಶೋಧಿಸಿದ್ದಾರೆ. ಆದರೆ ಈವರೆಗೆ ನನ್ನ ವಿರುದ್ಧ ಯಾವುದೇ ಸಾಕ್ಷಿ ಅವರಿಗೆ ಸಿಕ್ಕಿಲ್ಲ ಎಂದು ಟ್ವೀಟ್ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
'ಮುಂದೆಯೂ ತನಿಖೆಗೆ ನನ್ನ ಸಹಕಾರ ಇದೆ'
ಇನ್ನು ‘ದೆಹಲಿ ರಾಜ್ಯದ ಶಾಲಾ ಮಕ್ಕಳ ಉತ್ತಮ ಶಿಕ್ಷಣಕ್ಕೆ ಸಂಬಂಧ ಪಟ್ಟಂತೆ ನಾನು ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇನೆ. ಹೀಗಾಗಿ ಅಂತಹ ಕಾರ್ಯಕ್ರಮಗಳನ್ನು ನಿಲ್ಲಿಸಲು ಈ ರೀತಿಯಲ್ಲಿ ನನ್ನ ವಿರುದ್ಧ ಸೇಡು ತೀರಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿರುವ ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ, ನಾನು ಯಾವಾಗಲೂ ಸಿಬಿಐ ಅಧಿಕಾರಿಗಳಿಗೆ ತನಿಖೆಗೆ ಸಹಕರಿಸಿದ್ದೇನೆ. ಮುಂದಿನ ದಿನಗಳಲ್ಲಿ ಕೂಡ ತನಿಖೆಗೆ ಸಹಕಾರ ನೀಡುತ್ತೇನೆ’ ಎಂದು ಸಿಸೋಡಿಯಾ ಹೇಳಿದ್ದಾರೆ.
ನಾಳೆ 11 ಗಂಟೆಗೆ ವಿಚಾರಣೆಗೆ ಹಾಜರು
ಅಧಿಕೃತ ಮೂಲಗಳ ಪ್ರಕಾರ ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ಅವರಿಗೆ ನಾಳೆ (ಭಾನುವಾರ) ದೆಹಲಿಯ ಕೇಂದ್ರೀಯ ತನಿಖಾ ದಳ (ಸಿಬಿಐ) ಪ್ರಧಾನ ಕಚೇರಿಯಲ್ಲಿ ಬೆಳಗ್ಗೆ 11 ಗಂಟೆಯ ಸುಮಾರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ನಲ್ಲಿ ತಿಳಿಸಲಾಗಿದೆ.
ವಿಚಾರಣೆಯಲ್ಲಿ ಸಿಕ್ಕ ಮಾಹಿತಿಯನ್ವಯ ಮತ್ತೆ ನೋಟಿಸ್
ಈಗಾಗಲೇ ಬಂಧಿತರಾಗಿರುವ ಅಪರಾಧಿಗಳನ್ನು ವಿಚಾರಣೆ ನಡೆಸಿದಾಗ ಸಿಕ್ಕ ಮಾಹಿತಿಗೆ ಅನುಗುಣವಾಗಿ ಮನೀಶ್ ಸಿಸೋಡಿಯಾ ಅವರನ್ನು ಇನ್ನೊಂದು ಸುತ್ತಿನ ವಿಚಾರಣೆಗೆ ಅಧಿಕಾರಿಗಳು ಕರೆದಿದ್ದಾರೆ.
ಇದನ್ನೂ ಓದಿ: WPL Auction 2023: ಪುರುಷರ ತಂಡದಂತೆ ಚಾಂಪಿಯನ್ ಪಟ್ಟದ ಮೇಲೆ ಕಣ್ಣು, ವಿದೇಶಿಯರ ಮೇಲೆ ಕೋಟಿ ಕೋಟಿ ಸುರಿದ ಗುಜರಾತ್ ಜೈಂಟ್ಸ್
ಸದ್ಯ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಸಿಬಿಐ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿರುವ ವಿಚಾರ ಪುನಃ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದ್ದು, ಆಮ್ ಆದ್ಮಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಕೇಂದ್ರದ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರವು ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ