ದೆಹಲಿ(ಜೂ. 21): ದೇಶದ ಹಾಲಿ ರಾಷ್ಟ್ರಪತಿ ರಮಾನಾಥ್ ಕೋವಿಂದ್ (Rastrapati Ramanath Kovind) ಅವರ ಅಧಿಕಾರವಧಿ ಜುಲೈ 24ರಂದು ಕೊನೆಗೊಳ್ಳಲಿದೆ. ದೇಶದ 16ನೇ ರಾಷ್ಟ್ರಪತಿ ಆಯ್ಕೆ ಮಾಡುವ ಚುನಾವಣೆಗೆ (President Elections) ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ. ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಕೆ (Nomination Filing) ಮಾಡಲು ಜೂನ್ 29 ಕೊನೆಯ ದಿನವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಆಡಳಿತಾರೂಢ ಎನ್ ಡಿಎ (NDA) ಮೈತ್ರಿಕೂಟ ಮತ್ತು ವಿರೋಧ ಪಕ್ಷಗಳ (Opposition Parties) ವತಿಯಿಂದ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
ಇಂದು ಬಿಜೆಪಿ ಸಂಸದೀಯ ಮಂಡಳಿ ಸಭೆ
ಬಿಜೆಪಿಯಲ್ಲಿ ವಿಧಾನಸಭೆಯಿಂದ ಮೇಲಿನ ಎಲ್ಲಾ ಚುನಾವಣೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಪಕ್ಷದ ಸಂಸದೀಯ ಮಂಡಳಿ ಸಭೆ. ಹಾಗಾಗಿ ಇಂದು ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವ ಉದ್ದೇಶಕ್ಕಾಗಿ ಬಿಜೆಪಿ ಸಂಸದೀಯ ಮಂಡಳಿ ಸಭೆ ಕರೆಯಲಾಗಿದೆ. ಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ ಮತ್ತಿತರ ಸಂಸದೀಯ ಮಂಡಳಿ ಸದಸ್ಯರು ಭಾಗವಹಿಸಲಿದ್ದಾರೆ.
ಇಂದೇ ಆಯ್ಕೆ ಸಾಧ್ಯತೆ!
ಆಡಳಿತಾರೂಢ ಎನ್ ಡಿಎ ಮೈತ್ರಿಕೂಟದ ವತಿಯಿಂದ ಬಿಜೆಪಿಯ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಈಗಾಗಲೇ ನಿರ್ಧಾರವಾಗಿದೆ. ಯಾರು ಅಭ್ಯರ್ಥಿ ಆಗಬೇಕು ಎಂಬುದು ಬಹುತೇಕ ಇಂದೇ ಆಯ್ಕೆ ಆಗುವ ಸಾಧ್ಯತೆ ಇದೆ. ಅಥವಾ ಅಭ್ಯರ್ಥಿಯ ಆಯ್ಕೆ ಮಾಡುವ ಜವಾಬ್ದಾರಿಯನ್ನು ಬಿಜೆಪಿ ಸಂಸದೀಯ ಮಂಡಳಿ ಸಭೆಯು ಪ್ರಧಾನಿ ಮೋದಿಗೆ ಬಿಡುವ ಸಾಧ್ಯತೆಯೂ ಇದೆ. ಇಂದು ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ಯಾರೆಂಬುದು ಆಯ್ಕೆಯಾದರೂ ಇಂದು ಘೋಷಣೆ ಆಗುವುದು ಮಾತ್ರ ಅನುಮಾನವಾಗಿದೆ. ಜೂನ್ 24 ಅಥವಾ 25ರಂದು ಬಿಜೆಪಿ ತನ್ನ ಅಭ್ಯರ್ಥಿಯನ್ನು ಘೋಷಿಸಬಹುದು ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: New Car: ಬರೀ 10 ರೂಪಾಯಿ ನಾಣ್ಯಗಳಿಂದ ಲಕ್ಷ ರೂಪಾಯಿ ಸೇರಿಸಿ ಕಾರು ಖರೀದಿ ಮಾಡಿದ ವ್ಯಕ್ತಿ!
ಇಂದು ವಿರೋಧ ಪಕ್ಷಗಳ ನಾಯಕರ ಸಭೆ
ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿ ಹಾಕುವ ಹಿನ್ನೆಲೆಯಲ್ಲಿ ಇಂದು ಮತ್ತೊಮ್ಮೆ ವಿರೋಧ ಪಕ್ಷಗಳ ನಾಯಕರು ಸಭೆ ನಡೆಸಲಿದ್ದಾರೆ. ಸಂಸತ್ ಭವನದ ಅನೆಕ್ಸ್ ನಲ್ಲಿ ಮಧ್ಯಾಹ್ನ 2.30ಕ್ಕೆ ಸಭೆ ನಿಗಧಿಯಾಗಿದೆ. ಮೊನ್ನೆ ಕೂಡ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕಿ ಮಮತಾ ಬ್ಯಾನರ್ಜಿ ಅವರು ದೆಹಲಿಯ ಕಾನ್ಸಿಟಿಟ್ಯೂಟ್ ಕ್ಲಬ್ ನಲ್ಲಿ ವಿರೋಧ ಪಕ್ಷಗಳ ಸಭೆ ಕರೆದಿದ್ದರು. ಆಗ ಪ್ರಮುಖವಾಗಿ ಮೂರು ಹೆಸರುಗಳ ಬಗ್ಗೆ ಚರ್ಚೆ ಮಾಡಲಾಗಿತ್ತು. ಆದರೆ ಯಾವ ಹೆಸರಿಗೂ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಇಂದು ಮತ್ತೊಮ್ಮೆ ಸಭೆ ಕರೆಯಲಾಗಿದೆ.
ಯಾರಾಗಲಿದ್ದಾರೆ ವಿಪಕ್ಷಗಳ ಅಭ್ಯರ್ಥಿ?
ರಾಷ್ಟ್ರಪಿತ ಮಹಾತ್ಮಗಾಂಧೀಜಿ ಅವರ ಮೊಮ್ಮಗ ಗೋಪಾಲಕೃಷ್ಣ ಗಾಂಧಿ, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ಎನ್ ಸಿಪಿ ಶರದ್ ಪವಾರ್ ಹಾಗೂ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಮುಖಂಡ ಫಾರಕ್ ಅಬ್ದುಲ್ಲಾ ಹೆಸರುಗಳು ಚರ್ಚೆ ಆಗಿದ್ದವು. ಆದರೀಗ ಈ ಮೂವರೂ ರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿಯಾಗಲು ಒಪ್ಪಿಗೆ ಸೂಚಿಸಿಲ್ಲ. ಹಾಗಾಗಿ ಇಂದು ವಿಪಕ್ಷಗಳ ನಾಯಕರು ಬೇರೆ ಅಭ್ಯರ್ಥಿ ಬಗ್ಗೆ ಚರ್ಚೆ ಮಾಡಲಿದ್ದಾರೆ.
ಇದನ್ನೂ ಓದಿ: Morning Digest: ಪ್ರಧಾನಿ ಮೋದಿ ಯೋಗ, ಕಾಂಗ್ರೆಸ್ ಪ್ರತಿಭಟನೆ, ಚಿನ್ನದ ಬೆಲೆ: ಬೆಳಗಿನ ಟಾಪ್ ನ್ಯೂಸ್ ಗಳು
ಮತ್ತೆ ಆಪ್, ಟಿಆರ್ ಎಸ್ ಗೈರಾಗುವ ಸಾಧ್ಯತೆ
ಇಂದಿನ ಸಭೆಯಲ್ಲಿ ಭಾಗವಹಿಸುವಂತೆ 17 ಪಕ್ಷಗಳಿಗೆ ಆಹ್ವಾನ ನೀಡಲಾಗಿದೆ. ಹಿಂದಿನ ಸಭೆಯಲ್ಲಿ ಆಮ್ ಆದ್ಮಿ ಪಕ್ಷ ತೆಲಂಗಾಣ ರಾಷ್ಟ್ರೀಯ ಸಮಿತಿ ಪಕ್ಷಗಳು ಭಾಗವಹಿಸಿರಲಿಲ್ಲ. ಇಂದು ಕೂಡ ಅವು ಭಾಗವಹಿಸುವ ಲಕ್ಷಣಗಳು ಕಂಡುಬರುತ್ತಿಲ್ಲ. ಹಾಗಾಗಿ ಇಂದಿನ ಸಭೆ ಕುತೂಹಲ ಮೂಡಿಸಿದೆ.
ಜುಲೈ 26ಕ್ಕೆ ನೂತನ ರಾಷ್ಟ್ರಪತಿ ಅಧಿಕಾರ ಸ್ವೀಕಾರ
ದೇಶದ ಅತ್ಯುನ್ನತ ಸ್ಥಾನವಾದ ರಾಷ್ಟ್ರಪತಿ ಪದವಿಗೆ ಆಯ್ಕೆ ಮಾಡುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜೂನ್ 29 ಕೊನೆಯ ದಿನವಾಗಿದೆ. ಜೂನ್ 30ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಜುಲೈ 18ರಂದು ಮತದಾನ ನಡೆಯಲಿದೆ. ಜುಲೈ 21ರಂದು ಫಲಿತಾಂಶ ಪ್ರಕಟವಾಗಲಿದೆ. ಈಗಿನ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅಧಿಕಾರಾವಧಿ ಜುಲೈ 24ರಂದು ಕೊನೆಯಾಗಲಿದ್ದು ನೂತನ ರಾಷ್ಟ್ರಪತಿಯಾಗಿ ಆಯ್ಕೆ ಆಗುವವರು ಜುಲೈ 26ಕ್ಕೆ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ