ನವದೆಹಲಿ, ಜೂ. 21: ಕೇಂದ್ರ ಸರ್ಕಾರವು ಹೊಸದಾಗಿ ಮಿಲಿಟರಿ ನೇಮಕಾತಿಗಾಗಿ ರೂಪಿಸಿರುವ ಅಗ್ನಿಪಥ್ (Agnipath) ಯೋಜನೆಯನ್ನು ವಿರೋಧಿಸಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆ ಇಂದು ಕೂಡ ಮುಂದುವರಿಯುತ್ತಿದೆ. ಈ ಬಗ್ಗೆ ಜೂನ್ 19ರಿಂದ ದೆಹಲಿಯ ಜಂತರ್ ಮಂತರ್ ನಲ್ಲಿ (Janthar Mantar) ಸತ್ಯಾಗ್ರಹ ಹಮ್ಮಿಕೊಂಡಿರುವ ಕಾಂಗ್ರೆಸ್ ಇಂದು ಕೂಡ ಸತ್ಯಾಗ್ರಹವನ್ನು ಮುಂದುವರಿಸಲಿದೆ. ಇನ್ನೊಂದೆಡೆ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ (National Herald Case) ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರ ಜಾರಿ ನಿರ್ದೇಶನಾಲಯದ (Enforcement Directorate) ವಿಚಾರಣೆ ವಿರೋಧಿಸಿ ಕೂಡ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ದೆಹಲಿಯೂ ಸೇರಿದಂತೆ ದೇಶಾದ್ಯಂತ ಪ್ರತಿಭಟನೆ ನಡೆಸಲಿದ್ದಾರೆ.
ಇಂದು ಮತ್ತೆ ರಾಹುಲ್ ಗಾಂಧಿ ಇಡಿ ವಿಚಾರಣೆ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅವರು ಜೂನ್ 13ರಿಂದ ನಿರಂತರವಾಗಿ 3 ದಿನ ಇಡಿ ಅಧಿಕಾರಿಗಳ ವಿಚಾರಣೆ ಎದುರಿಸಿದ್ದಾರೆ. 3 ದಿನದ ಬಳಿಕ ಜೂನ್ 16ರಂದು ವಿಚಾರಣೆ ಇರಲಿಲ್ಲ. ಜೂನ್ 17ರಂದು ಮತ್ತೆ ವಿಚಾರಣೆಗೆ ಬರುವಂತೆ ಅವರಿಗೆ ಸೂಚನೆ ನೀಡಲಾಗಿತ್ತು.
ಇದನ್ನೂ ಓದಿ: Yoga Day: ಸಾಂಸ್ಕೃತಿಕ ನಗರಿಯಲ್ಲಿ ಪ್ರಧಾನಿ ಮೋದಿ ಯೋಗಾಭ್ಯಾಸ; 15 ಸಾವಿರ ಜನರ ಜೊತೆ ಯೋಗ ಪ್ರದರ್ಶನ
ಆದರೆ ರಾಹುಲ್ ಗಾಂಧಿ ಅವರು ತಮ್ಮ ತಾಯಿ, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ದೆಹಲಿಯ ಗಂಗಾರಾಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರನ್ನು ನೋಡಬೇಕಿದೆ. ಅದಲ್ಲದೆ ಜೂನ್ 19ರಂದು ತಮ್ಮ ಹುಟ್ಟುಹಬ್ಬದ ಆಚರಣೆ ಇದೆ. ಈ ಹಿನ್ನೆಲೆಯಲ್ಲಿ ಜೂನ್ 17ರ ವಿಚಾರಣೆಗೆ ಬರಲು ಸಾಧ್ಯವಿಲ್ಲ. ಜೂನ್ 20ರಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಗೆ ಪತ್ರ ಬರೆದಿದ್ದರು. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಮ್ಮತಿ ಸೂಚಿಸಿದ್ದರು.
ಅದರಂತೆ ರಾಹುಲ್ ಗಾಂಧಿ ಅವರು ನಿನ್ನೆ (ಜೂನ್ 20) ಮತ್ತೆ ವಿಚಾರಣೆಗೆ ಹಾಜರಾಗಿದ್ದರು. ಅವರನ್ನು ಮತ್ತೆ ಇಂದು ವಿಚಾರಣೆ ಬರುವಂತೆ ಹೇಳಿದ್ದು ಇಂದು ಬೆಳಗ್ಗೆ 11ಗಂಟೆಗೆ ವಿಚಾರಣೆಗೆ ಹಾಜರಾಗಲಿದ್ದಾರೆ.
ರಾಹುಲ್ ಗಾಂಧಿ ವಿಚಾರಣೆ ವಿರೋಧಿಸಿ ಪ್ರತಿಭಟನೆ
ಇಡಿ ಅಧಿಕಾರಿಗಳು ರಾಹುಲ್ ಗಾಂಧಿ ಅವರನ್ನು ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷ ದೆಹಲಿಯೂ ಸೇರಿದಂತೆ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ದೆಹಲಿಯ ಜಂತರ್ ಮಂತರ್ ನಲ್ಲಿ ಇಂದು ಕೂಡ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಲಿದ್ದಾರೆ. ಇದಕ್ಕೂ ಮೊದಲು ಎಐಸಿಸಿ ಕಚೇರಿಯಲ್ಲಿ ಬೆಳಿಗ್ಗೆ 10ಗಂಟೆಗೆ ಹಿರಿಯ ನಾಯಕರ ಸಭೆ ನಡೆಯಲಿದೆ.
ಸಭೆಯಲ್ಲಿ ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಛತ್ತೀಸ್ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಮತ್ತಿತರರು ಭಾಗಿಯಾಗಲಿದ್ದಾರೆ.
ಡಿ.ಕೆ. ಶಿವಕುಮಾರ್ ಭಾಗಿ
ರಾಹುಲ್ ಗಾಂಧಿ ಇಡಿ ವಿಚಾರಣೆ ಮತ್ತು ಅಗ್ನಿಪಥ್ ಯೋಜನೆ ವಿರೋಧಿಸಿ ದೆಹಲಿಯಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಾಗಿಯಾಗಲಿದ್ದಾರೆ. ಈ ಮೂಲಕ ರಾಹುಲ್ ಗಾಂಧಿ ಜತೆ ಇದ್ದೇವೆ ಎಂಬ ಸಂದೇಶ ಸಾರಲು ಡಿ.ಕೆ. ಶಿವಕುಮಾರ್ ಯತ್ನಿಸಲಿದ್ದಾರೆ. ಇದೇ ಕಾರಣಕ್ಕಾಗಿ ನಿನ್ನೆ ರಾತ್ರಿಯೇ ಡಿ.ಕೆ. ಶಿವಕುಮಾರ್ ದೆಹಲಿಗೆ ಬಂದಿದ್ದಾರೆ. ಡಿ.ಕೆ. ಶಿವಕುಮಾರ್ ಅವರಿಗೆ ಸಹೋದರ ಮತ್ತು ಡಿ.ಕೆ. ಸುರೇಶ್ ಜೊತೆಯಾಗಲಿದ್ದಾರೆ. ರಾಹುಲ್ ಇಡಿ ವಿಚಾರಣೆ ಪ್ರಾರಂಭವಾದಗಿಂದಲೂ ಡಿ.ಕೆ. ಸುರೇಶ್ ದೆಹಲಿಯಲ್ಲೇ ಇದ್ದು ಪ್ರತಿಭಟನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: Narendra Modi: ನಾಡದೇವತೆಗೆ ‘ನಮೋ’ ನಮನ; ಚಾಮುಂಡೇಶ್ವರಿಗೆ ಮೋದಿ ಸಂಕಲ್ಪ ಪೂಜೆ
ಅಗ್ನಿಪಥ್ ಹೋರಾಟಕ್ಕೆ ಕಾಂಗ್ರೆಸ್ ಬೆಂಬಲ
ಯುವಕರ ಪಾಲಿಗೆ ಕರಾಳ ಶಾಸನವಾಗಿರುವ ಅಗ್ನಿಪಥ್ ಯೋಜನೆಯನ್ನು ವಿರೋಧಿಸಿ ದೇಶಾದ್ಯಂತ ನಿರುದ್ಯೋಗಿ ಯುವಕರು, ಪೂರ್ಣಾವಧಿಗೆ ಸೇನೆ ಸೇರಬೇಕೆಂದು ಕನಸು ಕಂಡಿದ್ದ ಯುವಕರು ಮತ್ತವರ ಕುಟುಂಬದವರು ಕಳೆದ ನಾಲ್ಕೈದು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು ಕೆಲವು ಕಡೆ ಹಿಂಸಾಚಾರ, ಸಾವು, ನೋವು, ಸಾರ್ವಜನಿಕ ಆಸ್ತಿಗಳ ನಷ್ಟವಾಗಿದೆ.
ಕಾಂಗ್ರೆಸ್ ಪಕ್ಷ ಕೂಡ ಯುವಕರ ಅಳಲಿಗೆ ದನಿಗೂಡಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ ಜೂನ್ 19ರಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಶಾಂತಿಯುತವಾದ ಸತ್ಯಾಗ್ರಹ ನಡೆಸಿತ್ತು. ಜೂನ್ 20ರಂದು ಪ್ರತಿಭಟನೆಯನ್ನು ನಡೆಸಿತ್ತು. ಇಂದು ಕೂಡ ಮುಂದುವರಿಸಲಿದೆ.
ಕಾಂಗ್ರೆಸ್ ಪಕ್ಷದ ಎಲ್ಲಾ ಲೋಕಸಭಾ ಹಾಗೂ ರಾಜ್ಯಸಭಾ ಸದಸ್ಯರು, ಕಾಂಗ್ರೆಸ್ ಕಾರ್ಯಕಾರಣಿ ಸಮಿತಿ ಸದಸ್ಯರು ಮತ್ತು ಎಐಸಿಸಿ ಪದಾಧಿಕಾರಿಗಳು ಭಾಗವಹಿಸುತ್ತಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ