ಬೆಂಗಳೂರು (ಜೂ.19): ಇಂದು ದೇಶದ ಏಳು ರಾಜ್ಯಗಳ 18 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಉಳಿದಂತೆ, ಕರ್ನಾಟಕ ಹಾಗೂ ಅರುಣಾಚಲ ಪ್ರದೇಶದಲ್ಲಿ ಅವಿರೋಧ ಆಯ್ಕೆ ನಡೆದಿದ್ದು, ಮತದಾನ ನಡೆಯುತ್ತಿರುವ ರಾಜ್ಯಗಳ ಚುನಾವಣಾ ಫಲಿತಾಂಶ ಇನ್ನಷ್ಟೇ ಹೊರ ಬರಬೇಕಿದೆ.
ಕರ್ನಾಟಕದ ನಾಲ್ಕು ಸ್ಥಾನಗಳಿಗೆ ಇವತ್ತೇ ಚುನಾವಣೆ ನಡೆಯಬೇಕಿತ್ತು. ಆದರೆ, ನಾಲ್ವರು ಅಭ್ಯರ್ಥಿಗಳು ಮಾತ್ರ ಸ್ಪರ್ಧಿಸಿದ್ದರಿಂದ ಎಲ್ಲರೂ ಅವಿರೋಧವಾಗಿ ಆಯ್ಕೆಯಾಗಿದ್ಧಾರೆ. ಬಿಜೆಪಿಯಿಂದ ಅಶೋಕ್ ಗಸ್ತಿ, ಈರಣ್ಣ ಕಡಾಡಿ, ಕಾಂಗ್ರೆಸ್ನಿಂದ ಮಲ್ಲಿಕಾರ್ಜುನ ಖರ್ಗೆ ಮತ್ತು ಜೆಡಿಎಸ್ನಿಂದ ಹೆಚ್.ಡಿ. ದೇವೇಗೌಡ ಅವರು ರಾಜ್ಯಸಭೆ ಪ್ರವೇಶ ಗಿಟ್ಟಿಸಿದ್ಧಾರೆ. ಅರುಣಾಚಲ ಪ್ರದೇಶದಲ್ಲೂ ಬಿಜೆಪಿ ಅಭ್ಯರ್ಥಿ ನಬಮ್ ರೆಬಿಯಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಬಿಜೆಪಿ 3, ಕಾಂಗ್ರೆಸ್ 1 ಹಾಗೂ ಇತರೆ ಒಂದು ಸ್ಥಾನದಲ್ಲಿ ಮುನ್ನಡೆ ಸಾಧಿಸಿವೆ.
ಗುಜರಾತ್ ಮತ್ತು ಆಂಧ್ರ ಪ್ರದೇಶದಲ್ಲಿ ತಲಾ ನಾಲ್ಕು ಸ್ಥಾನಗಳು, ರಾಜಸ್ಥಾನ ಮತ್ತು ಮಧ್ಯ ಪ್ರದೇಶದಲ್ಲಿ ತಲಾ ಮೂರು ಸ್ಥಾನಗಳು, ಜಾರ್ಖಂಡ್ನಲ್ಲಿ ಎರಡು ಹಾಗೂ ಮಣಿಪುರ, ಮಿಜೋರಾಂನಲ್ಲಿ ತಲಾ ಒಂದೊಂದು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ.
ಇದನ್ನೂ ಓದಿ: ರಾಜ್ಯಸಭಾ ಚುನಾವಣೆಗೆ ಮತದಾನ ಆರಂಭ: ರಾಜ್ಯದ ಸಿಎಂಗಳಿಂದ ಮತಾದನ
ಇಂದು ಬೆಳಗ್ಗೆ ಆಯಾ ವಿಧಾನಸಭೆಗಳಲ್ಲಿ 9 ಗಂಟೆಯಿಂದ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಸಂಜೆ ನಾಲ್ಕು ಗಂಟೆಯವರೆಗೂ ಮತದನಾ ಮಾಡಬಹುದು. ಸಂಜೆ ಐದು ಗಂಟೆಗೆ ಫಲಿತಾಂಶ ಘೋಷಣೆ ಆಗಲಿದೆ. ಈಗಾಗಲೇ ಎಲ್ಲ ರಾಜ್ಯಗಳ ಸಿಎಂ ಹಾಗೂ ಶಾಸಕರು ಆಯಾ ವಿಧಾನಸಭೆಗೆ ಬಂದು ಮತದಾನ ಮಾಡುತ್ತಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ