ನವ ದೆಹಲಿ (ಮಾರ್ಚ್ 10); ಮಧ್ಯಪ್ರದೇಶ ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆಗೆ ಕಾರಣವಾಗಿರುವ ಕಾಂಗ್ರೆಸ್ ಹಿರಿಯ ನಾಯಕ ಜೋತಿರಾದಿತ್ಯ ಸಿಂಧಿಯಾ ಅವರನ್ನು ಸಂಪರ್ಕಿಸಲು ಕಾಂಗ್ರೆಸ್ ಹೈಕಮಾಂಡ್ ಪ್ರಯತ್ನಿಸುತ್ತಿದೆ ಆದರೆ, ಅವರಿಗೆ ಹಂದಿಜ್ವರ ಇರುವ ಕಾರಣ ಸಂಪರ್ಕಿಸಲು ಸಾಧ್ಯವಾಗಿಲ್ಲ ಎಂದು ದಿಗ್ವಿಜಯ್ ಸಿಂಗ್ ಕಿಡಿಕಾರಿದ್ದಾರೆ.
ಸೋಮವಾರ ಮಧ್ಯಪ್ರದೇಶದಲ್ಲಿ ರಾತ್ರೀರಾತ್ರಿ ನಡೆದಿರುವ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಸಿಎಂ ಕಮಲನಾಥ್ ವಿರುದ್ಧ ಅಸಮಾಧಗೊಂಡಿರುವ ಶಾಸಕರು-ಸಚಿವರು ಸಹ ಸಾಮೂಹಿಕ ರಾಜೀನಾಮೆ ನೀಡುವ ಮೂಲಕ ರಾಜ್ಯ ಕಾಂಗ್ರೆಸ್ ಇದೀಗ ಒಡೆದ ಮನೆಯಂತಾಗಿದೆ. ಯಾವುದೇ ಸಂದರ್ಭದಲ್ಲಿ ಸರ್ಕಾರ ಬೀಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಬಿಕ್ಕಟ್ಟಿನ ಕುರಿತು ಸುದ್ದಿಗಾರರ ಜೊತೆಗೆ ಮಾತನಾಡಿರುವ ಮಾಜಿ ಸಿಎಂ ದಿಗ್ವಿಜಯ್ ಸಿಂಗ್,
“ಕಾಂಗ್ರೆಸ್ ಹೈಕಮಾಂಡ್ ನಾಯಕರು ಇಷ್ಟೆಲ್ಲಾ ರಾಜಕೀಯ ಬೆಳವಣಿಗೆಗೆ ಕಾರಣವಾಗಿರುವ ಜ್ಯೋತಿರಾದಿತ್ಯ ಸಿಂಧಿಯಾ ಜೊತೆಗೆ ಮಾತನಾಡಲು ಪ್ರಯತ್ನಿಸಿದೆವು. ಆದರೆ, ಅವರಿಗೆ ಹಂದಿಜ್ವರ ಆವರಿಸಿರುವ ಕಾರಣ ಮಾತುಕತೆ ನಡೆಸಲು ಸಾಧ್ಯವಾಗಿಲ್ಲ” ಎಂದಿದ್ದಾರೆ.
ಅಲ್ಲದೆ, "ಮಧ್ಯಪ್ರದೇಶದಲ್ಲಿ ಮತದಾರರ ಆದೇಶವನ್ನು ಅಗೌರವಿಸಲು ಮುಂದಾಗುವ ನಾಯಕರಿಗೆ ಇಲ್ಲಿನ ಮತದಾರರು ಸೂಕ್ತವಾದ ಕಾಲದಲ್ಲಿ ತಕ್ಕ ಉತ್ತರ ನೀಡಲಿದ್ದಾರೆ” ಎಂದು ಜ್ಯೋತಿರಾದಿತ್ಯ ಸಿಂಧಿಯಾ ವಿರುದ್ಧ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.
ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರದಲ್ಲಿ ಕಮಲ್ನಾಥ್ ಮತ್ತು ಜ್ಯೋತಿರಾದಿತ್ಯ ಸಿಂದಿಯಾ ಬಣಗಳ ನಡುವೆ ಕಳೆದ ಹಲವು ದಿನಗಳಿಂದ ಬಿಕ್ಕಟ್ಟು ನಡೆಯುತ್ತಲೇ ಇದ್ದು, ಕಳೆದ ವಾರ 16 ಶಾಸಕರು ರೆಸಾರ್ಟ್ ರಾಜಕಾರಣಕ್ಕೆ ಮುಂದಾಗಿದ್ದರು. ಇನ್ನೂ ಇವರಿಗೆ ಬೆಂಬಲ ಸೂಚಿಸಿ ಸೋಮವಾರ ತಡರಾತ್ರಿ 22 ಸಚಿವರು ಸಹ ಸಾಮೂಹಿಕ ರಾಜೀನಾಮೆ ನೀಡಿರುವುದು ಇದೀಗ ಕಮಲ್ನಾಥ್ ಸರ್ಕಾರದ ತಲೆನೋವಿಗೆ ಕಾರಣವಾಗಿದೆ.
ಈ ವೇಳೆ ಬಿಜೆಪಿ ವಿರುದ್ಧ ಹರಿಹಾಯ್ದಿರುವ ಸಿಎಂ ಕಮಲ್ನಾಥ್ "ನನ್ನ ಸರ್ಕಾರವನ್ನು ಅಸ್ಥಿರಗೊಳಿಸಲು" ಬಿಜೆಪಿ ಅನೈತಿಕ ಮಾರ್ಗಗಳನ್ನು ಅನುಸರಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ : ಮಧ್ಯಪ್ರದೇಶದಲ್ಲಿ ರಾತ್ರೋರಾತ್ರಿ ರಾಜಕೀಯ ಹೈಡ್ರಾಮಾ; ಸಚಿವರ ಸಾಮೂಹಿಕ ರಾಜೀನಾಮೆ; ಸಿಎಂ ಕುರ್ಚಿಗೆ ಕಂಟಕ?
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ