ಮಹಾರಾಷ್ಟ್ರದ ಗೃಹ ಸಚಿವ‌ರ ಭ್ರಷ್ಟಾಚಾರ ಪ್ರಕರಣದ ವಿಚಾರಣೆಗೆ ಸುಪ್ರೀಂಕೋರ್ಟ್ ನಕಾರ

ಅನಿಲ್ ದೇಶಮುಖ್

ಅನಿಲ್ ದೇಶಮುಖ್

ಬಿಜೆಪಿ ನಾಯಕರು ಪ್ರತಿಪಕ್ಷದ ನಾಯಕ ದೇವೇಂದ್ರ ಫಡ್ನವಿಸ್ ನೇತೃತ್ವದಲ್ಲಿ ಬುಧವಾರ ಮತ್ತೊಮ್ಮೆ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ಭೇಟಿ ಮಾಡಿ ಗೃಹ ಸಚಿವ ದೇಶ್ಮುಖ್ ಅವರಿಂದ ರಾಜೀನಾಮೆ ಪಡೆಯುವಂತೆ ಸಿಎಂ ಉದ್ಧವ್ ಠಾಕ್ರೆ ಅವರಿಗೆ ಸೂಚನೆ ನೀಡಿ ಎಂದು ಒತ್ತಡ ಹೇರಿದ್ದಾರೆ.

  • Share this:

ಮುಂಬೈ (ಮಾ. 24): ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್ ಗಳಿಂದ ತಿಂಗಳಿಗೆ 100 ಕೋಟಿ ರೂಪಾಯಿ ವಸೂಲಿ ಮಾಡಿಕೊಡುವಂತೆ ಪೊಲೀಸ್ ಅಧಿಕಾರಿಗಳ ಮೇಲೆ ಮಹಾರಾಷ್ಟ್ರದ ಗೃಹ ಸಚಿವ‌ ಅನಿಲ್ ದೇಶಮುಖ್ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿ ಅಲ್ಲಿನ‌ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಎಂಟು ಪುಟಗಳ ಪತ್ರ ಬರೆದಿದ್ದ ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರಿಗೆ ಹಿನ್ನಡೆ ಆಗಿದೆ. ಸೂಕ್ತ ತನಿಖೆಗೆ ಆದೇಶ ನೀಡುವಂತೆ ಪರಂ‌ ಬೀರ್ ಸಿಂಗ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲು  ಸುಪ್ರೀಂ ಕೋರ್ಟ್ ನಿರಾಕರಿಸಿದೆ.


ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅಥವಾ ಎನ್ ಸಿಪಿ 100 ಕೋಟಿ ರೂಪಾಯಿಗಳ ಭ್ರಷ್ಟಾಚಾರದ ಆರೋಪ ಹೊತ್ತ ಅನಿಲ್ ದೇಶಮುಖ್  ಅವರಿಂದ ರಾಜೀನಾಮೆ ಪಡೆಯದ ಹಿನ್ನೆಲೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರ ಬರೆದಿದ್ದ‌ ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಈಗ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ  ಅನಿಲ್ ದೇಶ್ಮುಖ್ ವಿರುದ್ಧ ಸೂಕ್ತ ತನಿಖೆಗೆ ಆದೇಶ ನೀಡುವಂತೆ ಮನವಿ ಮಾಡಿಕೊಂಡಿದ್ದರು. ಬುಧವಾರ ಈ‌ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈಗಾಗಲೇ ಈ ವಿಷಯಕ್ಕೆ ಸಂಬಂಧಿಸಿದಂತೆ ಮುಂಬೈ ಹೈಕೋರ್ಟಿನಲ್ಲಿ ವಿಚಾರಣೆ ನಡೆಯುತ್ತಿದೆ. ಈ ಹಂತದಲ್ಲಿ ತಾನು ಮಧ್ಯ ಪ್ರವೇಶ ಮಾಡುವುದಿಲ್ಲ ಎಂದು ಹೇಳಿದೆ.
ಪರಮ್ ಬೀರ್ ಸಿಂಗ್ ಅವರ ಆರೋಪದ ಮೇರೆಗೆ ಅನಿಲ್ ದೇಶ್ಮುಖ್ ತಮ್ಮ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷ ಬಿಜೆಪಿ ಆಗ್ರಹ ಮಾಡಿದೆ.


ಇದನ್ನು ಓದಿ: ಟಿಎಂಸಿ ಕಾ ಖೇಲಾ ಖತಮ್, ವಿಕಾಸ್ ಶುರು; ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ


ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ಭೇಟಿಯಾಗಿ ಕೂಡ ಒತ್ತಡ ಹೇರಿದೆ. ಈ ವಿಷಯ ಮಹಾರಾಷ್ಟ್ರದ ಎನ್ ಸಿಪಿ,‌ ಶಿವಸೇನೆ ಮತ್ತು ಕಾಂಗ್ರೆಸ್ ಮೈತ್ರಿಕೂಟದ ಮಹಾ ವಿಕಾಸ್ ಅಘಾಡಿ ಸರ್ಕಾರದ ಮಟ್ಟದಲ್ಲೂ ಸಂಚಲನ ಸೃಷ್ಟಿಸಿದೆ. ಎನ್ ಸಿಪಿಯ ಅಗ್ರ ನಾಯಕ ಶರದ್ ಯಾದವ್ ನೇತೃತ್ವದಲ್ಲಿ ಆ ಪಕ್ಷದ ಮುಖಂಡರು ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ. ಮಿತ್ರಪಕ್ಷಗಳ ಮಟ್ಟದಲ್ಲಿ ಸಮಾಲೋಚನೆ ಆಗಿದೆ. ಆದರೆ ಇಷ್ಟೆಲ್ಲವಾದರೂ ಅನಿಲ್ ದೇಶ್ಮುಖ್ ರಾಜೀನಾಮೆ ಮಾತ್ರ ಆಗಿಲ್ಲ. ಈ‌‌ ಹಿನ್ನೆಲೆಯಲ್ಲಿ ಪರಂ‌ ಬೀರ್ ಸಿಂಗ್ ಸುಪ್ರೀಂ ಕೋರ್ಟ್ ಮೆಟ್ಟಿಲು ಏರಿದ್ದರು.


ಮೊದಲಿಗೆ ಎನ್ ಸಿಪಿ ನಾಯಕರು ಗೃಹ ಸಚಿವರ ಭ್ರಷ್ಟಾಚಾರದ ಪ್ರಕರಣದಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತೀರ್ಮಾನ ಮಾಡಲಿ ಎಂದಿದ್ದರು. ಆನಂತರ ಅನಿಲ್ ದೇಶ್ಮುಖ್ ರಾಜೀನಾಮೆ ಅನಗತ್ಯ ಎಂದು ಪ್ರತಿಪಾದಿಸಿದ್ದರು. ಇನ್ನೊಂದೆಡೆ ಕಾಂಗ್ರೆಸ್ ಪಕ್ಷ ಪ್ರಕರಣದ ತನಿಖೆ ಆಗಲಿ ಎಂದು ಹೇಳಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಯಾವುದೇ ನಿರ್ಧಾರ ಕೈಗೊಳ್ಳದೆ ಸಮಯ ದೂಡುತ್ತಿದ್ದಾರೆ. ಬಿಜೆಪಿ ನಾಯಕರು ಪ್ರತಿಪಕ್ಷದ ನಾಯಕ ದೇವೇಂದ್ರ ಫಡ್ನವಿಸ್ ನೇತೃತ್ವದಲ್ಲಿ ಬುಧವಾರ ಮತ್ತೊಮ್ಮೆ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ಭೇಟಿ ಮಾಡಿ ಗೃಹ ಸಚಿವ ದೇಶ್ಮುಖ್ ಅವರಿಂದ ರಾಜೀನಾಮೆ ಪಡೆಯುವಂತೆ ಸಿಎಂ ಉದ್ಧವ್ ಠಾಕ್ರೆ ಅವರಿಗೆ ಸೂಚನೆ ನೀಡಿ ಎಂದು ಒತ್ತಡ ಹೇರಿದ್ದಾರೆ.

Published by:HR Ramesh
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು