2021ರ ವಿಜಯ್ ಹಜಾರೆ ಏಕದಿನ ಟೂರ್ನಿಗಾಗಿ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದೆ. ಈ ಬಾರಿ ತಂಡವನ್ನು ಆರಂಭಿಕ ಆಟಗಾರ ರವಿಕುಮಾರ್ ಸಮರ್ಥ್ ಮುನ್ನಡೆಸಲಿದ್ದಾರೆ. ಒಟ್ಟು 22 ಆಟಗಾರರನ್ನು ಆಯ್ಕೆ ಮಾಡಲಾಗಿದ್ದು, ಸೈಯದ್ ಮುಷ್ತಾಕ್ ಅಲಿ ಟೂರ್ನಿಯನ್ನು ಪ್ರತಿನಿಧಿಸಿದ್ದ ಬಹುತೇಕ ಆಟಗಾರರನ್ನು ಉಳಿಸಿಕೊಳ್ಳಲಾಗಿದೆ. ವಿಶೇಷವೆಂದರೆ ಸೈಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ತಂಡದ ಉಪನಾಯಕನಾಗಿದ್ದ ಅನುಭವಿ ಆಲ್ರೌಂಡರ್ ಪವನ್ ದೇಶಪಾಂಡೆ ಅವರನ್ನು ಕೈಬಿಡಲಾಗಿದೆ.
ಸೈಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ತಂಡವನ್ನು ಮುನ್ನಡೆಸಿದ್ದ ಕರುಣ್ ನಾಯರ್ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದು, ವೈಶಾಖ್ ವಿಜಯಕುಮಾರ್ ಹಾಗೂ ನಿಕಿನ್ ಜೋಸ್ ಅವರಿಗೂ ತಂಡದಲ್ಲಿ ಸ್ಥಾನ ನೀಡಲಾಗಿದೆ.
ಇನ್ನು ಮೊಣಕೈ ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಮನೀಶ್ ಪಾಂಡೆ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ. ಹಾಗೆಯೇ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗಿರುವ ಕೆಎಲ್ ರಾಹುಲ್ ಮತ್ತು ಮಾಯಾಂಕ್ ಅಗರ್ವಾಲ್ ಕೂಡ ತಂಡದಿಂದ ಹೊರಗುಳಿಯಲಿದ್ದಾರೆ.
2014 ರ ವಿಜಯ್ ಹಜಾರೆ ಟ್ರೋಫಿಯ ಮೊದಲ ಸೆಮಿಫೈನಲ್ ಪಂದ್ಯದ ಮೂಲಕ ಪಾದಾರ್ಪಣೆ ಮಾಡಿದ್ದ ಸಮರ್ಥ್, ಕಳೆದ ರಣಜಿ ಸೀಸನ್ನಲ್ಲಿ 32 ಪಂದ್ಯಗಳಿಂದ 1162 ರನ್ ಗಳಿಸಿ ಮಿಂಚಿದ್ದರು. ಇದೀಗ ಅನುಭವಿ ಆಟಗಾರರ ಅನುಪಸ್ಥಿತಿಯಲ್ಲಿ 50 ಓವರ್ಗಳ ಟೂರ್ನಿಯಲ್ಲಿ ತಂಡದ ನಾಯಕತ್ವವನ್ನು ವಹಿಸಿಕೊಂಡಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ