ಪೊಲಾರ್ಡ್ ಆರ್ಭಟ, ಬ್ರಾವೊ ಮಿಂಚಿಂಗ್: ಸತತ ಸೋಲುಗಳ ಬಳಿಕ ಗೆದ್ದು ಬೀಗಿದ ವೆಸ್ಟ್ ಇಂಡೀಸ್
ಇದೀಗ ಈ ಸರಣಿಯ ಅಂತಿಮ ಪಂದ್ಯವು ಫೈನಲ್ ಕದನವಾಗಿ ಮಾರ್ಪಟ್ಟಿದೆ. ಏಕೆಂದರೆ ಮೊದಲ ಪಂದ್ಯದಲ್ಲಿ ಆತಿಥೇಯ ವೆಸ್ಟ್ ಇಂಡೀಸ್ 8 ವಿಕೆಟ್ಗಳಿಂದ ಗೆದ್ದು ಬೀಗಿತ್ತು. ದ್ವಿತೀಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 16 ರನ್ಗಳಿಂದ ಜಯ ಸಾಧಿಸಿತ್ತು.
ವೆಸ್ಟ್ ಇಂಡೀಸ್ನ ಗ್ರೆನೆಡಾದ ಸೇಂಟ್ ಜಾರ್ಜ್ಸ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಗುರುವಾರ ನಡೆದ ದಕ್ಷಿಣ ಆಫ್ರಿಕಾ ವಿರುದ್ದ ನಾಲ್ಕನೇ ಟಿ20 ಪಂದ್ಯದಲ್ಲಿ ವಿಂಡೀಸ್ ತಂಡ 21 ರನ್ ಜಯ ಗಳಿಸಿದೆ. ಈ ಜಯದೊಂದಿಗೆ ವೆಸ್ಟ್ ಇಂಡೀಸ್ ಐದು ಪಂದ್ಯಗಳ ಸರಣಿಯಲ್ಲಿ 2-2ರ ಸಮಬಲ ಸಾಧಿಸಿದೆ. ಇದಕ್ಕೂ ಮುನ್ನ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬೌಲಿಂಗ್ ಆಯ್ದುಕೊಂಡಿತು.
ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ಬೌಲಿಂಗ್ ದಾಳಿ ನಡೆಸಿದ್ದ ದಕ್ಷಿಣ ಆಫ್ರಿಕಾ ಬೌಲರುಗಳು ಮೊದಲ 10 ಓವರ್ಗಳಲ್ಲಿ ಕೇವಲ 67 ರನ್ ನೀಡಿ 3 ವಿಕೆಟ್ ಉರುಳಿಸಿದ್ದರು. ಆದರೆ ದ್ವಿತೀಯ ಹತ್ತು ಓವರ್ಗಳಲ್ಲಿ ಇಡೀ ಪಂದ್ಯದ ಗತಿ ಬದಲಾಯಿತು. 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಾಯಕ ಕೀರನ್ ಪೊಲಾರ್ಡ್ ಕೊನೆಯ ಓವರ್ಗಳಲ್ಲಿ ಆರ್ಭಟಿಸಿದರು. ಅದರಂತೆ 5 ಸಿಕ್ಸರ್, 2 ಬೌಂಡರಿಗಳೊಂದಿಗೆ ಕೇವಲ 25 ಎಸೆತಗಳಲ್ಲಿ 51 ರನ್ ಚಚ್ಚಿದರು. ಪರಿಣಾಮ ನಿಗದಿತ 20 ಓವರ್ ಮುಕ್ತಾಯದ ವೇಳೆಗೆ ವೆಸ್ಟ್ ಇಂಡೀಸ್ ತಂಡದ ಮೊತ್ತ 6 ವಿಕೆಟ್ ನಷ್ಟಕ್ಕೆ 167 ಕ್ಕೆ ಬಂದು ನಿಂತಿತು.
ಈ ಗುರಿಯನ್ನು ಬೆನ್ನತ್ತಿದ ದಕ್ಷಿಣ ಆಫ್ರಿಕಾಗೆ ಕ್ವಿಂಟನ್ ಡಿಕಾಕ್ ಉತ್ತಮ ಆರಂಭ ಒದಗಿಸಿದ್ದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ನಡೆಸಿದ್ದ ಡಿಕಾಕ್ 2 ಸಿಕ್ಸರ್ ಹಾಗೂ 6 ಬೌಂಡರಿಗಳನ್ನು ಬಾರಿಸಿದರು. ಅಲ್ಲದೆ 43 ಎಸೆತಗಳಲ್ಲಿ 60 ರನ್ ಬಾರಿಸಿ ಅಂತಿಮವಾಗಿ ಬ್ರಾವೊಗೆ ವಿಕೆಟ್ ಒಪ್ಪಿಸಿದರು. ಆದರೆ ಉಳಿದ ಯಾವುದೇ ಬ್ಯಾಟ್ಸ್ಮನ್ಗಳು ವಿಂಡೀಸ್ ಬೌಲರುಗಳನ್ನು ಸಮರ್ಥವಾಗಿ ಎದುರಿಸುವಲ್ಲಿ ವಿಫಲರಾದರು.
ಇತ್ತ ಬೌಲಿಂಗ್ನಲ್ಲಿ ಸಂಪೂರ್ಣ ಹಿಡಿತ ಸಾಧಿಸಿದ ಕೆರಿಬಿಯನ್ನರು ಅಂತಿಮವಾಗಿ ದಕ್ಷಿಣ ಆಫ್ರಿಕಾವನ್ನು 146 ರನ್ಗಳಿಗೆ ನಿಯಂತ್ರಿಸಿ 21 ರನ್ಗಳ ಜಯ ಸಾಧಿಸಿದರು. ವೆಸ್ಟ್ ಇಂಡೀಸ್ ಪರ ಡ್ವೇನ್ ಬ್ರಾವೊ 4 ಓವರ್ನಲ್ಲಿ ಕೇವಲ 19 ರನ್ ನೀಡಿ 4 ವಿಕೆಟ್ ಉರುಳಿಸಿದರೆ, ಆಂಡ್ರೆ ರಸೆಲ್ 2 ವಿಕೆಟ್ ಕಬಳಿಸಿ ಮಿಂಚಿದರು.
ಇದೀಗ ಈ ಸರಣಿಯ ಅಂತಿಮ ಪಂದ್ಯವು ಫೈನಲ್ ಕದನವಾಗಿ ಮಾರ್ಪಟ್ಟಿದೆ. ಏಕೆಂದರೆ ಮೊದಲ ಪಂದ್ಯದಲ್ಲಿ ಆತಿಥೇಯ ವೆಸ್ಟ್ ಇಂಡೀಸ್ 8 ವಿಕೆಟ್ಗಳಿಂದ ಗೆದ್ದು ಬೀಗಿತ್ತು. ದ್ವಿತೀಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 16 ರನ್ಗಳಿಂದ ಜಯ ಸಾಧಿಸಿತ್ತು. ಹಾಗೆಯೇ ತೃತೀಯ ಪಂದ್ಯದಲ್ಲಿ ಕೇವಲ 1 ರನ್ಗಳ ರೋಚಕ ಜಯವನ್ನು ದಕ್ಷಿಣ ಆಫ್ರಿಕಾ ತನ್ನದಾಗಿಸಿಕೊಂಡಿತ್ತು. ಇದೀಗ 4ನೇ ಪಂದ್ಯವನ್ನು 21 ರನ್ಗಳಿಂದ ವೆಸ್ಟ್ ಇಂಡೀಸ್ ಗೆಲ್ಲುವ ಮೂಲಕ ಸರಣಿಯಲ್ಲಿ 2-2 ಸಮಬಲ ಸಾಧಿಸಿದೆ. ಹೀಗಾಗಿ ಶನಿವಾರ ನಡೆಯಲಿರುವ ಕೊನೆಯ ಟಿ20 ಪಂದ್ಯದಲ್ಲಿ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.
(ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರೂ ಕೈ ಜೋಡಿಸಬೇಕು.)
Published by:zahir
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ