ಧಾರವಾಡ(ಡಿಸೆಂಬರ್.22): ಲೋಕೋಪಯೋಗಿ ಇಲಾಖೆಯಲ್ಲಿ ಇಂಜಿನಿಯರ್ ಗಳ ಕೊರತೆ ಇದೆ, ಹೊರಗುತ್ತಿಗೆ ಮೂಲಕ 950 ಇಂಜಿನಿಯರ್ ಗಳನ್ನ ತೆಗೆದುಕೊಳ್ಳಲು ಕ್ರಮ ವಹಿಸಲಾಗಿದೆ. ಏಜೆನ್ಸಿಯಿಂದ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಲೋಕೋಪಯೋಗಿ ಸಚಿವ ಹಾಗೂ ಉಪಮುಖ್ಯ ಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ. ಧಾರವಾಡದಲ್ಲಿ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ರಾಜ್ಯದಲ್ಲಿನ ಟೂರಿಸಂ ಪ್ರದೇಶಗಳಲ್ಲಿನ ಪ್ರವಾಸಿ ಮಂದಿರಗಳನ್ನು ಪ್ರವಾಸೋದ್ಯಮ ಇಲಾಖೆಗೆ ವಹಿಸಲಾಗುತ್ತದೆ. ಇದರಿಂದ ಪ್ರವಾಸಿಗರಿಗೆ ಅನುಕೂಲವಾಗಲಿದೆ. ಅಲ್ಲದೇ ಲೋಕೋಪಯೋಗಿ ಇಲಾಖೆಗೂ ಸಹ ಪ್ರವಾಸೋದ್ಯಮ ಇಲಾಖೆ ಬಳಕೆ ಮಾಡಿಕೊಳ್ಳಬಹುದು. ಪ್ರವಾಸಿ ಮಂದಿರಗಳನ್ನು ಪ್ರವಾಸೋದ್ಯಮ ಇಲಾಖೆಗೆ ನೀಡಿದ್ರೆ ಅವುಗಳ ನಿರ್ವಹಣೆಯನ್ನು ಅವರೇ ಮಾಡುತ್ತಾರೆ. ರಾಜ್ಯದ ವಿಜಯಪುರ, ಬದಾಮಿ ಸೇರಿದಂತೆ ಪ್ರವಾಸಿ ತಾಣಗಳಲ್ಲಿನ ಪ್ರವಾಸಿ ಮಂದಿರನ್ನು ಲೋಕೋಪಯೋಗಿ ಇಲಾಖೆಗೆ ನೀಡಲಾಗುವುದು ಎಂದರು.
ಪ್ರವಾಹ ಹಾಗೂ ಮಳೆಯಿಂದ 2019-20 ರ ಸಾಲಿನಲ್ಲಿ 7 ಸಾವಿರ ಕೋಟಿ ರೂಪಾಯಿ ಹಾನಿಯಾಗಿದೆ. ಈ ವರ್ಷ ಜುಲೈ ನಿಂದ ಅಕ್ಟೋಬರ್ ವರೆಗೆ 3500 ಕೋಟಿ ರೂಪಾಯಿ ಹಾನಿಯಾಗಿದೆ ಎಂದು ಮಾಹಿತಿ ನೀಡಿದರು.
ರಾಜ್ಯದಲ್ಲಿ 2019-20 ರಲ್ಲಿ 35 ಸಾವಿರ ಕೋಟಿ, ಜುಲೈ ನಿಂದ ಅಕ್ಟೋಬರ್ ವರೆಗೆ 25 ಸಾವಿರ ಕೋಟಿ ರೂಪಾಯಿ ಹಾನಿಯಾಗಿದೆ. ಪರಿಹಾರ ಕಾರ್ಯ ನಿರಂತರವಾಗಿ ನಡೆಯುತ್ತಿದೆ ಎಂದು ತಿಳಿಸಿದರು.
ಕಳೆದ ವರ್ಷ 700 ಕೋಟಿ ಹಾಗೂ ಈ ವರ್ಷ 600 ಕೋಟಿ ಬಿಡುಗಡೆ ಮಾಡಿದ್ದೇವೆ. ಈ ತಿಂಗಳು ಅಂತ್ಯದೊಳಗೆ ರಾಜ್ಯದ ಎಲ್ಲ ರಸ್ತೆ ಗುಂಡಿಗಳನ್ನು ಮುಚ್ಚಲು ಆದೇಶಿಸಲಾಗಿದೆ. ಲೋಕೋಪಯೋಗಿ ಇಲಾಖೆಯಲ್ಲಿ ಕಳಪೆ ಕಾಮಗಾರಿಗಳು ಕಂಡು ಬಂದಲ್ಲಿ ಹಾಗೂ ಅಧಿಕಾರಿಗಳ ನಿರ್ಲಕ್ಷತೋರಿದರೆ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದರು.
ಇದನ್ನೂ ಓದಿ : ಬೆಳ್ಳಂದೂರು ಡಿನೋಟಿಫಿಕೇಷನ್ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಕಾರ; ಸಿಎಂ ಬಿಎಸ್ವೈಗೆ ಸಂಕಷ್ಟ
ಇದೇ ಸಂದರ್ಭದಲ್ಲಿ ಜಿಡಿಎಸ್ ಹಾಗೂ ಬಿಜೆಪಿ ಹೊಂದಾಣಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ವಿಷಯಾಧಾರಿತವಾಗಿ ಜೆಡಿಎಸ್ ಬಿಜೆಪಿ ಹೊಂದಾಣಿಕೆ ಮಾಡಿಕೊಳ್ಳಲಿದೆ ಹೊರತು, ಬೇರೆ ವಿಚಾರದಲ್ಲಿ ಇಲ್ಲ. ಆದರೆ, ಜೆಡಿಸ್ ಗೆ ಕೆಟ್ಟ ಮೇಲೆ ಬುದ್ದಿ ಬಂದಿದೆ. ಈಗ ಬಿಜೆಪಿ ಮೇಲೆ ಸಾಫ್ಟ್ ಕಾರ್ನರ್ ಆಗಿದೆ ಎಂದು ತಿಳಿಸಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ