ಬೆಂಗಳೂರು: ಆಮ್ ಆದ್ಮಿ ಪಕ್ಷದ (Aam Aadmi Party) ರಾಜ್ಯ ಉಪಾಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ (Bhaskar Rao) ಅವರು ಇಂದು ಬೆಂಗಳೂರಿನ (Bengaluru) ಬಿಜೆಪಿ (BJP) ಕೇಂದ್ರ ಕಚೇರಿಗೆ ಭೇಟಿ ನೀಡಿದ್ದರು. ರಾಜ್ಯದಲ್ಲಿ ಎಎಪಿ ಪಕ್ಷದ ಪ್ರಮುಖ ನಾಯಕರಾಗಿದ್ದ ಭಾಸ್ಕರ್ ರಾವ್ ಅವರು ಬಿಜೆಪಿ ಕಚೇರಿಗೆ ಭೇಟಿ ನೀಡಿದ್ದು ಭಾರೀ ಕುತೂಹಲಕ್ಕೆ ಕಾರಣವಾಗಿತ್ತು. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ (Malleshwaram) ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನಕ್ಕೆ ಭಾಸ್ಕರ್ ರಾವ್ ಅವರು ಭೇಟಿ ನೀಡಿರುವುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಇದರ ನಡುವೆಯೇ ಭಾಸ್ಕರ್ ರಾವ್ ಅವರು ಮಾರ್ಚ್ 1ರ ಬುಧವಾರ ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ.
ಇಂದು ಬೆಳಗ್ಗೆ ಬಿಜೆಪಿ ಕಚೇರಿಗೆ ಭಾಸ್ಕರ್ ರಾವ್ ಭೇಟಿ ನೀಡಿದ್ದರು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ರಾಜ್ಯ ಚುನಾವಣಾ ಸಹ ಉಸ್ತುವಾರಿ ಕೆ.ಅಣ್ಣಾಮಲೈ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರೊಂದಿಗೆ ಈ ವೇಳೆ ಚರ್ಚೆ ಮಾಡಿದ್ದರು.
ಇದನ್ನೂ ಓದಿ: HD Deve Gowda: ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರಿಗೆ ಅನಾರೋಗ್ಯ, ಖಾಸಗಿ ಆಸ್ಪತ್ರೆಗೆ ದಾಖಲು
ಕಂದಾಯ ಸಚಿವ ಆರ್ ಅಶೋಕ್ ಭೇಟಿಯಾಗಿದ್ದ ಭಾಸ್ಕರ್ ರಾವ್
ಬಿಜೆಪಿ ಕಚೇರಿಗೆ ಭೇಟಿ ನೀಡಿದ ಬಳಿಕ ಕಂದಾಯ ಸಚಿವ ಆರ್ ಅಶೋಕ್ ಜೊತೆಗೂ ಭಾಸ್ಕರ್ ರಾವ್ ಪದ್ಮನಾಭನಗರದಲ್ಲಿ ಮಾತುಕತೆ ನಡೆಸಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಆಪ್ ಪಕ್ಷದಿಂದ ಬಸವನಗುಡಿ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಭಾಸ್ಕರ್ ರಾವ್ ಅವರು ಸಿದ್ಧತೆ ನಡೆಸಿದ್ದರು. ಆದರೆ ಇದರ ನಡುವೆಯೇ ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿ ಹಲವರಿಗೆ ಅಚ್ಚರಿ ಮೂಡಿಸಿದೆ.
ದೆಹಲಿ ಸಿಎಂ, ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಸಮ್ಮುಖದಲ್ಲಿ ಎಎಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದ ಭಾಸ್ಕರ್ ರಾವ್ ಅವರು ಆ ಬಳಿಕ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ವಿರುದ್ಧ ಹಲವು ಬಾರಿ ವಾಗ್ದಾಳಿ ನಡೆಸಿದ್ದರು.
ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧೆಗೆ ಒಲವು
ಭಾಸ್ಕರ್ ರಾವ್ ಅವರು ಎಎಪಿಗೆ ಸೇರ್ಪಡೆಯಾದ ಬೆನ್ನಲ್ಲೇ ಅವರಿಗೆ ಪಕ್ಷದಲ್ಲಿ ಹೆಚ್ಚಿನ ಜವಾಬ್ದಾರಿಗಳನ್ನು ನೀಡಲಾಗಿತ್ತು. ಪಂಜಾಬ್ನಲ್ಲಿ ಭರ್ಜರಿ ಗೆಲುವು ಪಡೆದು ಉತ್ಸಾಹದಲ್ಲಿದ್ದ ಎಎಪಿಗೆ ರಾಜ್ಯದಲ್ಲಿ ಭಾಸ್ಕರ್ ರಾವ್ ಅವರ ಪಕ್ಷ ಸೇರ್ಪಡೆ ಹೆಚ್ಚಿನ ಬಲವನ್ನು ನೀಡಿತ್ತು. ಭಾಸ್ಕರ್ ರಾವ್ ಅವರು ರಾಜಕಾರಣ ಪ್ರವೇಶ ಮಾಡುತ್ತಾರೆ ಎಂಬ ಸುದ್ದಿ ಕೇಳಿ ಬಂದಾಗ, ಕಾಂಗ್ರೆಸ್ ಸೇರಿ ಬಸವನಗುಡಿ ವಿಧಾನಸಭಾ ಕ್ಷೇತ್ರ ಅಥವಾ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಹುರಿಯಾಳಾಗುತ್ತಾರೆ ಎಂಬ ದಟ್ಟ ವದಂತಿ ಇತ್ತು. ಕಡೆಗೆ ಅವರು ಆಮ್ ಆದ್ಮಿ ಪಕ್ಷ ಸೇರ್ಪಡೆ ಆಗಿದ್ದರು.
ಮಾರ್ಚ್ 4ಕ್ಕೆ ಅರವಿಂದ್ ಕೇಜ್ರಿವಾಲ್ ಕರ್ನಾಟಕಕ್ಕೆ ಭೇಟಿ
ರಾಜಕೀಯ ಪ್ರವೇಶಕ್ಕೂ ಮುನ್ನ ರೈಲ್ವೇ ಇಲಾಖೆಯ ಎಡಿಜಿಪಿಯಾಗಿದ್ದ ಭಾಸ್ಕರ್ ರಾವ್ ಅವರು ಐಪಿಎಸ್ ಸೇವೆಗೆ ಗುಡ್ ಬೈ ಹೇಳಿದ್ದರು. ಆದರೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ರಾಜ್ಯಕ್ಕೆ ಮಾರ್ಚ್ 4ರಂದು ಭೇಟಿ ನೀಡುತ್ತಿದ್ದು, ಈ ಸಂದರ್ಭದಲ್ಲಿ ಅಪರೇಷನ್ ಕಮಲ ನಡೆಸುವುದಲ್ಲಿ ಬಿಜೆಪಿ ಯಶಸ್ವಿಯಾಗಿದೆ ಎನ್ನಲಾಗಿದೆ.
ಇದನ್ನೂ ಓದಿ: RBI Restrictions: ಗ್ರಾಹಕರಿಗೆ ಬಿಗ್ ಶಾಕ್! ಕರ್ನಾಟಕದ ಈ ಬ್ಯಾಂಕ್ ಇಂದಿನಿಂದ ಬಂದ್
ಮತ್ತೊಂದು ಕಡೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ರಾಜ್ಯ ಬಿಜೆಪಿ ಕಚೇರಿಯಲ್ಲಿದ್ದ ಕಾರಣ ಅವರನ್ನು ಭೇಟಿ ಮಾಡಿ ಉಭಯ ಕುಶಲೋಪರಿ ವಿಚಾರಿಸಲು ಭಾಸ್ಕರ್ ರಾವ್ ಬಿಜೆಪಿ ಕಚೇರಿ ಭೇಟಿ ನೀಡಿದ್ದರು ಎಂಬ ಮಾತು ಕೇಳಿ ಬಂದಿದೆ. ಆದರೆ ಭಾಸ್ಕರ್ ರಾವ್ ಅವರು ಬಿಜೆಪಿ ಸೇರ್ಪಡೆಗೆ ಬಿಜೆಪಿ ವರಿಷ್ಠರು ಗ್ರೀನ್ ಸಿಗ್ನಲ್ ನೀಡಿರುವ ಹಿನ್ನೆಲೆಯಲ್ಲಿ ಮಾರ್ಚ್ 1ರಂದು ಬಿಜೆಪಿ ಸೇರಲು ಮಾಜಿ ಐಪಿಎಸ್ ಅಧಿಕಾರಿ ಮುಂದಾಗಿದ್ದಾರೆ ಎನ್ನಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ