ರಾಜ್ಯ ಸರ್ಕಾರದ ಮೇಲೆ ಮತ್ತೊಮ್ಮೆ 40% ಕಮಿಷನ್ (Corruption) ತೂಗುಕತ್ತಿ ತೂಗುತ್ತಿದೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (Kempanna) ಗಂಭೀರ ಆರೋಪ ಮಾಡಿದ್ದಾರೆ. ಸರ್ಕಾರದ ಸಂಪೂರ್ಣ ವ್ಯವಸ್ಥೆಯೇ ಭ್ರಷ್ಟಾಚಾರದಲ್ಲಿ ಮುಳುಗಿದೆ. ಇಲ್ಲಿ ಮುಖ್ಯಮಂತ್ರಿ ಬೊಮ್ಮಾಯಿಯಿಂದ (Basavaraja Bommai) ಹಿಡಿದು ಸಚಿವರುಗಳು, (Ministers), ಶಾಸಕರು ಪ್ರತಿಯೊಂದು ಇಲಾಖೆಯಲ್ಲಿಯೂ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಸರ್ಕಾರದ ಆಡಳಿತ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೇ ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ (Munirathna) ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ. ಈ ಆರೋಪಕ್ಕೆ ಸಚಿವ ಮುನಿರತ್ನ, ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ಕೊಟ್ಟಿದ್ದಾರೆ. ದಾಖಲೆ (Records) ತನ್ನಿ ಅಂತಾ ಸವಾಲ್ ಹಾಕಿದ್ದಾರೆ.
ರಾಜ್ಯ ಗುತ್ತಿಗೆದಾರರ ಸಂಘ ಮತ್ತೊಮ್ಮೆ ಸರ್ಕಾರದ ವಿರುದ್ಧ ಸಿಡಿದೆದ್ದಿದೆ. ಬಿಜೆಪಿ ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದೆ. ಮುಖ್ಯಮಂತ್ರಿ ಬೊಮ್ಮಾಯಿಯಿಂದ ಹಿಡಿದು ಸಚಿವರುಗಳು, ಶಾಸಕರು ಪ್ರತಿಯೊಂದು ಇಲಾಖೆಯಲ್ಲಿಯೂ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಗಂಭೀರ ಆರೋಪಿಸಿದ್ದಾರೆ.
ಮುನಿರತ್ನ ಬೆದರಿಕೆ ಹಾಕುತ್ತಾರೆ-ಕೆಂಪಣ್ಣ
ಕೋಲಾರ ಜಿಲ್ಲೆ ಉಸ್ತುವಾರಿ ಸಚಿವ ಮುನಿರತ್ನ ವಿರುದ್ಧ ಕೆಂಪಣ್ಣ ಆರೋಪ ಮಾಡಿದ್ದಾರೆ. ಅಲ್ಲದೇ ಬೆದರಿಕೆ ಬಗ್ಗೆಯೂ ದೂರಿದ್ದಾರೆ. ಗುತ್ತಿಗೆದಾರರ ಕೆಲಸ ಮಂಜೂರು ಆಗಬೇಕೆಂದರೆ ಲಂಚ ಕೊಡಬೇಕು, ಇಲ್ಲದಿದ್ದರೆ ಗುತ್ತಿಗೆ ರದ್ದು ಮಾಡಲಾಗುವುದು, ಹಣ ಕಲೆಕ್ಟ್ ಮಾಡಿ ತನ್ನಿ ಎಂದು ತೋಟಗಾರಿಕೆ ಸಚಿವ ಮುನಿರತ್ನ ನೇರವಾಗಿ ಬೆದರಿಕೆ ಹಾಕುತ್ತಾರೆ ಎಂದು ಕೆಂಪಣ್ಣ ಹೇಳಿದ್ದಾರೆ.
ಮಾನನಷ್ಟ ಮೊಕದ್ದಮೆ ಕೇಸ್ ಎಚ್ಚರಿಕೆ
ತಮ್ಮ ವಿರುದ್ಧ 40% ಕಮಿಷನ್ ಆರೋಪ ಮಾಡಿರುವ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ವಿರುದ್ಧ ಮುನಿರತ್ನ ಗರಂ ಆಗಿದ್ದಾರೆ. ಕೆಂಪಣ್ಣ ಏನೇ ಆರೋಪ ಮಾಡಬಹುದು. ಅದಕ್ಕೆ ಸಾಕ್ಷಿ ಇದೆಯೇ, ಇದ್ದರೆ ದಾಖಲೆ ಕೊಡಬೇಕು. ಇಲ್ಲದಿದ್ದರೆ ನಾನು ಮಾನನಷ್ಟ ಮೊಕದ್ದಮೆ ಕೇಸ್ ಹಾಕುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ: ನಳಿನ್ ಕುಮಾರ್ ಕಟೀಲ್ ಬದಲಾವಣೆ ಬಹುತೇಕ ಫಿಕ್ಸ್; ಈ ಐವರಲ್ಲಿ ಯಾರಾಗ್ತಾರೆ ಬಿಜೆಪಿ ರಾಜ್ಯಾಧ್ಯಕ್ಷ?
ಇದನ್ನ ಇಲ್ಲಿಗೆ ಬಿಡಲ್ಲ- ಮುನಿರತ್ನ
ಕೆಂಪಣ್ಣ ತಮ್ಮ ಆರೋಪಕ್ಕೆ ಸಂಬಂಧಿಸಿದಂತೆ ಒಂದು ಸಣ್ಣ ಸಾಕ್ಷಿ ಕೊಡಲಿ. ನನ್ನ ಬಳಿ ಯಾರು ಬಂದಿದ್ದಾರೆ, ನಾನು ಏನು ಹೇಳಿದ್ದೇನೆ. ಎಲ್ಲವನ್ನೂ ನಾನೇ ತನಿಖೆ ಮಾಡಿಸುತ್ತೇನೆ, ಇದನ್ನ ಬಿಡಲ್ಲ. ಸರ್ಕಾರ, ಸಚಿವರ ಬಗ್ಗೆ ಆರೋಪ ಮಾಡಿದರೆ ಸುಮ್ಮನಿರಲ್ಲ. ಇದನ್ನ ಇಲ್ಲಿಗೆ ಬಿಡಲ್ಲ, ಕಾನೂನು ಹೋರಾಟ ಮಾಡ್ತೇನೆ. ನನ್ನ ತಪ್ಪಿದ್ದರೆ ಏನು ಶಿಕ್ಷೆ ಕೊಟ್ಟರೂ ನಾನು ಅನುಭವಿಸುತ್ತೇನೆ ಎಂದು ಸಚಿವ ಮುನಿರತ್ನ ಗುಡುಗಿದ್ದಾರೆ.
ಕೆಂಪಣ್ಣ ಆರೋಪದಲ್ಲಿ ಹುರುಳಿಲ್ಲ- ಸಿಎಂ ಬೊಮ್ಮಾಯಿ
ಕೆಂಪಣ್ಣ ಮಾಡುತ್ತಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಬಂದ ನಂತರ ಆರೋಪ ಮಾಡುತ್ತಿದ್ದಾರೆ. ಇದನ್ನು ಪ್ರಮುಖವಾಗಿ ಗಮನಿಸಬೇಕು. ಬೇರೆ ಯಾವ ರಾಜ್ಯದಲ್ಲಿಯೂ ಇಲ್ಲದ ಕ್ರಮ ಕೈಗೊಂಡಿದ್ದೇವೆ ಎಂದು ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.
ಕೆಂಪಣ್ಣಗೆ ಸವಾಲ್ ಹಾಕ್ತೀನಿ- ರೇಣುಕಾಚಾರ್ಯ
ಕೆಂಪಣ್ಣ ವಿರುದ್ಧ ರೇಣುಕಾಚಾರ್ಯ ಗರಂ ಆಗಿದ್ದಾರೆ. ಕೆಂಪಣ್ಣ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಬಂದು ಆರೋಪ ಮಾಡಿದ್ರು. ಸಿಎಂ ಬೊಮ್ಮಾಯಿ ಉತ್ತಮ ಸರ್ಕಾರ ಮಾಡ್ತಿದ್ದಾರೆ. ಪ್ರತೀ ಬಾರಿ ಕೆಂಪಣ್ಣ ಆರೋಪ ಮಾಡ್ತಾರೆ. ಯಾವುದೇ ದಾಖಲೆ ಕೊಡ್ತಿಲ್ಲ, ದಾಖಲೆ ಕೊಡಲಿ ಅಂತಾ ಸವಾಲ್ ಹಾಕಿದ್ದಾರೆ.
ಇದನ್ನೂ ಓದಿ: ಉತ್ತರ ಪ್ರದೇಶದ ಮಾದರಿಯಲ್ಲಿ ರಾಜ್ಯದಲ್ಲಿಯೂ ರಚನೆಯಾಗುತ್ತಾ ಮದರಸಾ ಶಿಕ್ಷಣ ಮಂಡಳಿ?; ಇಂದು ಮಹತ್ವದ ಸಭೆ
ಪ್ರಚಾರಕ್ಕಾಗಿ ಈ ರೀತಿಯ ಹೇಳಿಕೆ- ಬಿ.ಸಿ.ನಾಗೇಶ್
40% ಆರೋಪಕ್ಕೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿರುಗೇಟು ಕೊಟ್ಟಿದ್ದಾರೆ. ಪ್ರಚಾರಕ್ಕಾಗಿ ಈ ರೀತಿಯ ಹೇಳಿಕೆ ಕೊಡ್ತಿದ್ದಾರೆ. ಆರೋಪ ಮಾಡುವ ಸ್ವಾತಂತ್ರ್ಯ ಪ್ರತಿಯೊಬ್ಬರಿಗೂ ಇದೆ. ಆದರೆ ಆರೋಪ ಸಾಬೀತು ಪಡಿಸುವ ಜವಾಬ್ದಾರಿ ಬೆಳೆಸಿಕೊಳ್ಳಬೇಕು ಅಂತಾ ಹೇಳಿದ್ರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ