• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Bangalore Rain: ಬೆಂಗಳೂರಿನಲ್ಲಿ ಮುಂಜಾನೆಯಿಂದ ತುಂತುರು ಮಳೆ; ಕರ್ನಾಟಕದ ಹಲವೆಡೆ ಇನ್ನು 5 ದಿನ ಮಳೆ ಸಾಧ್ಯತೆ

Bangalore Rain: ಬೆಂಗಳೂರಿನಲ್ಲಿ ಮುಂಜಾನೆಯಿಂದ ತುಂತುರು ಮಳೆ; ಕರ್ನಾಟಕದ ಹಲವೆಡೆ ಇನ್ನು 5 ದಿನ ಮಳೆ ಸಾಧ್ಯತೆ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

Karnataka Weather: ಭಾರತ್​ ಬಂದ್​ ನಡುವೆ ಬೆಂಗಳೂರಿನ ದಾಸರಹಳ್ಳಿ, ಪೀಣ್ಯ, ಗೊರಗುಂಟೆಪಾಳ್ಯ, ಬಸವನಗುಡಿ, ಚಾಮರಾಜಪೇಟೆ, ಮೈಸೂರು ರಸ್ತೆ, ನೆಲಮಂಗಲ ಸೇರಿದಂತೆ ವಿವಿಧೆಡೆ ಮುಂಜಾನೆಯಿಂದಲೇ ವರುಣನ ಸಿಂಚನವಾಗಿದೆ.

  • Share this:

    ಬೆಂಗಳೂರು (ಡಿ. 8): ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕೇರಳ, ತಮಿಳುನಾಡಿನಲ್ಲಿ ಚಂಡಮಾರುತ ಎದ್ದಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಹಲವು ಜಿಲ್ಲೆಗಳಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆಯಾಗುತ್ತಿದೆ. ಇಂದು ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಭಾರತ್ ಬಂದ್​ಗೆ ಕರೆ ನೀಡಿವೆ. ಇಂದಿನ ಭಾರತ್ ಬಂದ್​ನ ನಡುವೆ ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ತುಂತುರು ಮಳೆ ಶುರುವಾಗಿದೆ. ಬೆಳಗ್ಗೆಯಿಂದ ಸತತ 4 ಗಂಟೆಯಿಂದ ಬೆಂಗಳೂರಿನಲ್ಲಿ ಮಳೆ ಸುರಿಯುತ್ತಿದೆ. ಬೆಳಗ್ಗೆ 6 ಗಂಟೆಯಿಂದಲೇ ಆರಂಭವಾಗಿರುವ ಭಾರತ್​ ಬಂದ್​ಗೆ ಮಳೆಯಿಂದ ಅಡ್ಡಿಯಾಗುವ ಸಾಧ್ಯತೆ ಎದುರಾಗಿದೆ.


    ಬೆಂಗಳೂರಿನ ದಾಸರಹಳ್ಳಿ, ಪೀಣ್ಯ, ಗೊರಗುಂಟೆಪಾಳ್ಯ, ಬಸವನಗುಡಿ, ಚಾಮರಾಜಪೇಟೆ, ಮೈಸೂರು ರಸ್ತೆ, ನೆಲಮಂಗಲ ಸೇರಿದಂತೆ ವಿವಿಧೆಡೆ ಮುಂಜಾನೆಯಿಂದಲೇ ವರುಣನ ಸಿಂಚನವಾಗಿದೆ. ಮಳೆಯಿಂದ ಬೈಕ್ ಸವಾರರು ಪರದಾಡುತ್ತಿದ್ದಾರೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ದಕ್ಷಿಣ ಭಾರತದ ಕರಾವಳಿ ತೀರಕ್ಕೆ ಬುರೇವಿ ಚಂಡಮಾರುತ ಅಪ್ಪಳಿಸಿದೆ. ಇದರಿಂದ ಇನ್ನೂ 5 ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.


    ಮೂರ್ನಾಲ್ಕು ದಿನಗಳಿಂದ ಬೆಂಗಳೂರಿನಲ್ಲಿ ತುಂತುರು ಮಳೆಯಾಗುತ್ತಿದ್ದು, ಇಂದು ಕೂಡ ಮಳೆ ಮುಂದುವರೆಯುವ ಸಾಧ್ಯತೆಯಿದೆ. ರಾಜ್ಯದ ಕರಾವಳಿ ತೀರ ಹಾಗೂ ದಕ್ಷಿಣ ಒಳನಾಡಿನಲ್ಲಿ ಡಿ. 12ರವರೆಗೂ ಮಳೆ ಸುರಿಯಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಶಿವಮೊಗ್ಗ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ದಾವಣಗೆರೆ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ರಾಮನಗರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಇನ್ನು 5 ದಿನಗಳ ಕಾಲ ಅಂದರೆ ಡಿ. 12ರವರೆಗೂ ಮಳೆಯಾಗಲಿದೆ.


    ಬೆಂಗಳೂರಿನಲ್ಲಿ ಇನ್ನು 2 ದಿನ ಗರಿಷ್ಠ 24 ಹಾಗೂ ಕನಿಷ್ಟ 19 ಡಿಗ್ರಿ ಸೆಲ್ಷಿಯಸ್ ತಾಪಮಾನ ಇರಲಿದ್ದು, ಚಳಿ ಹೆಚ್ಚಾಗಲಿದೆ. ಜೊತೆಗೆ ತುಂತುರು ಮಳೆಯೂ ಸುರಿಯು ಸಾಧ್ಯತೆ ಇರುವುದರಿಂದ ಬೆಂಗಳೂರಿನಲ್ಲಿ ಚಳಿಯ ಪ್ರಮಾಣ ಹೆಚ್ಚಾಗಲಿದೆ ಎಂದು ಕೂಡ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿತ್ತು. ಅದರಂತೆ ಇಂದು ಮುಂಜಾನೆಯಿಂದಲೇ ಬೆಂಗಳೂರಿನಲ್ಲಿ ಜಿಟಿಜಿಟಿ ಮಳೆ ಸುರಿಯುತ್ತಿದೆ.


    ಇದನ್ನೂ ಓದಿ: Bharat Bandh - ರಾಜ್ಯದಲ್ಲಿ ಬೆಳಗ್ಗೆ 6ರಿಂದಲೇ ಭಾರತ್ ಬಂದ್; ಜಿಟಿ ಮಳೆಯ ನಡುವೆಯೂ ರೈತರ ಪ್ರತಿಭಟನೆ


    ಇದರ ಜೊತೆಗೆ, ಉತ್ತರ ಕರ್ನಾಟಕದ ಜಿಲ್ಲೆಗಳಾದ ಬೆಳಗಾವಿ, ಹಾವೇರಿ, ಗದಗ, ಧಾರವಾಡ, ಹುಬ್ಬಳ್ಳಿ ಭಾಗದಲ್ಲಿ ಕೂಡ ಡಿ. 10ರಿಂದ 12ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಕೆಲವೆಡೆ ಇಂದು ಮಳೆಯಾಗುತ್ತಿದ್ದು, ಉಳಿದೆಡೆ ಮೋಡ ಮುಸುಕಿದ ವಾತಾವರಣವಿದೆ. ಆದರೆ, ಇಂದು ಸಂಜೆ 5 ಗಂಟೆಯ ಬಳಿಕ ಮಳೆಯಾಗುವ ಸಾಧ್ಯತೆಯಿದೆ.


    ನಿನ್ನೆ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಜೋರಾಗಿಯೇ ಮಳೆಯಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಉತ್ತರ ಕನ್ನಡದಲ್ಲಿ ಸೋಮವಾರ ಮಳೆಯಾಗಿದೆ. ಹಾಸನದಲ್ಲಿ ಜೋರಾಗಿಯೇ ಮಳೆ ಸುರಿದಿದೆ. ದಕ್ಷಿಣ ಕನ್ನಡದ ಬೆಳ್ತಂಗಡಿ ಸೇರಿದಂತೆ ಬಹುತೇಕ ತಾಲೂಕುಗಳಲ್ಲಿ ಮಳೆ ಅಬ್ಬರಿಸಿದೆ. ಇಂದು ಕೂಡ ಮಳೆ ಮುಂದುರೆಯುವ ಸಾಧ್ಯತೆಯಿದೆ ಎನ್ನಲಾಗಿದೆ.


    ಕೋಲಾರ, ದಾವಣಗೆರೆ ಕೊಪ್ಪಳ, ಹುಬ್ಬಳ್ಳಿ, ಬೆಳಗಾವಿಯಲ್ಲಿ ಇಂದು ಬೆಳಗ್ಗೆ ಆರು ಗಂಟೆಗೇ ರೈತರು ಪ್ರತಿಭಟನೆ ಪ್ರಾರಂಭಿಸಿದ್ದಾರೆ. ಕೆಲವೆಡೆ ಜಿಟಿಜಿಟಿ ಮಳೆಯನ್ನೂ ಲೆಕ್ಕಿಸದೆ ಟೈರ್​ಗೆ ಬೆಂಕಿ ಹಚ್ಚಿ ಮತ್ತು ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೂ ಅನೇಕ ಜಿಲ್ಲೆಗಳಲ್ಲಿ ಪ್ರತಿಭಟನೆಗಳು ತಡವಾಗಿ ಆರಂಭವಾಗುವ ನಿರೀಕ್ಷೆ ಇದೆ. ಆದರೆ, ಎಲ್ಲೂ ಕೂಡ ಜನಜೀವನ ಅಸ್ತವ್ಯಸ್ತಗೊಂಡಿಲ್ಲ.

    Published by:Sushma Chakre
    First published: