ಬೆಂಗಳೂರು (ಜೂನ್ 11): ಕರ್ನಾಟಕದ ಹಲವು ಜಿಲ್ಲೆಗಳಲ್ಲೂ ಪೆಟ್ರೋಲ್ ಬೆಲೆ 1 ಲೀಟರ್ಗೆ 100 ರೂ. ಗಡಿ ದಾಟಿದೆ. ದೇಶಾದ್ಯಂತ ಗಗನಕ್ಕೇರುತ್ತಿರುವ ಪೆಟ್ರೋಲ್ ಬೆಲೆಯೇರಿಕೆಯನ್ನು ವಿರೋಧಿಸಿ ಇಂದು ಪೆಟ್ರೋಲ್ ಬಂಕ್ಗಳು ಎದುರು ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲೂ ಕಾಂಗ್ರೆಸ್ ನಾಯಕರಿಂದ ಪ್ರತಿಭಟನೆ ನಡೆದಿದ್ದು, ಈ ವೇಳೆ ಕೈ ನಾಯಕರಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದ ಘಟನೆಯೂ ನಡೆಯಿತು.
ಕೇಂದ್ರ ಸರ್ಕಾರದ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹರಿಹಾಯ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ದೇಶದಲ್ಲಿ ಬಿಜೆಪಿ ಸರ್ಕಾರ ನರಕ ಸೃಷ್ಟಿಸುತ್ತಿದೆ. ಜನರಿಗೆ ತಪ್ಪು ಮಾಹಿತಿ ನೀಡಿ, ಸುಳ್ಳು ಹೇಳಿ ನರೇಂದ್ರ ಮೋದಿ ಅಧಿಕಾರ ಮಾಡುತ್ತಿದ್ದಾರೆ. ಮೋದಿ ಈ ದೇಶದ ಜನರ ರಕ್ತ ಹೀರುತ್ತಿದ್ದಾರೆ. ಬೆಲೆ ಏರಿಕೆ ಮಾಡಿ ಜನರ ರಕ್ತ ಕುಡಿಯುತ್ತಿದ್ದಾರೆ. ತಿಗಣೆಯಂತೆ ಜನರ ರಕ್ತ ಹೀರುತ್ತಿರುವ ಮೋದಿಗೆ ನಾಚಿಕೆ ಆಗುವುದಿಲ್ಲವಾ? ಎಂದು ವಾಗ್ದಾಳಿ ನಡೆಸಿದ್ದಾರೆ.
ಮನಮೋಹನ್ ಸರ್ಕಾರದದಲ್ಲಿ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಅವರು ಹಾಹಾಕಾರ ಸೃಷ್ಟಿ ಮಾಡಿದ್ದರು. ನರೇಂದ್ರ ಮೋದಿ ಅವರು ಪ್ರತಿಭಟನೆ ಮಾಡಿದ್ದರು. ಜನರಿಗೆ ಸುಳ್ಳು ಭರವಸೆ ನೀಡಿ ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದರು. ಅಚ್ಛೇ ದಿನ್ ಆಯೇಂಗೆ ಎಂದು ಹೇಳಿದ್ದರು. ಇವತ್ತು ನರಕದ ದಿನಗಳ ಬಂದಿವೆ. ನಾವು ನರಕ ನೋಡಿರಲಿಲ್ಲ. ಆದರೆ, ಇದೀಗ ನರಕದ ದಿನಗಳನ್ನು ನೋಡುತ್ತಿದ್ದೇವೆ. ಈಗ ಕೋವಿಡ್ ಸಂಕಷ್ವವಿದೆ. ಈ ಸಂದರ್ಭದಲ್ಲಿ ಬೆಲೆ ಏರಿಕೆ ಮಾಡಿದ್ದಾರೆ. ಇದರಿಂದ ಜನ ಸಾಮಾನ್ಯರು ಜೀವನ ನಡೆಸುವುದು ಹೇಗೆ? ತೈಲ ಬೆಲೆ ಏರಿಕೆಯಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗುತ್ತದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.
ಇದನ್ನೂ ಓದಿ: Petrol Price Today: ಗಗನಕ್ಕೇರಿದ ಪೆಟ್ರೋಲ್ ಬೆಲೆ; ಕೇಂದ್ರ ಸರ್ಕಾರದ ವಿರುದ್ಧ ಇಂದು ಕಾಂಗ್ರೆಸ್ ಪ್ರತಿಭಟನೆ
ದೇಶದಲ್ಲಿ ಪೆಟ್ರೋಲ್ ಡಿಸೇಲ್ ಗ್ಯಾಸ್ ಬೆಲೆ ಏರಿಕೆ ಆಗಿದೆ. ಬೆಲೆ ಏರಿಕೆ ಖಂಡಿಸಿ ವಿನೂತನ ಪ್ರತಿಭಟನೆ ನಡೆಯುತ್ತಿದೆ. ರಾಜ್ಯದಲ್ಲೂ ಎಐಸಿಸಿ ಆದೇಶದ ಮೇರೆಗೆ ಪ್ರತಿಭಟನೆ ನಡೆಯುತ್ತಿದೆ. ಐದು ದಿನಗಳ ಕಾಲ ಪ್ರತಿಭಟನೆ ನಡೆಯಲಿದೆ. ಐದು ಸಾವಿರ ಪೆಟ್ರೋಲ್ ಬಂಕ್ ನಲ್ಲಿ ಪ್ರತಿಭಟನೆ ಮಾಡಲಾಗುತ್ತಿದೆ. ಈ ಮೂಲಕ ಕೇಂದ್ರ ಸರ್ಕಾರದ ಗಮನ ಸೆಳೆಯುತ್ತಿದ್ದೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದ ದಿನೇಶ್ ಗುಂಡೂರಾವ್, ಮೋದಿ ನೋಟ್ ಬ್ಯಾನ್ ಮಾಡಿ ಜನರನ್ನ ಕ್ಯೂನಲ್ಲಿ ನಿಲ್ಲಿಸಿದರು. ಕೋವಿಡ್ ಬಂದು ಜನರ ಪರಿಸ್ಥಿತಿ ಅಯೋಮಯವಾಗಿದೆ. ಮೋದಿ ಅವರ ಬಿಳಿ ಗಡ್ಡ, ಪೆಟ್ರೋಲ್ ಬೆಲೆ ಮಾತ್ರ ಬೆಳೆಯುತ್ತಿದೆ. ಈ ರೀತಿಯ ಆಡಳಿತ ದೇಶದ ಪರಿಸ್ಥಿತಿಯನ್ನು ಹದಗೆಡಿಸಿದೆ. ಅವರು ತಾನೊಬ್ಬ ನಾಯಕ, ಮಹಾ ನಾಯಕ ಅಂದುಕೊಂಡಿದ್ದಾರೆ. ತಮ್ಮ ಹೆಸರಲ್ಲಿ ಸ್ಟೇಡಿಯಂ ಕಟ್ಟಿಸಿಕೊಂಡಿದ್ದಾರೆ. ಸರ್ಕಾರಕ್ಕೆ ಕಿವಿ, ಕಣ್ಣು, ಬಾಯಿ ಇದ್ರೆ ತಾರ್ಕಿಕ ಅಂತ್ಯ ಕಾಣಿಸಬಹುದಿತ್ತು. ಮೋದಿ ಮಾತನ್ನೇ ಆಡೋದಿಲ್ಲ. ಇದು ಕಿವುಡ, ಮೂಕ ಸರ್ಕಾರ. ಮನಮೋಹನ್ ಸಿಂಗ್ ಇದ್ದಾಗ ಕಚ್ಚಾ ತೈಲ ಬೆಲೆ ಹೆಚ್ಚಾಗಿತ್ತು, ಆದರೂ ಕಡಿಮೆ ಬೆಲೆಯಲ್ಲಿ ಪೆಟ್ರೋಲ್ ನೀಡಲಾಗುತ್ತಿತ್ತು. ಈಗ ಕಡಿಮೆ ದರ ಇದ್ದರೂ ಹೆಚ್ಚು ಬೆಲೆಗೆ ಮಾರಲಾಗ್ತಿದೆ ಎಂದು ಆರೋಪಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ