ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸಾಂಕ್ರಾಮಿಕ ರೋಗ ಪರಿಸ್ಥಿತಿಯನ್ನು ಸಮರ್ಥವಾಗಿ ಹತೋಟಿಗೆ ತರಲು ಕಾನ್ಫಡರೇಶನ್ ಆಫ್ ಇಂಡಿಯನ್ ಇಂಡಸ್ಟ್ರಿ (ಸಿಐಐ) ಸಹಯೋಗದಲ್ಲಿ ಟಾಸ್ಕ್ ಫೋರ್ಸ್ ರಚಿಸಲು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಸಚಿವ ಡಾ.ಕೆ.ಸುಧಾಕರ್, ಸಿಐಐ ಪ್ರತಿನಿಧಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದರು. ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿಯನ್ನು ನಿಯಂತ್ರಿಸಲು ಸಿಐಐ ಹಾಗೂ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಟಾಸ್ಕ್ ಫೋರ್ಸ್ ರಚಿಸಲಾಗುತ್ತದೆ ಎಂದು ತಿಳಿಸಿದರು.
ಈ ಸಮಿತಿಯು ವೈದ್ಯಕೀಯ ಹಾಗೂ ಇತರೆ ಮೂಲಸೌಕರ್ಯಗಳನ್ನು ಬಲಪಡಿಸುವ ಕಾರ್ಯ ಮಾಡಲಿದೆ. ಕೊರೊನಾ ಕುರಿತ ಎಲ್ಲ ಸಮಸ್ಯೆಗಳನ್ನು ಪರಿಹರಿಸಲು ಕಾಲ್ ಸೆಂಟರ್, ಮಾಡ್ಯೂಲರ್ ಐಸಿಯುಗಳ ನಿರ್ಮಾಣ ಸೇರಿದಂತೆ ಹಲವು ಕಾರ್ಯಗಳಲ್ಲಿ ಟಾಸ್ಕ್ ಫೋರ್ಸ್ ಮುಂದಾಳತ್ವ ವಹಿಸಬೇಕು ಎಂದು ಸಭೆಯಲ್ಲಿ ನಿರ್ಣಯಿಸಲಾಯಿತು. ಆರೋಗ್ಯ ವಲಯದಲ್ಲಿ ತಂತ್ರಜ್ಞಾನ ಬಳಕೆ, ಔಷಧಿಗಳ ಪೂರೈಕೆ, ವೈದ್ಯಕೀಯ ಸಾಧನ, ಉಪಕರಣಗಳ ಪೂರೈಕೆ, ತಂತ್ರಾಂಶ ಒದಗಿಸುವುದು ಸೇರಿದಂತೆ ಹಲವು ರೀತಿಯಲ್ಲಿ ಟಾಸ್ಕ್ ಫೋರ್ಸ್ ರಾಜ್ಯ ಸರ್ಕಾರಕ್ಕೆ ನೆರವು ನೀಡಲಿದೆ.
ಸಭೆಯಲ್ಲಿ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ಕೋವಿಡ್ ನಿರ್ವಹಣೆ ಮಾಡಲು ಕೆಲ ಸಹಾಯವಾಣಿಗಳಿವೆ. ಆದರೆ ಇದರಿಂದಾಗಿ ಜನರಿಂದ ಗೊಂದಲ ಉಂಟಾಗುವ ಸಾಧ್ಯತೆ ಇದೆ. ಇದಕ್ಕಾಗಿ ಒಂದು ಬೃಹತ್ ಕಾಲ್ ಸೆಂಟರ್ ನಿರ್ಮಿಸಿ ಎಲ್ಲವನ್ನೂ ಸಮನ್ವಯಗೊಳಿಸುವ ವ್ಯವಸ್ಥೆ ತರಬೇಕಿದೆ. ಈ ಕಾರ್ಯವನ್ನು ಟಾಸ್ಕ್ ಫೋರ್ಸ್ ಗೆ ವಹಿಸಲಾಗಿದೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ತಜ್ಞರು ಸಹಾಯವಾಣಿ ಸಿಬ್ಬಂದಿಗೆ ತರಬೇತಿ ನೀಡಲಿದ್ದಾರೆ.ಈ ಟಾಸ್ಕ್ ಫೋರ್ಸ್ ಕೋವಿಡ್ ನಿರ್ವಹಣೆಯಲ್ಲಿ ತಂತ್ರಜ್ಞಾನದ ಬಳಕೆ ಕುರಿತಾಗಿ ಸರ್ಕಾರಕ್ಕೆ ನೆರವು ನೀಡಲಿದೆ ಎಂದು ತಿಳಿಸಿದರು.
ಇದನ್ನು ಓದಿ: ಉಚಿತ ಲಸಿಕೆ ಘೋಷಿಸಿದ ತೆಲಂಗಾಣ, ಉತ್ತರಾಖಂಡ್ ಮುಖ್ಯಮಂತ್ರಿಗಳು; BSY ಸರ್ಕಾರದ ನಿರ್ಧಾರವೇನು?
ಕೋವಿಡ್ ರೋಗಿಗಳಿಗಾಗಿ ರಾಜ್ಯದಲ್ಲಿ 3,000-5,000 ಮಾಡ್ಯೂಲರ್ ಐಸಿಯು ಹಾಸಿಗೆ ನಿರ್ಮಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದಕ್ಕೂ ಟಾಸ್ಕ್ ಫೋರ್ಸ್ ನೆರವಾಗಲಿದೆ. ಕೆಲ ಕಂಪನಿಗಳು ಕೇವಲ 7-10 ದಿನಗಳಲ್ಲಿ ಇಂತಹ ಐಸಿಯು ರೂಪಿಸುವುದಾಗಿ ತಿಳಿಸಿವೆ. ಕಂಪನಿಗಳ ಸಿಎಸ್ ಆರ್ ಅನುದಾನವನ್ನು ಕೋವಿಡ್ ನಿಯಂತ್ರಣ ಕಾರ್ಯಕ್ಕೆ ಬಳಸಿಕೊಳ್ಳಲು ಕೇಂದ್ರ ಸರ್ಕಾರ ಸಲಹೆ ನೀಡಿದೆ. ಎಲ್ಲ ಉದ್ಯಮಗಳು ಸಿಎಸ್ ಆರ್ ಅನುದಾನವನ್ನು ಕೊರೊನಾ ನಿಯಂತ್ರಣಕ್ಕೆ ನೀಡಬೇಕು. ಅದಕ್ಕಿಂತ ಹೆಚ್ಚಾಗಿ ತಂತ್ರಜ್ಞಾನದ ನೆರವು ನೀಡಬೇಕು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ