ಮೈಸೂರು(ಜ.06): ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಕಾಣಿಸಿಕೊಂಡ ಹಕ್ಕಿಜ್ವರವು ಬಳಿಕ ನೆರೆಯ ರಾಜ್ಯ ಕೇರಳದಲ್ಲಿ ಪತ್ತೆಯಾಗಿತ್ತು. ಕೇರಳದಲ್ಲಿ ಹಕ್ಕಿಜ್ವರ ಕಾಣಿಸಿಕೊಂಡ ನಂತರ ರಾಜ್ಯದಲ್ಲಿಯೂ ಆತಂಕ ಹೆಚ್ಚಾಗಿದೆ. ಅದರಲ್ಲೂ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹಕ್ಕಿಜ್ವರ ಭೀತಿ ಹೆಚ್ಚಾಗಿದೆ. ಹೀಗಾಗಿ ಮೈಸೂರಿನಲ್ಲಿ ಜಿಲ್ಲಾಡಳಿತವು ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ. ಮೈಸೂರು-ಕೇರಳ ಗಡಿಯಲ್ಲಿ ಕೋಳಿ ಹಾಗೂ ಪಕ್ಷಿ ಸಾಗಣೆಗೆ ನಿಷಿದ್ಧ ಹೇರಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ.
ಈ ಬಗ್ಗೆ ಮೈಸೂರು ಜಿಲ್ಲಾಡಳಿತ ತುಸು ಹೆಚ್ಚಾಗಿಯೇ ಮುಂಜಾಗ್ರತೆ ವಹಿಸಿದೆ. ಕೇರಳ ರಾಜ್ಯದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೇರಳ ರಾಜ್ಯದ ಗಡಿ ಭಾಗದಲ್ಲಿ ಬರುವ ಹೆಚ್.ಡಿ.ಕೋಟೆ ತಾಲ್ಲೂಕಿನ ಬಾವಲಿ ಚೆಕ್ಪೋಸ್ಟ್ನಿಂದ ಕೋಳಿ ಮತ್ತು ಇತರೆ ಪಕ್ಷಿಗಳ ಸಾಗಾಣಿಕೆಯನ್ನು ನಿರ್ಬಂಧಿಸಿ ಡಿಸಿ ಆದೇಶ ಹೊರಡಿಸಿದ್ದಾರೆ.
ಇನ್ನು, ಕೇರಳದಿಂದ ಬಾವಲಿ ಚೆಕ್ ಪೋಸ್ಟ್ ಮೂಲಕ ಬರುವ ವಾಹನಗಳನ್ನು ಸ್ಯಾನಿಟೈಜ್ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಜೊತೆಗೆ ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ.
ಕೋಳಿಗಳು, ಹಿತ್ತಲಕೋಳಿಗಳು, ಹಕ್ಕಿಗಳು, ಕಾಡುಹಕ್ಕಿಗಳು, ವಲಸೆ ಹಕ್ಕಿಗಳು ಯಾವುದೇ ಹಕ್ಕಿಗಳಲ್ಲಿ ಅಸ್ವಾಭಾವಿಕ ರೋಗ ಲಕ್ಷಣಗಳು ಕಂಡುಬಂದಲ್ಲಿ ಅಥವಾ ಅಸ್ವಾಭಾವಿಕ ಮರಣ ಸಂಭವಿಸಿದಲ್ಲಿ ಕೂಡಲೇ ಪಶುಪಾಲನ ಇಲಾಖಾ ಅಧಿಕಾರಿಗಳಿಗೆ ಮಾಹಿತಿ ನೀಡಬೇಕೆಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.
ಅಧಿಕಾರಿಗಳು ತೀವ್ರ ನಿಗಾವಹಿಸಿ ಹಕ್ಕಿ ಜ್ವರ ಸಂಭವನೀಯತೆಯನ್ನು ಪರಿಗಣಿಸಿ ಸಂಬಂಧಪಟ್ಟ ಪ್ರಯೋಗಾಲಯಕ್ಕೆ ರೋಗ ವಿಶ್ಲೇಷಣೆ ನಡೆಸುವ ಬಗ್ಗೆ ಕ್ರಮ ವಹಿಸಲು ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
Bird Flu: ಕೇರಳಕ್ಕೂ ಕಾಲಿಟ್ಟ ಹಕ್ಕಿ ಜ್ವರ; 2 ಜಿಲ್ಲೆಗಳಲ್ಲಿ 12 ಸಾವಿರಕ್ಕೂ ಹೆಚ್ಚು ಬಾತುಕೋಳಿಗಳು ಸಾವು
ಜೀವಂತ ಕೋಳಿ/ಮಾಂಸ ಮಾರಾಟ ಕೇಂದ್ರಗಳು ಮತ್ತು ಕೋಳಿ ಸಾಗಾಣಿಕೆ ವಾಹನಗಳ ಚಲನ ವಲನದ ಬಗ್ಗೆ ನಿಗಾ ವಹಿಸಲು ಹಾಗೂ ಸಂದರ್ಭಾನುಸಾರ ಸೂಕ್ತ ಕ್ರಮ ವಹಿಸಿ ಮಾಹಿತಿ ನೀಡಲು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಡಿಸಿ ರೋಹಿಣಿ ಸಿಂಧೂರಿ ಸೂಚಿಸಿದ್ದಾರೆ.
ಇನ್ನು, ಮೈಸೂರಿನಾದ್ಯಂತ ಹಕ್ಕಿಗಳ ಪಿಕ್ಕೆ ಸ್ಯಾಂಪಲ್ ಸಂಗ್ರಹಕ್ಕೆ ಕಾರ್ಯಾಚರಣೆ ಶುರುವಾಗಿದೆ. ಸಾಂಸ್ಕೃತಿಕ ನಗರಿ ಮೈಸೂರಿಗೆ ಮತ್ತೆ ಹಕ್ಕಿ ಜ್ವರದ ಭೀತಿ ಕಾಡಿದೆ.
ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ ಬೆನ್ನಲ್ಲೇ ನಮ್ಮ ನೆರೆಯ ರಾಜ್ಯವಾದ ಕೇರಳದಲ್ಲಿ ಕೂಡ ಹಕ್ಕಿ ಜ್ವರದ ಭೀತಿ ಹೆಚ್ಚಾಗಿತ್ತು. ರಾಜಸ್ಥಾನದಲ್ಲಿ 250ಕ್ಕೂ ಹೆಚ್ಚು ಕಾಗೆಗಳು ಸಾವನ್ನಪ್ಪಿದ್ದು, ಅವುಗಳಿಗೆ ಹಕ್ಕಿ ಜ್ವರದ ವೈರಸ್ ತಗುಲಿರುವುದು ಪತ್ತೆಯಾಗಿತ್ತು. ಅದರ ಬೆನ್ನಲ್ಲೇ ಕೇರಳದ ಅಲಪ್ಪುಳ, ಕೊಟ್ಟಾಯಂ ಜಿಲ್ಲೆಗಳಲ್ಲಿ ಕೂಡ ಹಕ್ಕಿ ಜ್ವರ ಕಾಣಿಸಿಕೊಂಡಿತ್ತು ಹೀಗಾಗಿ, ಜಿಲ್ಲಾಡಳಿತಗಳು ಕಂಟ್ರೋಲ್ ರೂಂಗಳನ್ನು ಆರಂಭಿಸಿದ್ದವು.
ಡಿಸೆಂಬರ್ ಕೊನೆಯ ವಾರದಲ್ಲಿ ಕೊಟ್ಟಾಯಂ ಮತ್ತು ಅಲಪ್ಪುಳ ಜಿಲ್ಲೆಗಳಲ್ಲಿ ಸಾಕಷ್ಟು ಬಾತುಕೋಳಿಗಳು ಸಾವನ್ನಪ್ಪಿದ್ದವು. ಅವುಗಳಲ್ಲಿ 8 ಬಾತುಕೋಳಿಗಳ ಸ್ಯಾಂಪಲ್ ಅನ್ನು ಭೂಪಾಲ್ನ ಲ್ಯಾಬೋರೇಟರಿಗೆ ಕಳುಹಿಸಲಾಗಿತ್ತು. ಅವುಗಳಲ್ಲಿ 5 ಸ್ಯಾಂಪಲ್ನಲ್ಲಿ ಹಕ್ಕಿ ಜ್ವರದ ವೈರಸ್ ಪತ್ತೆಯಾಗಿರುವುದು ತಿಳಿದು ಬಂದಿದೆ.
ಈ ಬೆನ್ನಲ್ಲೇ ಮೈಸೂರಿನಲ್ಲಿಯೂ ಹಕ್ಕಿಜ್ವರ ಭೀತಿ ಹೆಚ್ಚಾಗಿರುವುದರಿಂದ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮ ವಹಿಸಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ