ಮೈಸೂರು(ಜ.06): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹಕ್ಕಿ ಜ್ವರ ಭೀತಿ ಹಿನ್ನೆಲೆ, ಕರ್ನಾಟಕ-ಕೇರಳ ಗಡಿಯಲ್ಲಿ ತೀವ್ರ ನಿಗಾ ವಹಿಸಲಾಗಿದೆ. ಕೇರಳದಿಂದ ಬರುವ ವಾಹನಗಳನ್ನು ಬಾವಲಿ ಚೆಕ್ಪೋಸ್ಟ್ನಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಕೋಳಿ, ಕೋಳಿ ಮಾಂಸ ಸಾಗಣೆ ವಾಹನಗಳನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ. ಪೊಲೀಸರೊಂದಿಗೆ ಪಶು ಸಂಗೋಪನೆ ಇಲಾಖೆ ಸಿಬ್ಬಂದಿಯೂ ಸಹ ನಿಗಾ ವಹಿಸಿದ್ದಾರೆ. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚನೆಯನ್ವಯ ಕ್ರಮ ಕೈಗೊಳ್ಳಲಾಗಿದೆ.
ಈ ಕುರಿತು ಮಾತನಾಡಿದ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಮೈಸೂರು ಜಿಲ್ಲೆಯಲ್ಲಿ ಈವರೆಗೆ ಹಕ್ಕಿಜ್ವರ ಕಂಡುಬಂದಿಲ್ಲ. ಹಕ್ಕಿಜ್ವರದ ಪತ್ತೆಗಾಗಿ ಜಿಲ್ಲಾಡಳಿತ ನಿರಂತರ ಕಾರ್ಯಚರಣೆ ನಡೆಸುತ್ತಿದೆ. ಅಕ್ಕಪಕ್ಕದ ರಾಜ್ಯದಲ್ಲಿ ಹಕ್ಕಿಜ್ವರ ಕಂಡುಬಂದಿದೆ. ಅಲ್ಲಿ ಕಲ್ಲಿಂಗ್ ಆಪರೇಷನ್ ಕೂಡ ನಡೆಯುತ್ತಿದೆ. ಕಳೆದ ವರ್ಷ ಮೈಸೂರಿನಲ್ಲಿ ಹಕ್ಕಿಜ್ವರದ ಹಿನ್ನೆಲೆಯಲ್ಲಿ ಕಲ್ಲಿಂಗ್ ಆಪರೇಷನ್ ನಡೆದಿತ್ತು. ಅದಕ್ಕಾಗಿ ಈ ಬಾರಿ ಸಾಕಷ್ಟು ಮುನ್ನೆಚ್ಚರಿಕಾ ಕ್ರಮ ವಹಿಸಿದ್ದೇವೆ ಎಂದು ಹೇಳಿದರು.
Tapan Misra – ನನ್ನ ಹತ್ಯೆಗೆ ನಡೆದಿತ್ತು ಯತ್ನ: ಇಸ್ರೋ ವಿಜ್ಞಾನಿ ತಪನ್ ಮಿಶ್ರಾ ಹೇಳಿಕೆ
ಕೇರಳ ಹಾಗೂ ತಮಿಳುನಾಡು ಗಡಿಯಲ್ಲಿ ಪಕ್ಷಿ ಹಾಗೂ ಕೋಳಿ ಸಾಗಾಟ ನಿಷೇಧ ಮಾಡಲಾಗಿದೆ. ಆ ರಾಜ್ಯಗಳಿಂದ ಬರುವ ವಾಹನಗಳನ್ನ ಸ್ಯಾನಿಟೈಜೇಶನ್ ಮಾಡಲಾಗುತ್ತಿದೆ. ವಲಸೆ ಹಕ್ಕಿಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಲಾಗಿದೆ. ಎಲ್ಲೆಲ್ಲಿ ವಲಸೆ ಹಕ್ಕಿಗಳು ಬರುತ್ತವೆ ಅಲ್ಲೆಲ್ಲಾ ಹಿಕ್ಕೆಗಳ ಸಂಗ್ರಹ ಮಾಡಿ ಲ್ಯಾಬ್ಗೆ ಕಳುಹಿಸಲಾಗಿದೆ. ಈವರೆಗೆ ಬಂದಿರುವ ಲ್ಯಾಬ್ ಬರದಿಯಲ್ಲಿ ಹಕ್ಕಿಜ್ವರ ಪತ್ತೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.
ಇನ್ನು, ಹಕ್ಕಿ ಜ್ವರ ಭೀತಿ ಹೆಚ್ಚಾಗಿರುವ ಹಿನ್ನೆಲೆ, ಮೃಗಾಲಯ ಬಂದ್ ಮಾಡುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ರೋಹಿಣಿ ಸಿಂಧೂರಿ, ಮೈಸೂರು ಮೃಗಾಲಯಕ್ಕೆ ತಾತ್ಕಾಲಿಕ ಪ್ರವೇಶ ನಿರ್ಬಂಧ ಹೇರುವ ಅಥವಾ ಇತರೆ ನಿರ್ಧಾರಗಳ ಬಗ್ಗೆ ಇನ್ನೂ ತೀರ್ಮಾನಿಸಿಲ್ಲ. ಹಕ್ಕಿಜ್ವರ ಪತ್ತೆಯಾದರೆ ಮುಂದಿನ ಹಂತದ ನಿರ್ಧಾರ ಮಾಡುತ್ತೇವೆ ಎಂದು ತಿಳಿಸಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ