ಬೆಂಗಳೂರು: ಕೋವಿಡ್ ನಿಯಂತ್ರಣ ವಿಷಯದಲ್ಲಿ ಕರ್ನಾಟಕ ಸರ್ಕಾರ ಕೈಗೊಂಡಿರುವ ಕ್ರಮಗಳು ಸಮಾಧಾನಕರವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಲಾಕ್ ಡೌನ್ ಸಡಿಲಿಕೆ ಬಳಿಕ ಹೆಚ್ಚಳವಾಗಿದ್ದ ಸೋಂಕು ಮತ್ತು ಸಾವಿನ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇದು ಸಮಾಧಾನಕರ ಸಂಗತಿ. ಮುಂದಿನ ದಿನಗಳಲ್ಲಿ ಇನ್ನಷ್ಟು ಸುಧಾರಣಾ ಕ್ರಮಗಳ ಮೂಲಕ ಸಂಪೂರ್ಣ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.
ರಾಜ್ಯದಲ್ಲಿನ ಕೋವಿಡ್ ಸ್ಥಿತಿಗತಿ ಹಾಗೂ ವ್ಯಾಕ್ಸಿನ್ ವಿತರಣೆಗೆ ಮಾಡಿಕೊಂಡಿರುವ ಸಿದ್ಧತೆಗಳ ಬಗ್ಗೆ ಕೇಂದ್ರ ಸಚಿವ ಹರ್ಷವರ್ಧನ್ ಅವರು ರಾಜ್ಯ ಆರೋಗ್ಯ ಸಚಿವ ಕೆ.ಸುಧಾಕರ್ ಹಾಗೂ ಇಲಾಖೆಯ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು. ಆರೋಗ್ಯ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ, ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್ ಹಾಜರಿದ್ದರು.
ಮುಂಬರುವ ಚಳಿಗಾಲ ಮತ್ತು ಹಬ್ಬಗಳನ್ನು ಗಮನದಲ್ಲಿಟ್ಟುಕೊಂಡು ಎಚ್ಚರಿಕೆಯಿಂದ ಕಾರ್ಯತಂತ್ರ ರೂಪಿಸಬೇಕು. ಅಂತಾರಾಷ್ಟ್ರೀಯ ಮತ್ತು ಅಂತರಾಜ್ಯ ಪ್ರಯಾಣಿಕರ ಮೇಲೆ ನಿಗಾವಹಿಸಬೇಕು. ಹಾಗೆಯೇ ಐಎಲ್ ಐ ಮತ್ತು ಸಾರಿ ಪ್ರಕರಣಗಳನ್ನು ಪತ್ತೆಹಚ್ಚಿ ಟೆಸ್ಟ್ ಗೆ ಒಳಪಡಿಸಿ ಸೋಂಕಿನ ಹರಡುವಿಕೆ ನಿಯಂತ್ರಿಸಬೇಕು. ವ್ಯಾಕ್ಸಿನ್ ವಿಷಯದಲ್ಲಿ ಈಗಾಗಲೇ ಕೆಲ ಸೂಚನೆ ನೀಡಲಾಗಿದೆ. ಆ ಬಗ್ಗೆಯೂ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದರು.
ರಾಜ್ಯ ಸರ್ಕಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಕೈಗೊಂಡಿರುವ ಕ್ರಮಗಳನ್ನು ವಿವರಿಸಿದ ಸಚಿವ ಸುಧಾಕರ್ ಅವರು, ಕೋವಿಡ್ ವಿರುದ್ಧದ ಹೋರಾಟದಲ್ಲಿ ಕೇಂದ್ರ ನೀಡಿರುವ ಸಹಕಾರಕ್ಕೆ ಕೃತಜ್ಞತೆಗಳನ್ನು ತಿಳಿಸಿದರು.
ಲಾಕ್ ಡೌನ್ ಗೆ ಮುಂಚೆ ಉತ್ತಮವಾಗಿ ನಿಯಂತ್ರಣದಲ್ಲಿದ್ದ ಕೋವಿಡ್ ಬಳಿಕ ಅಂತಾರಾಷ್ಟ್ರೀಯ ಮತ್ತು ಅಂತಾರಾಜ್ಯ ಪ್ರಯಾಣಿಕರು ಮತ್ತು ನೆರೆಯ ಐದು ರಾಜ್ಯಗಳ ಸಂಚಾರ ಸಂಪರ್ಕದಿಂದ ಹೆಚ್ಚಳವಾಯಿತು. ಆದರೂ ಕಟ್ಟುನಿಟ್ಟಿನ ಕ್ರಮ ಮತ್ತು ಟೆಸ್ಟ್ ಸಂಖ್ಯೆ ಹೆಚ್ಚಳದ ಮೂಲಕ ಇದೀಗ ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತಿದೆ. ಮರಣದ ಪ್ರಮಾಣವನ್ನು ಶೇಕಡಾ ಒಂದಕ್ಕಿಂತ ಕಡಿಮೆ ಮಾಡುವುದು ನಮ್ಮ ಗುರಿಯಾಗಿದೆ ಎಂದು ಸಚಿವ ಸುಧಾಕರ್ ವಿವರಿಸಿದರು.
ಇದನ್ನು ಓದಿ: ಸೇರೊ ಸರ್ವೆ ಪ್ರಕಾರ ರಾಜ್ಯದ ಶೇ.16 ಜನರಲ್ಲಿ ಕೋವಿಡ್ ಪ್ರತಿಕಾಯ ಪತ್ತೆ: ಸಚಿವ ಡಾ.ಕೆ.ಸುಧಾಕರ್
ಮುಂದಿನ ಚಳಿಗಾಲ ಮತ್ತು ಹಬ್ಬದ ದಿನಗಳಲ್ಲಿ ನಮ್ಮ ಕಾರ್ಯತಂತ್ರದಲ್ಲಿ ರಾಜಿ ಮಾಡಿಕೊಳ್ಳದೆ ಎಚ್ಚರಿಕೆಯಿಂದ ಮುಂದುವರಿಯಲಾಗುವುದು. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಮಹತ್ವದ ಸಂಗತಿಯಾಗಿದೆ. ಆ ನಿಟ್ಟಿನಲ್ಲಿ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಇತರೆ ಇಲಾಖೆಗಳ ಸಹಯೋಗದಲ್ಲಿ ಕಾರ್ಯತಂತ್ರ ರೂಪಿಸಲಾಗುತ್ತಿದೆ. ನಾನಾ ಪ್ರತಿಷ್ಠಿತ ಸಂಸ್ಥೆ ಗಳ ಸಹಯೋಗದಲ್ಲಿ ನಡೆಸಿರುವ ಸೆರೋ ಸಮೀಕ್ಷೆ ಕೂಡ ನಮಗೆ ಮುಂದೆ ಅಳವಡಿಸಿಕೊಳ್ಳಬೇಕಿರುವ ಕ್ರಮಗಳ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇದೇ ದಿನ ಅದನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ