ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ (Law And Order) ಕಾಪಾಡುವಲ್ಲಿ ಬಿಜೆಪಿ ಸರ್ಕಾರ (BJP Government) ವಿಫಲವಾಗಿದೆ ಎಂದು ವಿಪಕ್ಷಗಳು ಆರೋಪಿಸಿವೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Opposition Leader Siddaramaiah), ಮುಖ್ಯಮಂತ್ರಿಗಳು ಗೃಹ ಸಚಿವರ ರಾಜೀನಾಮೆ ಪಡೆಯಬೇಕೆಂದು ಆಗ್ರಹಿಸಿವೆ. ಇತ್ತ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (Former CM HD Kumaraswamy) ಟ್ವಿಟರ್ ಮೂಲಕ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಶಿಕ್ಷಣ, ಬ್ಯಾಂಕಿಂಗ್, ಕೈಗಾರಿಕೆ, ಸೃಜನಶೀಲತೆ, ಉದ್ಯಮಶೀಲತೆ ತವರು ಕರಾವಳಿ ಈಗ ಕೊಲೆಗಳ ಆಡಂಬೋಲವಾಗಿದೆ. 10 ದಿನಗಳಲ್ಲಿ 3 ಕೊಲೆ! ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ, ಆಂತರಿಕ ಭದ್ರತೆ ಸಂಪೂರ್ಣವಾಗಿ ಕುಸಿದಿರುವುದಕ್ಕೆ ಇದೇ ಸಾಕ್ಷಿ ಎಂದು ಕುಮಾರಸ್ವಾಮಿ ಆಕ್ರೋಶ ಹೊರ ಹಾಕಿದ್ದಾರೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮಂಗಳೂರಿನಲ್ಲಿ ಇದ್ದಾಗಲೇ 3ನೇ ಕೊಲೆ ಆಗಿದೆ. ಅಷ್ಟರಲ್ಲಿ ಸಿಎಂ ಸಾಹೇಬರು ಜಿಲ್ಲೆಯಿಂದ ಕಾಲ್ಕಿತ್ತಿದ್ದಾರೆ. ಅಲ್ಲೇ ಉಳಿದು ಪರಿಸ್ಥಿತಿ ಅವಲೋಕಿಸಿ, ಕೊಲೆಗೆಡುಕರನ್ನು ಹಡೆಮುರಿ ಕಟ್ಟುವಂತೆ ಕಟ್ಟಾಜ್ಞೆ ಮಾಡುವ ಧೈರ್ಯವನ್ನು ತೋರಲಿಲ್ಲ. ಅವರ ಅಧೈರ್ಯಕ್ಕೆ ಕಾರಣವೇನು? ಕಾಣದ ಕೈಗಳ ಒತ್ತಡವೇನಾದರೂ ಉಂಟಾ ಎಂದು ಪ್ರಶ್ನೆ ಮಾಡಿದ್ದಾರೆ.
ʼಜಂಗಲ್ ರಾಜ್ʼ ಮಾಡುವ ಹುನ್ನಾರ
ಕರಾವಳಿ ಶಿಕ್ಷಣದ ಕಾಶಿ, ದೇಗುಲಗಳ ಪುಣ್ಯನೆಲ, ಪ್ರಾಕೃತಿಕ ಸೌಂದರ್ಯದ ಬೀಡು, ಪ್ರವಾಸೋದ್ಯಮದಲ್ಲಿ ಕರ್ನಾಟಕದ ಕೀರ್ತಿಕಳಸ. ಇಂಥ ನೆಲದಲ್ಲಿ ದಿನಕ್ಕೊಂದು ಕೊಲೆ!! ಈ ಕೊಲೆಗಳನ್ನು ಹತ್ತಿಕ್ಕುವ ಬದಲು ಬೊಮ್ಮಾಯಿ ಅವರು ʼಬುಲ್ಡೋಜರ್ʼ ಬಗ್ಗೆ ಮಾತನಾಡುತ್ತಿದ್ದಾರೆ. ಕರಾವಳಿ & ಕರ್ನಾಟಕವನ್ನು ʼಜಂಗಲ್ ರಾಜ್ʼ ಮಾಡುವ ಹುನ್ನಾರವಷ್ಟೇ ಇದಾಗಿದೆ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ: Siddaramaiah ಅಧಿಕಾರವಧಿಯಲ್ಲಿ 32 ಕೊಲೆ, ನಾವು ಎಲ್ಲವನ್ನು ನಿಭಾಯಿಸಿದ್ದೇವೆ: CM Bommai
ಮನೆ, ಮನಗಳಲ್ಲಿ ಮಾತ್ರ ಇರಬೇಕಿದ್ದ ಧರ್ಮವನ್ನು ʼವ್ಯಸನʼವನ್ನಾಗಿಸಿ ಕೈಗೆ ದೊಣ್ಣೆ, ಶೂಲ ಕೊಟ್ಟು ಯುವಕರ ನಿಷ್ಕಲ್ಮಶ ಮುಗ್ಧಮನಸ್ಸಿಗೆ ʼಕೋಮುಪ್ರಾಷನʼ ಮಾಡಿದ ದುಷ್ಪರಿಣಾಮವೇ ಸರಣಿ ಕೊಲೆಗಳು. ಧರ್ಮನಿರಪೇಕ್ಷತೆ ತತ್ತ್ವವನ್ನು ನಿರ್ನಾಮ ಮಾಡಿದ್ದೇ ಇದಕ್ಕೆಲ್ಲ ಮೂಲ ಕಾರಣ
ಮಸೂದ್, ಪ್ರವೀಣ್ ನೆಟ್ಟಾರು; ಈಗ ಫಾಸಿಲ್. ಇನ್ನೆಷ್ಟು ಕೊಲೆಗಳು ನಡೆದರೆ ಸರಕಾರಕ್ಕೆ ತೃಪ್ತಿ? ಸರಣಿ ಕೊಲೆಗಳಿಂದ ಕರಾವಳಿಗೆ ಮಾತ್ರವಲ್ಲ, ಕರ್ನಾಟಕದ ಪ್ರತಿಷ್ಠೆಗೆ ಪೆಟ್ಟು ಬಿದ್ದಿದೆ. ಈ ಅರಾಜಕತೆಯಿಂದ ಇಡೀ ಕರಾವಳಿಯ ಆರ್ಥಿಕತೆಯೇ ಬುಡಮೇಲಾಗುತ್ತಿದೆ. ಆದರೆ, ಬಿಜೆಪಿ ಸರಕಾರ ಸಾವಿನಲ್ಲೂ ʼಕೊಲೆಗೆಡುಕ ರಾಜಕಾರಣʼ ಮಾಡುತ್ತಿದೆ.
ಹೊಸ ಹೊಸ ಟ್ವಿಸ್ಟ್
ಕೊಲೆಗಳ ಹಿಂದಿನ ಕಾರಣ ಬೇಧಿಸಿ ಕೊಲೆಗೆಡುಕರನ್ನು ಹತ್ತಿಕ್ಕುವ ಕೆಲಸ ಮಾಡಬೇಕಿದ್ದ ಬಿಜೆಪಿ ಸರಕಾರ, ಪ್ರತೀ ಕೊಲೆಗೂ ತಾನೇ ಮುಂದೆ ನಿಂತು ಹೊಸ ಹೊಸ ಟ್ವಿಸ್ಟ್ ನೀಡುತ್ತಿದೆ. ಸರಕಾರದ ಕೆಲಸ ಬಿಗಿ ಆಡಳಿತ ನಡೆಸುವುದೇ ಹೊರತು ಬೀದಿಯಲ್ಲಿ ನಿಂತು ಗಂಟಲು ಹರಿದುಕೊಳ್ಳುವುದಲ್ಲ.
ಇದನ್ನೂ ಓದಿ: Dakshina Kannada ಪ್ರವೇಶಕ್ಕೆ ಮುತಾಲಿಕ್ಗೆ ನಿರ್ಬಂಧ: ಆರಗ ಜ್ಞಾನೇಂದ್ರರನ್ನು ಕಿತ್ತು ಹಾಕಿ; ಸಿದ್ದು ಆಕ್ರೋಶ
ನಾವು ಸರಿಯಾಗಿ ನಿಭಾಯಿಸಿದ್ದೇವೆ
ಕಾನೂನು ಸುವ್ಯವಸ್ಥೆ ವಿಫಲ ಎಂಬ ಸಿದ್ದರಾಮಯ್ಯ ಆರೋಪಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಅವರು ಅಧಿಕಾರದಲ್ಲಿದ್ದಾಗ 32 ಸರಣಿ ಕೊಲೆಗಳಾಗಿವೆ. ಆಗ ಅವರು ಏನು ಮಾಡ್ತಿದ್ರು? ಎಲ್ಲವನ್ನೂ ರಾಜಕೀಯ ಚಷ್ಮಾದಲ್ಲಿ ನೋಡದಲ್ಲ. ನಾವು ಸರಿಯಾಗಿ ನಿಭಾಯಿಸಿದ್ದೇವೆ. ಸಿದ್ದರಾಮಯ್ಯನವರ ಸರ್ಕಾರದ ಅವಧಿಯಲ್ಲಿ SDPI ಮತ್ತು PFI ಮೇಲಿನ ಕೇಸ್ ತೆಗೆದಿದ್ದೆ ಇದಕ್ಕೆಲ್ಲ ಕಾರಣ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಆರೋಪ ಮಾಡಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ