ನೂರಾರು ವರ್ಷ ಗಾಂಧಿ-ನೆಹರು ಕುಟುಂಬ ಮಾಡಿದ ತ್ಯಾಗವನ್ನು ಕಾಂಗ್ರೆಸ್ ಮರೆಯಬಾರದು; ಮಲ್ಲಿಕಾರ್ಜುನ ಖರ್ಗೆ
ಒಂದು ಶತಮಾನಕ್ಕೂ ಹೆಚ್ಚು ಕಾಲ ನೆಹರೂ-ಗಾಂಧಿ ಕುಟುಂಬ ಪಕ್ಷ ಮತ್ತು ದೇಶಕ್ಕಾಗಿ ಮಾಡಿದ ತ್ಯಾಗವನ್ನು ಕಾಂಗ್ರೆಸ್ ಮರೆಯಬಾರದು. ಈಗ ಪಕ್ಷದ ಎಲ್ಲಾ ನಾಯಕರು ಸೋನಿಯಾ ಗಾಂಧಿ ಜೊತೆಗೆ ನಿಲ್ಲಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಟ್ವೀಟ್ ಮಾಡಿದ್ದಾರೆ
ಬೆಂಗಳೂರು (ಆ. 24): ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಇಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯೂ ನಡೆಯಲಿದ್ದು, ಈ ಬಗ್ಗೆ ನಿರ್ಧಾರ ಹೊರಬೀಳುವ ಸಾಧ್ಯತೆಯಿದೆ. ಕಾಂಗ್ರೆಸ್ನ ಕೆಲವು ನಾಯಕರು ಸೋನಿಯಾ ಗಾಂಧಿ ಅಥವಾ ರಾಹುಲ್ ಗಾಂಧಿಯೇ ಕಾಂಗ್ರೆಸ್ ಅಧ್ಯಕ್ಷರಾಗಬೇಕೆಂದು ಒತ್ತಾಯಿಸಿದ್ದಾರೆ. ಇನ್ನು ಕೆಲವು ಗಾಂಧಿ ಕುಟುಂಬದ ಹೊರತಾದ ವ್ಯಕ್ತಿಯನ್ನು ಅಧ್ಯಕ್ಷರನ್ನಾಗಿ ಮಾಡಿ ಎಂದು ಮನವಿ ಮಾಡಿದ್ದಾರೆ. ಸಂಸದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡುವ ಬಗ್ಗೆಯೂ ಹಲವರು ಪ್ರಸ್ತಾಪವಿಟ್ಟಿದ್ದಾರೆ. ಆದರೆ, ಕಾಂಗ್ರೆಸ್ ನಾಯಕತ್ವ ಬದಲಾವಣೆ ಬಗ್ಗೆ ಟ್ವೀಟ್ ಮಾಡಿರುವ ಮಲ್ಲಿಕಾರ್ಜುನ ಖರ್ಗೆ ಸೋನಿಯಾ ಗಾಂಧಿ ಪರವಾದ ನಿಲುವು ಪ್ರಕಟಿಸಿದ್ದಾರೆ.
ಸೋನಿಯಾ ಗಾಂಧಿ ತಮ್ಮ ಮಗನನ್ನೇ ಪಕ್ಷದ ಉತ್ತರಾಧಿಕಾರಿಯನ್ನಾಗಿ ಮಾಡಲು ಒಲವು ತೋರಿದ್ದರು. ಆದರೆ, ಅದಕ್ಕೆ ಪಕ್ಷದಲ್ಲೇ ಅನೇಕರು ವಿರೋಧ ವ್ಯಕ್ತಪಡಿಸಿದ್ದರು. ಜೊತೆಗೆ, ಖುದ್ದು ರಾಹುಲ್ ಗಾಂಧಿ ಕೂಡ ಈ ಬಗ್ಗೆ ಆಸಕ್ತಿ ತಳೆದಿಲ್ಲ. ಆದರೆ, ಕರ್ನಾಟಕದ ಬಹುತೇಕ ಎಲ್ಲ ಕೈ ನಾಯಕರು ಸೇರಿದಂತೆ ಹಲವರು ಗಾಂಧಿ ಕುಟುಂಬದವರೇ ಅಧ್ಯಕ್ಷರಾಗಬೇಕೆಂದು ಒತ್ತಾಯಿಸಿದ್ದಾರೆ. ಇದೀಗ ಮಲ್ಲಿಕಾರ್ಜುನ ಖರ್ಗೆ ಕೂಡ ಇದಕ್ಕೆ ಬೆಂಬಲ ಸೂಚಿಸಿ, ಟ್ವೀಟ್ ಮಾಡಿದ್ದಾರೆ.
ಒಂದು ಶತಮಾನಕ್ಕೂ ಹೆಚ್ಚು ಕಾಲ ನೆಹರೂ-ಗಾಂಧಿ ಕುಟುಂಬ ಪಕ್ಷ ಮತ್ತು ದೇಶಕ್ಕಾಗಿ ತ್ಯಾಗ ಮಾಡಿದೆ. ದೇಶಕ್ಕಾಗಿ ಹಲವು ಕೊಡುಗೆ ನೀಡಿದೆ. ಭಾರತದ ಅಭಿವೃದ್ಧಿಯ ಕಲ್ಪನೆಗೆ ಬಂಡೆಯಂತೆ ನಿಂತ ಸೋನಿಯಾ ಗಾಂಧಿ ತಮಗೆ ವೈಯಕ್ತಿಕವಾಗಿ ಸಾಕಷ್ಟು ತೊಂದರೆಗಳಿದ್ದರೂ ಪಕ್ಷದ ಪರವಾಗಿ ಹೋರಾಟ ಮಾಡುತ್ತಿದ್ದಾರೆ. ದೇಶದ ಹಿತಾಸಕ್ತಿಗೆ ಕೆಲಸ ಮಾಡಿದ್ದಾರೆ. ಗಾಂಧಿ- ನೆಹರು ಕುಟುಂಬ ಶತಮಾನಗಳ ಕಾಲ ಪಕ್ಷಕ್ಕಾಗಿ ಮಾಡಿದ ತ್ಯಾಗವನ್ನು ಕಾಂಗ್ರೆಸ್ ಮರೆಯಬಾರದು ಎಂದು ಖರ್ಗೆ ಟ್ವೀಟ್ ಮಾಡಿದ್ದಾರೆ.
The party should not forget the sacrifices & contributions made by Nehru-Gandhi family for over a century. They have stood like a rock for the idea of India & ensured we have built an equitable society & strong democracy.
2004 ಮತ್ತು 2009 ರಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಸೋನಿಯಾ ಗಾಂಧಿಯವರ ಶ್ರಮ ಮರೆಯಲಾಗದು. ಈಗ ಪಕ್ಷದ ಎಲ್ಲಾ ನಾಯಕರು ಸೋನಿಯಾ ಗಾಂಧಿ ಜೊತೆಗೆ ನಿಲ್ಲಬೇಕು. ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಮುಂದುವರೆಯಲು ಇಷ್ಟವಿಲ್ಲವೆಂದರೆ ರಾಹುಲ್ ಗಾಂಧಿ ಅವರೇ ತಕ್ಷಣ ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಬೇಕೆಂದು ಖರ್ಗೆ ಟ್ವೀಟ್ ಮೂಲಕ ಒತ್ತಾಯಿಸಿದ್ದಾರೆ.
During this time of crisis, all leaders & workers of @INCIndia should stand by Smt Gandhi & strengthen party. If for any reason, she herself is unwilling to continue,I believe that Sri @RahulGandhi should take over as President immediately & put all uncertainties to rest.
3/3
ಕರ್ನಾಟಕದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೂಡ ಈ ಬಗ್ಗೆ ಟ್ವೀಟ್ ಮಾಡಿ, ದೇಶದ ಹಿತದೃಷ್ಟಿಯಿಂದ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನವನ್ನು ವಹಿಸಬೇಕೆಂಬುದು ನಮ್ಮೆಲ್ಲರ ಆಶಯವಾಗಿದೆ. ರಾಹುಲ್ ಗಾಂಧಿ ಅವರ ನಾಯಕತ್ವದಿಂದ ಕಾಂಗ್ರೆಸ್ ಪಕ್ಷಕ್ಕೆ ಹೊಸಚೈತನ್ಯ, ಕಾರ್ಯಕರ್ತರಲ್ಲಿ ಹುರುಪು ಮತ್ತು ದೇಶದ ಜನತೆಯಲ್ಲಿ ಭರವಸೆ ಮೂಡಲಿದೆ. ಸೋನಿಯಾ ಗಾಂಧಿ ಮತ್ತು ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಪಕ್ಷವನ್ನು ಯಶಸ್ಸಿನ ಹಾದಿಯಲ್ಲಿ ಮುನ್ನಡೆಸುತ್ತಾರೆ ಎಂಬ ಸಂಪೂರ್ಣ ಭರವಸೆ ನನಗಿದೆ ಎಂದು ಹೇಳಿದ್ದರು.
Published by:Sushma Chakre
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ