ಬೆಂಗಳೂರು(ಆ.17): ರಾಜ್ಯದಲ್ಲಿ ನೂತನ ಶಿಕ್ಷಣ ನೀತಿ ಅನುಷ್ಠಾನದ ಬಗ್ಗೆ ತಿಂಗಳಾಂತ್ಯದೊಳಗೆ ಅಂತಿಮ ವರದಿ ಸಲ್ಲಿಸುವಂತೆ ಕಾರ್ಯಪಡೆಗೆ ಸೂಚನೆ ನೀಡಲಾಗಿದೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ತಿಳಿಸಿದರು. ಇಂದು ವಿಧಾನಸೌಧದಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಸಂಬಂಧ ಶಿಕ್ಷಣ ತಜ್ಞರ ಜೊತೆ ಚರ್ಚೆ ನಡೆಸಿದ ಬಳಿಕ ಮಾತನಾಡಿದ ವೇಳೆ ಸಚಿವರು ಹೀಗೆಂದರು.
ಹೊಸ ಶಿಕ್ಷಣ ನೀತಿಯನ್ನ ರಾಜ್ಯದಲ್ಲಿ ಅನುಷ್ಠಾನ ಮಾಡುವಲ್ಲಿ ಏನೆಲ್ಲ ಸವಾಲುಗಳಿವೆ ಅನ್ನೋದರ ಬಗ್ಗೆ ಚರ್ಚೆ ಮಾಡಿದ್ದೇವೆ. ಮಾರ್ಚ್ನಲ್ಲೇ ನೀತಿ ಜಾರಿ ಬಗ್ಗೆ ಟಾಸ್ಕ್ ಫೊರ್ಸ್ ರಚನೆ ಮಾಡಿದ್ದೇವೆ. ರಾಜ್ಯದಲ್ಲಿ ಹೊಸ ಶಿಕ್ಷಣ ನೀತಿ ಜಾರಿ ಬಗ್ಗೆ ಚರ್ಚೆ ನಡೆಸಿದ್ದೇವೆ. ಯಾವುದನ್ನು ತ್ವರಿತವಾಗಿ ಅನುಷ್ಠಾನಗೊಳಿಸಬೇಕು, ಯಾವುದನ್ನು ಆದ್ಯತೆ ಮೇರೆಗೆ ಅನುಷ್ಠಾನಗೊಳಿಸಬೇಕು ಎಂಬ ಬಗ್ಗೆ ಸಮಾಲೋಚನೆ ನಡೆಸಿದ್ದೇವೆ ಎಂದರು.
ಹೊಸ ಶಿಕ್ಷಣ ನೀತಿ ಸಂಬಂಧ ಟಾಸ್ಕ್ ಫೋರ್ಸ್ ಸಮಿತಿ ಇದೇ ತಿಂಗಳು 20ಕ್ಕೆ ವರದಿ ಸಲ್ಲಿಕೆ ಮಾಡಲಿದೆ. ಅಂತಿಮ ನೀಲನಕ್ಷೆಯನ್ನು ಆ. 29ಕ್ಕೆ ಸಲ್ಲಿಕೆ ಮಾಡಲು ಸೂಚಿಸಲಾಗಿದೆ. ಒಂದು ವರ್ಷದವರೆಗೆ ಹಂತ ಹಂತವಾಗಿ ಶಿಕ್ಷಣ ನೀತಿಯನ್ನು ಅನುಷ್ಠಾನ ಮಾಡಲಾಗುತ್ತದೆ ಎಂದು ಹೇಳಿದರು.
ಹೊಸ ಶಿಕ್ಷಣ ನೀತಿಯ ಅನುಷ್ಠಾನಕ್ಕೆ ಬೇಕಾಗುವ ಎಲ್ಲ ಸಿದ್ಧತೆಗಳನ್ನ ರಾಜ್ಯ ಸರ್ಕಾರ ಮಾಡಲಿದೆ. ಹೊಸ ಶಿಕ್ಷಣ ನೀತಿಯನ್ನು 2030ರಲ್ಲಿ ಸಾಧಿಸುವ ಗುರಿ ಹೊಂದಿದ್ದೇವೆ. ಇದಕ್ಕೆ ಬೇಕಾದ ರಾಜಕೀಯ ಇಚ್ಛಾಶಕ್ತಿ ಇದೆ. ಅದನ್ನು ಕಾರ್ಯರೂಪಕ್ಕೆ ತರಲು ಬದ್ಧರಾಗಿದ್ದೇವೆ ಎಂದು ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ ಮಾತೃ ಭಾಷೆ ಶಿಕ್ಷಣ ಸಂಬಂಧ ಗೊಂದಲ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಸಂಬಂಧ ಕೂಡ ಕಾನೂನು ತಿದ್ದುಪಡಿ ತರುತ್ತೇವೆ. ಮೊದಲಿಗೆ ನೀತಿಯನ್ನು ಒಪ್ಪಿಕೊಂಡಿದ್ದೇವೆ. ವರದಿಯ ಅನ್ವಯ ಎಲ್ಲಾ ತಿದ್ದುಪಡಿಗಳು ಆಗಬೇಕು. ಆದಾದ ಮೇಲೆ ಎಲ್ಲಾ ಗೊಂದಲಗಳಿಗೂ ತೆರೆ ಬೀಳಲಿದೆ. ಮಾತೃ ಭಾಷೆಗೆ ರಾಜ್ಯ ಸರ್ಕಾರ ಹೇಗೆ ಒತ್ತು ನೀಡಬೇಕೋ ಅದನ್ನು ನೀಡುತ್ತೇವೆ ಎಂದು ತಿಳಿಸಿದರು.
ಎಲ್ಲಾ ಜಿಲ್ಲೆಗಳಲ್ಲಿ ಸ್ವಾಯತ್ತ ವಿಶ್ವವಿದ್ಯಾನಿಲಯ ಸ್ಥಾಪನೆ, 6 ಸಂಶೋಧನಾ ಸಂಸ್ಥೆ, ಮೂರು ವರ್ಷಗಳಲ್ಲಿ 10 ಟೀಚಿಂಗ್ ಸಂಸ್ಥೆಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದರು.
ಇದನ್ನೂ ಓದಿ: ‘ಜನಪರ ಕಾಯ್ದೆಗಳ ತಿದ್ದುಪಡಿಗೆ ಮುಂದಾದ ಬಿಜೆಪಿ ಸರ್ಕಾರದ ವಿರುದ್ಧ ಜೆಡಿಎಸ್ ಹೋರಾಟ‘ - ಎಚ್.ಡಿ ದೇವೇಗೌಡ
ಸಭೆಯಲ್ಲಿ ಎಂಎಲ್ ಸಿ ಅರುಣ ಶಾಹಪೂರ, ಫ್ರೋ. ವೇಣುಗೋಪಾಲ, ರಾಷ್ಟ್ರೀಯ ಶಿಕ್ಷಣ ಸಮಿತಿ ಸದಸ್ಯ ಎಂ.ಕೆ ಶ್ರೀಧರ, ನಿವೃತ್ತ ಐಎಎಸ್ ಅಧಿಕಾರಿ ರಂಗನಾಥ ಸೇರಿ ಇತರರು ಭಾಗಿಯಾಗಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ