ಬೆಂಗಳೂರು: ಸಿದ್ದರಾಮಯ್ಯ(Siddaramaiah) ರಾಜ್ಯದ ನೂತನ ಮುಖ್ಯಮಂತ್ರಿಯಾಗಿ (Chief Minister) ಶನಿವಾರ ಪ್ರಮಾಣ ವಚನ (Oath) ಸ್ವೀಕರಿಸಿದ್ದಾರೆ. ಅವರ ಜೊತೆ ಡಿಕೆ ಶಿವಕುಮಾರ್ (DK Shivakumar) ಉಪಮುಖ್ಯಮಂತ್ರಿಯಾಗಿ ಹಾಗೂ ಇತರ 8 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕಂಠೀರವ ಸ್ಟೇಡಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಲ್ಲರೂ ಪ್ರಮಾಣ ವಚನ ಸ್ವೀಕರಿಸಿದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi), ಪ್ರಿಯಾಂಕ ಗಾಂಧಿ (Priyanka Gandhi) ಹಾಗೂ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದರು.
ಜಿ. ಪರಮೇಶ್ವರ್
ಪರಮೇಶ್ವರ್ ಅವರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದಾರೆ. ಅವರು ಈ ಬಾರಿ ಜೆಡಿಎಸ್ ನಾಯಕ ಪಿಆರ್ ಸುಧಾಕರ್ ಲಾಲ್ ವಿರುದ್ಧ ಕೊರಟಗೆರೆ ಕ್ಷೇತ್ರದಲ್ಲಿ14,347 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಇವರು ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ, ಗೃಹ ಸಚಿವರಾಗಿ ಮತ್ತು ಉಪ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿ ಅನುಭವವನ್ನು ಹೊಂದಿದ್ದಾರೆ.
ರಾಜೀವ್ ಗಾಂಧಿ ಅವರ ಆಹ್ವಾನದ ಮೇರೆಗೆ ರಾಜಕೀಯಕ್ಕೆ ಬಂದ ಪರಮೇಶ್ವರ್ 1989ರಲ್ಲಿ ಮೊದಲ ಬಾರಿ ಶಾಸಕರಾದರು. 1993ರಲ್ಲಿ ವೀರಪ್ಪ ಮೊಯ್ಲಿ ಸರ್ಕಾರದಲ್ಲಿ ಮೊದಲ ಬಾರಿಗೆ ಸಚಿವರಾಗಿ ಆಯ್ಕೆಯಾಗಿ, ರೇಷ್ಮೆ ಖಾತೆ ನಿರ್ವಹಿಸಿದ್ದರು. 1999ರಲ್ಲಿ ಎಸ್ಎಂ ಕೃಷ್ಣ ಸರ್ಕಾರದಲ್ಲಿ ಮಾಹಿತಿ ಮತ್ತು ಪ್ರಚಾರ ಖಾತೆ ಸಚಿವರಾಗಿದ್ದರು. 2013ರಲ್ಲಿ ಸಿದ್ದರಾಮಯ್ಯ ಸರ್ಕಾರದಲ್ಲಿ ಗೃಹ ಸಚಿವರಾಗಿದ್ದರು. 2018ರಲ್ಲಿ ಹೆಚ್ಡಿ ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯೊಂದಿಗೆ ಗೃಹ ಖಾತೆ, ಬೆಂಗಳೂರು ಅಭಿವೃದ್ಧಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯನ್ನು ಪರಮೇಶ್ವರ್ ನಿರ್ವಹಿಸಿದ್ದಾರೆ.
ಕೆಎಚ್ ಮುನಿಯಪ್ಪ
ಮಾಜಿ ಕೇಂದ್ರ ಸಚಿವ ಕೆಎಚ್ ಮುನಿಯಪ್ಪ ರಾಜ್ಯದ ಪ್ರಮುಖ ಕಾಂಗ್ರೆಸ್ ಹಾಗೂ ದಲಿತ ನಾಯಕರಾಗಿದ್ದಾರೆ. ಅವರ ಕೇಂದ್ರ ಸಚಿವರಾಗಿ ಜವಾಬ್ದಾರಿ ನಿರ್ವಹಿಸಿದ್ದಾರೆ. ಗಾಂಧಿ ಅನುಯಾಯಿ ಆಗಿರುವ ಮುನಿಯಪ್ಪ 1991ರಿಂದ 2019ರವರಗೆ ಕೋಲಾರ ಕ್ಷೇತ್ರದಿಂದ ಸತತ ಏಳು ಬಾರಿ ಆಯ್ಕೆಯಾಗಿ ಲೋಕಸಭೆಗೆ ಆಯ್ಕೆಯಾಗಿದ್ದರು. ಜೊತೆಗೆ ಕೇಂದ್ರದ ಅತಿ ಸಣ್ಣ, ಸಣ್ಣ ಹಾಗೂ ಮಧ್ಯಮ ಕೈಗಾರಿಕೆ ರಾಜ್ಯ ದರ್ಜೆ ಸಚಿವರಾಗಿಯೂ ಕೆಲಸ ಮಾಡಿರುವ ಅವರು ಈ ಬಾರಿ ರಾಜ್ಯದಲ್ಲಿ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಕೆಜಿ ಜಾರ್ಜ್
ಕೆಜಿ ಜಾರ್ಜ್ ಅವರು ಇಂದಿರಾ ಗಾಂಧಿ ಅವರ ಆಡಳಿತದ ಸಮಯದಲ್ಲಿ ಯುವ ಕಾಂಗ್ರೆಸ್ ನಾಯಕನಾಗಿದ್ದರು. ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದಲ್ಲಿ 1985ರಿಂದ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅವರು ವೀರೇಂದ್ರ ಪಾಟೀಲ್, ಎಸ್. ಬಂಗಾರಪ್ಪ ಸಂಪುಟದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಸಾರಿಗೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ವಸತಿ ಮತ್ತು ನಗರಾಭಿವೃದ್ಧಿ ಸಚಿವರಾಗಿ ಕೆಲಸ ಮಾಡಿದ್ದಾರೆ. ಸಿದ್ದರಾಮಯ್ಯ ಬೆಂಬಲಿಗರಾಗಿರುವ ಜಾರ್ಜ್ ಅವರು 2013ರ ಕಾಂಗ್ರೆಸ್ ಸರ್ಕಾರದಲ್ಲಿ ಗೃಹ ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದರು. 2018ರಲ್ಲಿ ಹೆಚ್ಡಿ ಕುಮಾರಸ್ವಾಮಿ ಸಂಪುಟದಲ್ಲಿ ಬೃಹತ್ ಮತ್ತು ಮಧ್ಯಮ ಗಾತ್ರದ ಕೈಗಾರಿಕಾ ಖಾತೆಯ ಸಚಿವರಾಗಿ ಕೆಲಸ ಮಾಡಿದ ಅನುಭವವಿದೆ.
ಎಂಬಿ ಪಾಟೀಲ್
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಲ್ಲಿ ಒಬ್ಬರಾದ ಎಂಬಿ ಪಾಟೀಲ್ ಆರು ಬಾರಿ ಶಾಸಕರಾಗಿ ಮತ್ತು ಒಮ್ಮೆ ಸಂಸದರಾಗಿ ಆಯ್ಕೆಯಾಗಿದ್ದಾರೆ. ರಾಜ್ಯದ ಲಿಂಗಾಯತ ನಾಯಕರಲ್ಲಿ ಒಬ್ಬರಾಗಿರುವ ಅವರು 1991ರಲ್ಲಿ ತಿಕೋಟಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಗೆಲ್ಲುವ ಮೂಲಕ ತಮ್ಮ ರಾಜಕೀಯ ಜೀವನ ಆರಂಭಿಸಿದ್ದರು. 2013ರಲ್ಲಿ ಸಿದ್ದರಾಮಯ್ಯ ಸರ್ಕಾರದಲ್ಲಿ 5 ವರ್ಷಗಳ ಕಾಲ ಜಲ ಸಂಪನ್ಮೂಲ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. 2018ರಲ್ಲಿ ಹೆಚ್ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಗೃಹ ಸಚಿವರಾಗಿ ಸೇವೆ ಸಲ್ಲಿಸಿದ ಅನುಭವ ಪಾಟೀಲ್ ಅವರಿಗಿದೆ.
ಇದನ್ನೂ ಓದಿ: Rahul Gandhi: ನಮ್ಮ ಜೊತೆಯಲ್ಲಿದ್ದಿದ್ದು ಸತ್ಯ ಮತ್ತು ಬಡವರು ಮಾತ್ರ: ಕನ್ನಡಿಗರಿಗೆ 'ರಾಗಾ' ಧನ್ಯವಾದ
ರಾಮಲಿಂಗಾರೆಡ್ಡಿ
ಕಾಂಗ್ರೆಸ್ನ ಪ್ರಭಾವಿ ನಾಯಕರಲ್ಲಿ ಒಬ್ಬರಾದ ರಾಮಲಿಂಗಾರೆಡ್ಡಿ ಎಂಟು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅವರು ವೀಪಪ್ಪ ಮೊಯ್ಲಿ ಸರ್ಕಾರದಲ್ಲಿ ಮೊದಲ ಬಾರಿಗೆ ಸಚಿವರಾಗಿದ್ದರು. ನಂತರ 2004ರಲ್ಲಿ ಧರಮ್ ಸಿಂಗ್ ಸರ್ಕಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ, 2013ರಲ್ಲಿ ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಿದ್ದರು. 1989ರಿಂದ 2004ರಿಂದ ಜಯನಗರ ಕ್ಷೇತ್ರದಿಂದ ನಂತರ 2008ರಿಂದ ಬಿಟಿಎಂ ಲೇಔಟ್ನಿಂದ ಸ್ಪರ್ಧಿಸಿ 8 ಬಾರಿ ಶಾಸಕರಾಗಿದ್ದಾರೆ.
ಜಮೀರ್ ಅಹ್ಮದ್
ಜೆಡಿಎಸ್ ಮೂಲಕ ರಾಜಕೀಯ ಆರಂಭಿಸಿದ ಜಮೀರ್ ಅಹ್ಮದ್ ಖಾನ್ ನಾಲ್ಕನೇ ಬಾರಿ ವಿಧಾನಸಭೆಗೆ ಪ್ರವೇಶ ಪಡೆದಿದ್ದಾರೆ. 2008 ಮತ್ತು 2013ರಲ್ಲಿ ಜೆಡಿಎಸ್ ಪಕ್ಷದಿಂದ ಶಾಸಕರಾಗಿದ್ದರು. 2018ರಲ್ಲಿ ಕಾಂಗ್ರೆಸ್ ಸೇರಿರುವ ಅವರು ಸಿದ್ದರಾಮಯ್ಯ ಬೆಂಬಲಿಗರಾಗಿದ್ದು, 2023ರ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಆಯ್ಕೆಯಾಗಿದ್ದಾರೆ. 2005ರಲ್ಲಿ ಹೆಚ್ಡಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ - ಬಿಜೆಪಿ ಸರ್ಕಾರದಲ್ಲಿ ಹಜ್ ಮತ್ತು ವಕ್ಫ್ ಖಾತೆ ಸಚಿವರಾಗಿದ್ದರು.
ಪ್ರಿಯಾಂಕ್ ಖರ್ಗೆ
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮಗನಾಗಿರುವ ಪ್ರಿಯಾಂಕ್ ಖರ್ಗೆ ಚಿತ್ತಾಪುರ ಕ್ಷೇತ್ರದಿಂದ ಸತತ ಮೂರನೇ ಬಾರಿ ವಿಧಾನಸಭೆ ಪ್ರವೇಶಿಸಿದ್ದಾರೆ. 2013ರಲ್ಲಿ ಸಿದ್ದರಾಮಯ್ಯ ಸರ್ಕಾರದಲ್ಲಿ ಐಟಿ, ಬಿಟಿ ಮತ್ತು ಪ್ರವಾಸೋದ್ಯಮ ಸಚಿವರಾಗಿದ್ದರು. ನಂತರ 2018ರಲ್ಲಿ ಹೆಚ್ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ