ಬೆಂಗಳೂರು(ಜು.02): ತೀವ್ರ ಕೋವಿಡ್-19 ಸಂಕಷ್ಟದ ನಡುವೆಯೇ ಇಂದು ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪದಗ್ರಹಣದ ಪ್ರತಿಜ್ಞಾ ಕಾರ್ಯಕ್ರಮ ನಡೆಯುತ್ತಿದೆ. ಬೆಳಿಗ್ಗೆ 10.30 ಗಂಟೆಗೆ ಕೆಪಿಸಿಸಿ ಹೊಸ ಕಚೇರಿಯಲ್ಲಿ ನಡೆಯಲಿರುವ ಈ ಸಮಾರಂಭ ರಾಜ್ಯದ 7,800 ಗ್ರಾಮ ಪಂಚಾಯ್ತಿಗಳಲ್ಲಿ ನೇರಪ್ರಸಾರವಾಗಲಿದೆ.
ಇನ್ನು, ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ ಅವರನ್ನು ಕಾಂಗ್ರೆಸ್ ಹೈಕಮಾಂಡ್ ನೇಮಕ ಮಾಡಿ 4 ತಿಂಗಳು ಕಳೆದಿವೆ. ಆದರೆ, ಲಾಕ್ಡೌನ್ ಘೋಷಣೆಯಾದ ಬಳಿಕ ಡಿಕೆಶಿ ಅಧಿಕಾರ ಸ್ವೀಕಾರ ಸಮಾರಂಭ ನಡೆಸಲು ಪೊಲೀಸರಿಂದ ಅನುಮತಿ ಸಿಕ್ಕಿರಲಿಲ್ಲ. ಸದ್ಯ ಕೊನೆಗೂ ಡಿ.ಕೆ. ಶಿವಕುಮಾರ್ ಪದಗ್ರಹಣಕ್ಕೆ ಸಮಯ ಕೂಡಿಬಂದಿದ್ದು, ಇಂದು ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಇವರೊಂದಿಗೆ ಕಾರ್ಯಾಧ್ಯಕ್ಷರಾಗಿ ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ಸಲೀಂ ಅಹಮದ್ ಕೂಡ ಪ್ರಮಾಣ ವಚನ ತೆಗೆದುಕೊಳ್ಳಲಿದ್ದಾರೆ.
ಡಿಕೆಶಿ ಪದಗ್ರಹಣ ಕಾರ್ಯಕ್ರಮದಲ್ಲಿ 150 ಜನರಿಗೆ ಮಾತ್ರ ಪಾಲ್ಗೊಳ್ಳಲಿದ್ದಾರೆ. ಈ ಸಮಾರಂಭದಲ್ಲಿ ಕೇವಲ ಹಿರಿಯ ಮುಖಂಡರಿಗಷ್ಟೇ ಅವಕಾಶ ಕಲ್ಪಿಸಲಾಗಿದೆ. ಹಾಗಾಗಿ ಕಾರ್ಯಕರ್ತರು, ಬೆಂಬಲಿಗರಿಗೆ ಪ್ರವೇಶವಿಲ್ಲ. ಈಗಾಗಲೇ ಡಿಕೆಶಿ ಕೂಡ ಹೆಚ್ಚು ಜನರು ಬರದಂತೆ ಮನವಿ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: Coronavirus Bangalore Updates: ಕೊರೋನಾ ಅಟ್ಟಹಾಸ; ಬೆಂಗಳೂರಿನಲ್ಲಿ ಮತ್ತೊಂದು ಪೊಲೀಸ್ ಸ್ಟೇಷನ್ ಸೀಲ್ಡೌನ್!
ಕರ್ನಾಟಕದ ಹೊರಗಿನಿಂದ 7 ಗಣ್ಯರು ಪಾಲ್ಗೊಳ್ಳಲಿದ್ದಾರೆ. ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಕೇರಳದ ಪ್ರತಿಪಕ್ಷ ನಾಯಕ ರಮೇಶ್ ಚೆನ್ನಿತಾಲ್, ಕೇರಳ ಪಿಸಿಸಿ ಅಧ್ಯಕ್ಷ ಮುಲ್ಲಪಳ್ಳಿ ರಾಮಚಂದ್ರನ್, ಸೀಮಾಂಧ್ರದ ಸಾಕೆ ಶೈಲಜನಾಥ್, ಉತ್ತಮ್ ಕುಮಾರ್ ರೆಡ್ಡಿ ನಾಳೆಯ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ