ಬೆಂಗಳೂರು, ಮೇ 12: ದಾವೋಸ್ ಪ್ರವಾಸ ಮುಗಿಸಿ ಬಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಗಂಭೀರ ಪ್ರಶ್ನೆ ಮಾಡಿದ್ದಾರೆ. ನಾಯಕತ್ವ ಬದಲಾವಣೆ, ಸಚಿವ ಸಂಪುಟ ಪುನರ್ರಚನೆ ಗೊಂದಲದ ಹಿನ್ನೆಲೆಯಲ್ಲಿ ಅನಿಶ್ಚಿತತೆಯೇ ಸಿಎಂ ಬೊಮಮ್ಮಾಯಿ ಅವರು ದಾವೋಸ್ ಪ್ರವಾಸ (Davos Tour) ಮುಗಿಸಿ ಬಂದಿದ್ದಾರೆ. ಆದರೆ ಇಂದು ರಾಜ್ಯಕ್ಕೆ ಬಂದಿರುವ ಸಿಎಂ ಬೊಮ್ಮಾಯಿ ಅವರನ್ನು ಆರೋಪಗಳ ಸರಮಾಲೆಯಂತಿರುವ ಪತ್ರದ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸ್ವಾಗತಿಸಿದ್ದಾರೆ.
ಸಿದ್ದರಾಮಯ್ಯ ಪತ್ರದಲ್ಲಿ ಏನಿದೆ?
ಪಿಎಸ್ವೈ ಅಕ್ರಮ ನೇಮಕಾತಿ ಹಗರಣದ ಮತ್ತೊಂದು ಮಗ್ಗಲನ್ನು ಸಿದ್ದರಾಮಯ್ಯ ಪತ್ರದಲ್ಲಿ ವಿವರಿಸಿದ್ದಾರೆ. ಪಿಎಸ್ಐ ಅಕ್ರಮ ನೇಮಕಾತಿ ಹಗರಣದಲ್ಲಿ 5 ಮಂದಿ ಸಚಿವರ ನೇರ ಕೈವಾಡ ಇದೆ. ನೂರಾರು ಕೋಟಿ ರೂಪಾಯಿ ಹಣ ಈ 5 ಮಂದಿ ಸಚಿವರ ಕಿಸೆ ಸೇರಿದೆ. ಮಾಜಿ ಮುಖ್ಯಮಂತ್ರಿಗಳೊಬ್ಬರ ಪುತ್ರ ಹಗರಣದಲ್ಲಿ ನೇರ ಭಾಗಿ ಆಗಿದ್ದು ಒಟ್ಟು 514 ಪಿಎಸ್ಐ ಹುದ್ದೆಗಳಲ್ಲಿ ಇವರ ಸೂಚನೆ ಮೇರೆಗೇ 63 ಕ್ಕೂ ಹೆಚ್ಚು ಅಭ್ಯರ್ಥಿಗಳ ನೇಮಕಾತಿ ನಡೆದಿದೆ ಎನ್ನುವ ನೇರ ಆರೋಪವನ್ನು ಮಾಡಿದ್ದಾರೆ.
ಆದರೆ ಸಿಐಡಿ ಮಾತ್ರ ಇದ್ಯಾವುದನ್ನೂ ಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಈ ಕುರಿತು ಸಿಐಡಿಯು ಇದುವರೆಗೆ ಅವರುಗಳಿಗೆ ನೋಟೀಸ್ ನೀಡಿ ವಿಚಾರಣೆ ನಡೆಸಿಲ್ಲ. ವಿಧಾನಸೌಧವೂ ಸೇರಿದಂತೆ ಮುಂತಾದ ಕಡೆ ಕೂತಿರುವ ಹಗರಣದ ರೂವಾರಿಗಳನ್ನು ಮುಟ್ಟುವ ಕೆಲಸ ಮಾಡಿಲ್ಲ. ಏನಿದರ ಅರ್ಥ? ಯಾರನ್ನು ರಕ್ಷಿಸಲು ಈ ತನಿಖೆ ನಡೆಯುತ್ತಿದೆ ಎಂಬ ಗಂಭೀರ ಪ್ರಶ್ನೆಯನ್ನು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮುಂದಿಟ್ಟಿದ್ದಾರೆ.
ಪಿಎಸ್ಐ ನೇಮಕ ಹಗರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಲೇಬೇಕಾದ ಅನಿವಾರ್ಯತೆ ಇದೆ.
ಹೀಗಾಗಿ ಹಾಲಿ ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಸಿ, ಯಾವ ಮಂತ್ರಿಗಳ ಮೇಲೆ ಆರೋಪವಿದೆಯೋ ಕೂಡಲೆ ಅವರನ್ನು ಮಂತ್ರಿ ಮಂಡಲದಿಂದ ವಜಾ ಮಾಡಿ, ತನಿಖೆ ನಿಷ್ಪಕ್ಷಪಾತವಾಗಿ ನಡೆಯುವಂತೆ ನೋಡಿಕೊಳ್ಳಬೇಕೆಂದು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಇದನ್ನೂ ಓದಿ: PM Narendra Modi: ಶಾಸಕ ಜಿ.ಟಿ.ದೇವೇಗೌಡ ಮೊಮ್ಮಗಳು ನಿಧನ ಹಿನ್ನೆಲೆ: ಪತ್ರ ಬರೆದು ಕುಟುಂಬಸ್ಥರಿಗೆ ಪ್ರಧಾನಿ ಮೋದಿ ಸಾಂತ್ವನ
ಹಗರಣದ ತನಿಖೆಯನ್ನು ಸಿಐಡಿಗೆ ವಹಿಸುವುದನ್ನು ಹಿಂದೆಯೇ ವಿರೋಧಿಸಿದ್ದೇವೆ. ಸರ್ಕಾರದಲ್ಲಿರುವ ಪ್ರಬಲ ವ್ಯಕ್ತಿಗಳು ಭಾಗಿಯಾಗಿದ್ದಾರೆ. ಅವರನ್ನು ಧೈರ್ಯವಾಗಿ ವಿಚಾರಣೆ ನಡೆಸಿ ಬಂಧಿಸುವ ತಾಕತ್ತು ಸಿಐಡಿಗೆ ಇಲ್ಲ, ಹೀಗಾಗಿ ಇದನ್ನು ಹೈಕೋರ್ಟ್ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು. ಆದರೆ ಸರ್ಕಾರಕ್ಕೆ ಒಳಗೊಳಗೆ ಭಯವಿದ್ದ ಕಾರಣಕ್ಕೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಲಿಲ್ಲ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಒಬ್ಬನೆ ಒಬ್ಬ ಪ್ರಭಾವಿಯ ಬಂಧನವಾಗಿಲ್ಲ!
ಪ್ರಬಲ ತಿಮಿಂಗಿಲಗಳನ್ನು ಹಿಡಿದು ತನಿಖೆ ನಡೆಸುವ ಶಕ್ತಿ ಸಿಐಡಿಗೆ ಇಲ್ಲ ಎಂದು ನಾವು ಹೇಳಿದ್ದ ಮಾತಿನಂತೆಯೇ ಸಿಐಡಿ ನಡೆದುಕೊಳ್ಳುತ್ತಿದೆ. ಇಷ್ಟು ದಿನವಾದರೂ ಸಹ ಒಬ್ಬನೆ ಒಬ್ಬ ಪ್ರಭಾವಿಯನ್ನು ಅಥವಾ ವಿಧಾನಸೌಧದಲ್ಲಿ ಕೂತವರನ್ನು ತನಿಖೆಗೆ ಒಳಪಡಿಸಿಲ್ಲ. ಜನರ ಕಣ್ಣ ಮುಂದೆಯೆ ಹಲವಾರು ಸಾಕ್ಷಿಗಳಿದ್ದರೂ ಸರ್ಕಾರ ಅದನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸುತ್ತಿಲ್ಲ. ಇಡೀ ಹಗರಣವನ್ನು ನಿಧಾನಕ್ಕೆ ಕತ್ತು ಹಿಸುಕಿ ಮೂಲೆಗೆ ಎಸೆಯುವ ಹುನ್ನಾರ ಕಾಣಿಸುತ್ತಿದೆ ಎಂದ್ದಾರೆ.
ಸಿಐಡಿ ತನಿಖೆಯಿಂದ ಸಾಧಿಸಿದ್ದಾದರೂ ಏನು ?
ಸ್ವತಃ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪಿಎಸ್ಐ ನೇಮಕಾತಿಯಲ್ಲಿ ಯಾವುದೇ ಹಗರಣ ಕೂಡ ನಡೆದಿಲ್ಲ ಎಂದು ವಿಧಾನಸಭಾ ಅಧಿವೇಶನದಲ್ಲೇ ಸುಳ್ಳು ಹೇಳಿದರು. ತನಿಖೆಯನ್ನು ಸಿಐಡಿಗೆ ವಹಿಸುವುದು ನಿಮಗೂ ಅನಿವಾರ್ಯ ಆಗುವಷ್ಟು ಸಾಕ್ಷ್ಯಗಳು ಬಹಿರಂಗಗೊಂಡವು. ಹಾಗಾಗಿ ತನಿಖೆಗೆ ವಹಿಸಿದಿರಿ. ಆದರೆ ಇದುವರೆಗೆ ಸಿಐಡಿ ತನಿಖೆಯಿಂದ ಸಾಧಿಸಿದ್ದಾದರೂ ಏನು? ಎಂದು ಸಿದ್ದರಾಮಯ್ಯ ಅವರು ಮುಖ್ಪ್ರಯಮಂತ್ರಿಗಳನ್ನು ಪ್ರಶ್ನಿಸಿದ್ದಾರೆ.
ಎಲ್ಲಿದೆ ಲಂಚದ ಹಣ?
ಒಬ್ಬೊಬ್ಬ ಪಿಎಸ್ಐ ನೇಮಕಕ್ಕೆ 30 ಲಕ್ಷ ರೂ.ಗಳಿಂದ 1.5 ಕೋಟಿ ರೂಪಾಯಿವರೆಗೂ ಹಣ ಪಡೆಯಲಾಗಿದೆ ಎಂಬುದು ಸಿಐಡಿ ತನಿಖೆಯಿಂದ ಹೊರಗೆ ಬಂದಿದೆ. ನೇಮಕಾತಿಗಾಗಿ ಹಣ ಕೊಟ್ಟ, ಹಣಕ್ಕಾಗಿ ಮಧ್ಯವರ್ತಿಗಳಾಗಿ ಕೆಲಸ ಮಾಡಿದ್ದ ಸಣ್ಣ ಪುಟ್ಟ ಕೆಲವರನ್ನು ಬಂಧಿಸಿದಿರಿ.
ಇದನ್ನೂ ಓದಿ; Belagavi: ಮತ್ತೆ ಎಂಇಎಸ್ ಪುಂಡಾಟ; ಕನ್ನಡ ಹಾಡು ಹಾಕಿದ್ದಕ್ಕೆ ಬೈಕ್ಗೆ ಬೆಂಕಿ ಹಚ್ಚಿ ಹಲ್ಲೆ
ಆದರೆ ನೂರಾರು ಕೋಟಿ ಹಣ ಯಾರ ಕೈ ಸೇರಿತು ಎನ್ನುವುದನ್ನು ಬಹಿರಂಗಗೊಳಿಸಲೇ ಇಲ್ಲ. ಹಣ ಪಡೆದ ದೊಡ್ಡ ತಲೆಗಳನ್ನು ಈ ಕ್ಷಣಕ್ಕೂ ಬಂಧಿಸಿಲ್ಲ. ನೆಪಕ್ಕೂ ಅವರನ್ನು ತನಿಖೆಗೆ ಒಳಪಡಿಸಿಲ್ಲ. ಒಂದು ನೋಟಿಸ್ ಕೂಡ ನೀಡಿಲ್ಲ. ಪಡೆದಿದ್ದ ಲಂಚದ ಹಣದಲ್ಲಿ ಶೇ 10 ರಷ್ಟನ್ನೂ ಇನ್ನೂ ವಶಪಡಿಸಿಕೊಂಡಿಲ್ಲ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ಪತ್ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಏನು ಉತ್ತರಿಸುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.
ವರದಿ: ಅನಿಲ್ ಬಾಸೂರ್
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ