ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಒತ್ತಾಸೆಯಂತೆ ನಿರ್ಮಾಣ ಮಾಡಿರುವ ನೂತನ ಸಂಸತ್ ಭವನ (New Parliament Building) ಮೇ 28ರಂದು ಉದ್ಘಾಟನೆ ಆಗಲಿದೆ. ಆದರೆ ಉದ್ಘಾಟನಾ ಸಮಾರಂಭಕ್ಕೆ ವಿರೋಧ ಪಕ್ಷಗಳು ಹಾಜರಾಗುವುದಿಲ್ಲ ಎಂದು ಹೇಳಿಕೆ ನೀಡಿವೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ (HD Devegowda) ಅವರು, ಸಂಸತ್ ಭವನ ಉದ್ಘಾಟನೆಗೆ ಹೋಗುತ್ತೇನೆ. ಹೋಗದೆ ಇರುವುದಕ್ಕೆ ಅದೇನು ಬಿಜೆಪಿ (BJP), ಆರ್ಎಸ್ಎಸ್ (RSS) ಕಚೇರಿಯೇ? ಸಂಸತ್ ಭವನದ ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮಕ್ಕೆ ನಾನು ಹಾಜರಾಗುತ್ತಿದ್ದೇನೆ. ಅದು ದೇಶದ ಆಸ್ತಿ. ಯಾರೋ ಒಬ್ಬರ ವೈಯಕ್ತಿಕ ವಿಷಯಕ್ಕೆ ಸಂಬಂಧಿಸಿದ್ದು ಅದಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕಾರ್ಯಕ್ರಮದಲ್ಲಿ ದೇಶದ ಪ್ರಜೆಯಾಗಿ ಭಾಗಿಯಾಗುತ್ತಿದ್ದೇನೆ
ಅರಮನೆ ಮೈದಾನದಲ್ಲಿ ನಡೆದ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದ ಎಚ್ಡಿಡಿ ಅವರು, ಅದು ಯಾರ ವೈಯಕ್ತಿಕ ಕಾರ್ಯಕ್ರಮ ಅಲ್ಲ, ದೇಶದ ಕಾರ್ಯಕ್ರಮ. ಆ ಭವ್ಯ ಕಟ್ಟಡ ದೇಶದ ಜನರ ತೆರಿಗೆ ಹಣದಿಂದ ನಿರ್ಮಾಣವಾಗಿದೆ. ಅದು ದೇಶಕ್ಕೆ ಸೇರಿದ್ದು, ಅದು ಬಿಜೆಪಿ ಅಥವಾ ಆರ್ಎಸ್ಎಸ್ ಕಚೇರಿ ಅಲ್ಲ.
ಸಂಸತ್ ಭವನದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಓರ್ವ ಮಾಜಿ ಪ್ರಧಾನಮಂತ್ರಿಯಾಗಿ, ದೇಶದ ಪ್ರಜೆಯಾಗಿ ಭಾಗಿಯಾಗುತ್ತಿದ್ದೇನೆ. ಬಿಜೆಪಿಯನ್ನು ರಾಜಕೀಯವಾಗಿ ವಿರೋಧ ಮಾಡಲಿಕ್ಕೆ ನನ್ನಲ್ಲಿ ಅನೇಕ ಕಾರಣಗಳಿವೆ. ಆದರೆ, ಸಂಸತ್ ಭವನ ಉದ್ಘಾಟನೆ ವಿಷಯದಲ್ಲಿ ರಾಜಕೀಯ ತರುವುದು ನನಗೆ ಇಷ್ಟವಿಲ್ಲ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: Bengaluru: ಟೆಕ್ಕಿ ಮೇಲೆ ರೌಡಿಸಂ ತೋರಿಸಿದ ಆಟೋ ಚಾಲಕ, ಅತ್ತ ಅಪಘಾತದಲ್ಲಿ ಪವಾಡ ಸದೃಶ್ಯವಾಗಿ ಪಾರಾದ ಬಾಲಕ!
ಓರ್ವ ಮಾಜಿ ಪ್ರಧಾನಿಯಾಗಿ ನೀವು ಹೋಗುತ್ತೀರಾ?
ನಾನು ಸಂಸತ್ತಿನ ಎರಡು ಸದನಗಳಿಗೆ ಆಯ್ಕೆಯಾಗಿದ್ದೇನೆ. ಅಲ್ಲಿ ಸಾಂವಿಧಾನಿಕ ಚೌಕಟ್ಟಿನಲ್ಲಿ ಕರ್ತವ್ಯ ನಿರ್ವಹಿಸಿದ್ದೇನೆ, ಈಗಲೂ ಸದಸ್ಯನಾಗಿದ್ದೇನೆ. ಸಂವಿಧಾನದ ಮೌಲ್ಯಗಳನ್ನು ಕಾಪಾಡುವ ಕೆಲಸ ಮಾಡಿದ್ದೇನೆ. ಹೀಗಾಗಿ ಸಂವಿಧಾನದ ವಿಷಯದಲ್ಲಿ ನಾನು ರಾಜಕೀಯ ತರಲಾರೆ. ಅನೇಕ ಪಕ್ಷಗಳು ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮವನ್ನು ಬಹಿಷ್ಕರಿಸಿವೆ. ಓರ್ವ ಮಾಜಿ ಪ್ರಧಾನಿಯಾಗಿ ನೀವು ಹೋಗುತ್ತೀರಾ? ಇಲ್ಲವಾ? ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ. ಹೌದು, ನಾನು ಸಂವಿಧಾನಕ್ಕೆ ಬದ್ಧನಾಗಿದ್ದೇನೆ. ಅದಕ್ಕಾಗಿ ಸಂಸತ್ ಭವನ ಉದ್ಘಾಟನೆಗೆ ಹೋಗುತ್ತೇನೆ ಎಂದು ಅವರಿಗೆ ಹೇಳಲು ಬಯಸುತ್ತೇನೆ ಎಂದಿದ್ದಾರೆ.
ಪಕ್ಷವನ್ನು ಉಳಿಸುತ್ತೇನೆ, ಪಕ್ಷಕ್ಕಾಗಿ ನನ್ನ ಜೀವ ಸವೆಸಿದ್ದೇನೆ. ನಾನು ಬದುಕಿರುವಷ್ಟು ಕಾಲವೂ ಪಕ್ಷಕ್ಕಾಗಿಯೇ ಬದುಕುತ್ತೇನೆ. ನನ್ನ ಕೊನೆ ಉಸಿರು ಇರುವ ತನಕ ನಾನು ಪಕ್ಷಕ್ಕೇ ಮೀಸಲಿಡುತ್ತೇನೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಸೋತಿದೆ ಎಂಬುದಕ್ಕೆ ನನಗೆ ಬಹಳ ನೋವಿದೆ. ಅದೇ ನೋವಿನಿಂದ ಕಾಲ ದೂಡಲು ಸಾಧ್ಯವೇ? ಪುಟಿದೆದ್ದು ಪಕ್ಷ ಕಟ್ಟಬೇಕು, ಅಧಿಕಾರಕ್ಕೆ ಬರಲು ಶ್ರಮಿಸಬೇಕು.
ಮುಖ್ಯಮಂತ್ರಿ ಆದೆ, ಆಮೇಲೆ ಪ್ರಧಾನಿಯೂ ಆದೆ
ಸೋತಿದ್ದಕ್ಕೆ ಪ್ರಾಮಾಣಿಕವಾಗಿ ಕಾರಣಗಳನ್ನು ಹುಡುಕೋಣಾ, ಅವುಗಳಿಗೆ ಪರಿಹಾರಗಳನ್ನು ಕಂಡು ಹಿಡಿಯೋಣಾ. 1989ರಲ್ಲಿ ನಮ್ಮ ಪಕ್ಷ ಕೇವಲ ಎರಡು ಕ್ಷೇತ್ರಗಳಲ್ಲಿ ಮಾತ್ರ ಗೆದ್ದಿತ್ತು. ಅದಾದ ಮೇಲೆ ಐದು ವರ್ಷಗಳ ನಂತರ ನಮ್ಮ ಪಕ್ಷ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂತು. ನಾನೇ ಮುಖ್ಯಮಂತ್ರಿ ಆದೆ, ಆಮೇಲೆ ಪ್ರಧಾನಿಯೂ ಆದೆ. ಇದು ಜನರ ಆಶೀರ್ವಾದದಿಂದ ಅದು ಸಾಧ್ಯವಾಯಿತು. ಈ ಪಕ್ಷವನ್ನು ಉಳಿಸುವ ಕೆಲಸ ನಾನು ಮಾಡಿಯೇ ಮಾಡುತ್ತೇನೆ ಎಂದು ಸಭೆಯಲ್ಲಿ ಎಚ್ಡಿಡಿ ಶಪಥ ಮಾಡಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ