ಬೆಂಗಳೂರು (ಆಗಸ್ಟ್ 24): ಗೌರವ ಧನವನ್ನು ಹೆಚ್ಚಿಸಬೇಕು ಹಾಗೂ ನಮ್ಮನ್ನೂ ಖಾಯಂ ಸರ್ಕಾರಿ ಉದ್ಯೋಗಿಗಳ ಸ್ಥಾನಮಾನ ನೀಡಬೇಕು ಎಂಬುದೂ ಸೇರಿ ಹತ್ತಾರು ಬೇಡಿಕೆಗಳನ್ನು ಮುಂದಿಟ್ಟು ಅಂಗನವಾಡಿ ಕಾರ್ಯಕರ್ತೆ ಕಳೆದ ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿದ್ದಾರೆ. ಈ ಹಿಂದೆ ಸಾವಿರಾರು ಮಹಿಳೆಯರು ಬೆಂಗಳೂರಿಗೆ ಆಗಮಿಸಿ ಸರ್ಕಾರದ ವಿರುದ್ಧ ಪ್ರತಿಭಟನೆಯನ್ನೂ ನಡೆಸಿದ್ದರು. ಆದರೆ, ಸರ್ಕಾರ ಮಾತ್ರ ಈ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ. ಪರಿಣಾಮ ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆ ಮತ್ತು ಬೇಡಿಕೆಗಳು ಈಗಲೂ ಹಾಗೆಯೇ ಉಳಿದಿದೆ. ಆದರೆ, ಇಂದು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಹಾಲಪ್ಪ ಆಚಾರ್ (halappa achar), "ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳಿಗೆ ಸರ್ಕಾರ ಸೂಕ್ತವಾಗಿ ಸ್ಪಂದಿಸಲಿದೆ" ಎಂದು ಭರವಸೆ ನೀಡಿದ್ದಾರೆ.
ಇಂದು ಖನಿಜ ಭವನದಲ್ಲಿ ಅಂಗನವಾಡಿ ಕಾರ್ಯಕರ್ತೆ ಯರ ಪ್ರತಿನಿಧಿಗಳು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಯರಿಗೆ ಈ ಭರವಸೆಯನ್ನು ನೀಡಲಾಯಿತು. ಈ ಸಭೆಯಲ್ಲಿ ಮಾತನಾಡಿರುವ ಸಚಿವ ಹಾಲಪ್ಪ ಆಚಾರ್, "ರಾಜ್ಯದ ಅಂಗನವಾಡಿ ಕಾರ್ಯಕರ್ತೆ ಯರು ಬಹಳಷ್ಟು ಒಳ್ಳೆಯ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಹಲವಾರು ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಹಲವಾರು ಬಾರಿ ಪ್ರತಿಭಟನೆ ಹಾಗೂ ಹೋರಾಟ ನಡೆಸಿದ್ದಾರೆ.
ಆದರೂ ಕೂಡಾ ಕೆಲವೊಂದು ತಾಂತ್ರಿಕ ಹಾಗೂ ಆಡಳಿತಾತ್ಮಕ ವಿಷಯಗಳಿಂದಾಗಿ ಕೆಲವು ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಾಗಿಲ್ಲ. ಈ ಎಲ್ಲಾ ಬೇಡಿಕೆಗಳ ಬಗ್ಗೆ ಇಂದು ಅಧಿಕಾರಿಗಳ ಸಮ್ಮುಖದಲ್ಲಿ ವಿಸ್ತೃತ ಚರ್ಚೆ ನಡೆಸಲಾಗಿದೆ. ಅಲ್ಲದೆ, ಹಲವಾರು ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಗಿದೆ" ಎಂದು ಸಚಿವರು ತಿಳಿಸಿದರು.
ಈ ಸಭೆಯಲ್ಲಿ ಇಲಾಖೆಯ ನಿರ್ದೇಶಕರಾದ ಶ್ರೀಮತಿ ಅನುರಾಧ, ಜಂಟಿ ನಿರ್ದೇಶಕರಾದ ಶ್ರೀಮತಿ ಉಷಾ, ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆಯಾದ ಶ್ರೀಮತಿ ಎಸ್. ವರಲಕ್ಷ್ಮಿ ಹಾಗೂ ಇತರೆ ಸದಸ್ಯರು ಭಾಗವಹಿಸಿದ್ದರು.
ಇದೇ ವೇಳೆ ಮರಳು ನೀತಿಯನ್ನು ಸರಳೀಕರಣಗೊಳಿಸುವ ಕುರಿತು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳೊಂದಿಗೆ ಮಹತ್ವದ ಸಭೆಯನ್ನು ಜರುಗಿಸಲಾಯಿತು, ಸಭೆಯಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿ ಶ್ರೀ ಪಂಕಜ್ ಕುಮಾರ್ ಪಾಂಡೆ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ