ಮೈತ್ರಿಗೆ ಕಾಂಗ್ರೆಸ್ ಯೋಗ್ಯ ಪಕ್ಷವಲ್ಲ: ಹೆಚ್.ಡಿ. ಕುಮಾರಸ್ವಾಮಿ

ಹೆಚ್.ಡಿ. ಕುಮಾರಸ್ವಾಮಿ

ಹೆಚ್.ಡಿ. ಕುಮಾರಸ್ವಾಮಿ

ನನ್ನ ನೇತೃತ್ವದ ಮೈತ್ರಿ ಸರ್ಕಾರವನ್ನು ಕೆಡವಿದ, ಮಹಾರಾಷ್ಟ್ರ ಸರ್ಕಾರ ಅಲುಗಾಡಿಸುತ್ತಿರುವ ಹಾಗೂ ರಾಜಸ್ಥಾನದಲ್ಲಿ ಬೆಂಬಲ ನೀಡಿದ ಬಿಎಸ್ಪಿ ಶಾಸಕರನ್ನೇ ಸೆಳೆದ ಕಾಂಗ್ರೆಸ್ ಪಕ್ಷ ಮೈತ್ರಿಗೆ ಯೋಗ್ಯವಲ್ಲ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.

  • Share this:

ಬೆಂಗಳೂರು(ಅ. 01): ಕಾಂಗ್ರೆಸ್ ಪಕ್ಷ ಮೈತ್ರಿಗೆ ಅರ್ಹವಲ್ಲ. ಮೈತ್ರಿ ಧರ್ಮವನ್ನು ಒಪ್ಪದ ಆ ಪಕ್ಷದ ಜೊತೆ ಎಂದೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು. ಉಪಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಇಲ್ಲ ಎಂದು ಕೆಲ ಕಾಂಗ್ರೆಸ್ ನಾಯಕರು ನೀಡಿದ್ದ ಹೇಳಿಕೆಗೆ ಕುಮಾರಸ್ವಾಮಿ ಟ್ವಿಟ್ಟರ್​ನಲ್ಲಿ ಪ್ರತಿಕ್ರಿಯಿಸುತ್ತಾ ಈ ರೀತಿ ತಿರುಗೇಟು ನೀಡಿದರು. ರಾಜ್ಯದಲ್ಲಿ ನನ್ನ ನೇತೃತ್ವದ ಮೈತ್ರಿ ಸರ್ಕಾರವನ್ನು ಕೆಡವಿದ, ಮಹಾರಾಷ್ಟ್ರದಲ್ಲಿ ಸರ್ಕಾರವನ್ನು ದಿನವೂ ಅಲುಗಾಡಿಸುತ್ತಿರುವ ಹಾಗೂ ರಾಜಸ್ಥಾನದಲ್ಲಿ ಕಾಂಗ್ರೆಸ್​ಗೆ ಬೆಂಬಲ ನೀಡಿದ್ದ ಬಿಎಸ್​ಪಿ ಶಾಸಕರನ್ನೇ ಸೆಳೆದ ಕಾಂಗ್ರೆಸ್ ಪಕ್ಷ ಮೈತ್ರಿಗೆ ಯೋಗ್ಯವಲ್ಲ ಎಂದು ಹೆಚ್​ಡಿಕೆ ವ್ಯಂಗ್ಯವಾಡಿದ್ದಾರೆ.


“ಜೆಡಿಎಸ್ ಜೊತೆ ಮೈತ್ರಿ ಇಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿರುವ ಪತ್ರಿಕೆ, ವಾಹಿನಿಗಳ ವರದಿಯನ್ನು ಗಮನಿಸಿದೆ. ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಪ್ರಸ್ತಾವವನ್ನು ಜೆಡಿಎಸ್​ನಿಂದ ಮುಂದಿಟ್ಟಿರುವುದಾದರೂ ಯಾರು? 2018ರ ಫಲಿತಾಂಶದ ಬಳಿಕ ದೇವೇಗೌಡರ ಮನೆ ಬಾಗಿಲಿಗೆ ಕಾಂಗ್ರೆಸ್ ಬಂದಂತೆ ನಾವ್ಯಾರೂ ಕಾಂಗ್ರೆಸ್ ಬಾಗಿಲಿಗೆ ಹೋಗಿಲ್ಲ.


ಇದನ್ನೂ ಓದಿ: ಉಪ ಚುನಾವಣೆಯಲ್ಲಿ ಮೈತ್ರಿಯ ಪ್ರಶ್ನೆಯೇ ಇಲ್ಲ; ಹೆಚ್​.ಡಿ. ಕುಮಾರಸ್ವಾಮಿ ಸ್ಪಷ್ಟನೆ


“ಕಾಂಗ್ರೆಸ್ ಮೈತ್ರಿಗೆ ಯೋಗ್ಯ ಪಕ್ಷವಲ್ಲ. ರಾಜ್ಯದಲ್ಲಿ ನನ್ನ ನೇತೃತ್ವದ ಮೈತ್ರಿ ಸರ್ಕಾರ ಕೆಡವಿದ, ರಾಜಸ್ಥಾನದಲ್ಲಿ ಬೆಂಬಲ ನೀಡಿದ್ದ BSP ಶಾಸಕರನ್ನೇ ಸೆಳೆದ, ಮಹಾರಾಷ್ಟ್ರದಲ್ಲಿ ಸರ್ಕಾರವನ್ನು ದಿನವೂ ಅಲುಗಾಡಿಸುತ್ತಿರುವ ಅದರ ವರ್ತನೆಯು ಮೈತ್ರಿಗೆ ತಾನು ಯೋಗ್ಯವಲ್ಲ ಎಂಬ ಸಂದೇಶ ನೀಡಿದೆ. ಅಷ್ಟಕ್ಕೂ ಕಾಂಗ್ರೆಸ್ ಮಿತ್ರ ಪಕ್ಷಗಳು ಬೇರೆಯೇ ಇವೆ.


“ಮೈತ್ರಿಧರ್ಮವನ್ನೂ ಧರ್ಮವೆಂದು ಒಪ್ಪದ ಕಾಂಗ್ರೆಸ್ ಜೊತೆ ಎಂದೂ ಮೈತ್ರಿ ಇಲ್ಲ. ಮೈತ್ರಿ ವಿಷಯವಾಗಿ ಕಾಂಗ್ರೆಸ್ ಎದುರು ಜೆಡಿಎಸ್​ನ ಅವಕಾಶವನ್ನು ಯಾರೂ ಮುಂದಿಡುವುದೂ ಬೇಡ. ರಾಜ್ಯದಲ್ಲಿ ಮೈತ್ರಿ ಎಂದರೆ ಕಾಂಗ್ರೆಸ್-ಜೆಡಿಎಸ್ ಎಂಬ ಭಾವನೆಯೂ ಬೇಡ. ಹಾಗೇ, ಜೆಡಿಎಸ್, ದೇವೇಗೌಡರ ಹೆಸರು ಬಳಸಿ ಆ ಪಕ್ಷದ 'ನಾಯಕ'ರು ಲಾಭ ಮಾಡಿಕೊಳ್ಳುವುದೂ ಬೇಡ” ಎಂದು ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.







ಕಾಂಗ್ರೆಸ್ ಸಹವಾಸ ಮಾಡಿ ಮೈತ್ರಿ ಸರ್ಕಾರ ರಚಿಸಿ ತಪ್ಪು ಮಾಡಿದೆ ಎಂದು ಈ ಮುಂಚೆ ಕುಮಾರಸ್ವಾಮಿ ಅವರು ಹೇಳಿದ್ದು ಮಾಧ್ಯಮಗಳಲ್ಲಿ ವರದಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಐದು ವರ್ಷ ಸಿಎಂ ಆಗುವ ಆಫರ್ ಕೊಟ್ಟಿದ್ದರು. ತಾನು ಕಾಂಗ್ರೆಸ್ ಸಹವಾಸ ಮಾಡಿ ತಪ್ಪು ಮಾಡಿದೆ ಎಂದು ಜೆಡಿಎಸ್ ಮಾಜಿ ರಾಜ್ಯಾಧ್ಯಕ್ಷರು ಪಶ್ಚಾತಾಪ ಪಟ್ಟರೆನ್ನಲಾಗಿದೆ.


ಇದನ್ನೂ ಓದಿ: ಆರ್.ಆರ್. ನಗರ ಉಪಚುನಾವಣೆ: ಡಿಕೆ ರವಿ ಹೆಂಡತಿ ಕುಸುಮಾ ಸ್ಪರ್ಧೆ?

top videos


    ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಬೆಂಗಳೂರು ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಅವರು, ಅದು ಮುಗಿದಹೋದ ಅಧ್ಯಾಯವಾಗಿದೆ. ಮೈತ್ರಿ ಸರ್ಕಾರ ರಚನೆಯಾಗಿ ಈಗ ಮತ್ತೊಂದು ಸರ್ಕಾರ ಬಂದಿದೆ. ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪಕ್ಷದ ಹಿರಿಯ ನಾಯಕರು ಮಾತನಾಡುತ್ತಾರೆ. ಮುಗಿದ ವಿಚಾರದ ಬಗ್ಗೆ ಮಾತನಾಡಿ ಪ್ರಯೋಜನವಿಲ್ಲ. ಈಗ ಏನಿದ್ದರೂ ಎರಡು ಕ್ಷೇತ್ರಗಳ ಉಪಚುನಾವಣೆ ಕೆಲಸ ಇದೆ. ನಾನು ನಮ್ಮ ಅಭ್ಯರ್ಥಿ ಪರ ಕೆಲಸ ಮಾಡುತ್ತೇವೆ. ಅವರು ಅವರ ಅಭ್ಯರ್ಥಿ ಪರ ಕೆಲಸ ಮಾಡಲಿ ಎಂದರು.

    First published:

    ಸುದ್ದಿ 18ಕನ್ನಡ ಟ್ರೆಂಡಿಂಗ್

    ಮತ್ತಷ್ಟು ಓದು